ಸಿದ್ದು ಹೇಳಿಕೆಯನ್ನು ಪ್ರಶ್ನಿಸಿದ್ದಕ್ಕೆ ಮಾಧ್ಯಮಗಳ ಮೇಲೆ ಸಿಎಂ, ಡಿಸಿಎಂ, ಸಚಿವ ಗರಂ

Public TV
1 Min Read

ಚಿಕ್ಕಬಳ್ಳಾಪುರ: ಯಾವುದೇ ಸರ್ಕಾರ ಇದ್ದರೂ ಟೀಕಿಸುವ ಮೂಲಕ ಎಚ್ಚರಿಸುವ ಕೆಲಸವನ್ನು ಮಾಧ್ಯಮಗಳ ಮಾಡುತ್ತವೆ. ಆದರೆ ಇಂದು ಸಮ್ಮಿಶ್ರ ಸರ್ಕಾರವೇ ಮಾಧ್ಯಮಗಳ ಮೇಲೆ ಗೂಬೆ ಕೂರಿಸುತ್ತಿದೆ.

ಚಿಕ್ಕಬಳ್ಳಾಪುರದಲ್ಲಿ ಸಚಿವ ಶಿವಶಂಕರ್ ರೆಡ್ಡಿ, ಬೆಂಗಳೂರಿನಲ್ಲಿ ನಡೆದ ಕೆಂಪೇಗೌಡ ಜಯಂತಿಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಕೊಪ್ಪಳದಲ್ಲಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಮಾಧ್ಯಗಳ ವಿರುದ್ಧವೇ ವಾಗ್ದಾಳಿ ನಡೆಸಿ, ಮಾಧ್ಯಗಳು ತಪ್ಪು ಮಾಡುತ್ತಿವೆ ಎನ್ನುವಂತೆ ಬಿಂಬಿಸಿದರು.

ಶಾಂತಿವನದಲ್ಲಿ ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯ ಹೇಳಿಕೆಯಲ್ಲಿ ಯಾವುದೇ ವಿವಾದ ಇಲ್ಲ. ಆದರೆ ಮಾಧ್ಯಮಗಳು ಇದಕ್ಕೆ ಉಪ್ಪು-ಹುಳಿ ಹಾಕುವ ಕೆಲಸ ಮಾಡುತ್ತೀವೆ ಎಂದು ಕೃಷಿ ಸಚಿವ ಶಿವಶಂಕರ್ ರೆಡ್ಡಿ ಹೇಳಿದ್ದಾರೆ.

 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆಯೋಜಿಸಿದ್ದ ಕೆಂಪೇಗೌಡ ಜಯಂತಿಯಲ್ಲಿ ಸಿದ್ದರಾಮಯ್ಯ ಹಾಗೂ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಮರ್ಥಿಸಿಕೊಂಡು ಮಾತನಾಡಿದ ಅವರು, ಬಜೆಟ್ ನಲ್ಲಿ ಕಾಂಗ್ರೆಸ್ಸಿನ ಕಾರ್ಯಕ್ರಮಗಳನ್ನು ತೆಗೆದು ಹಾಕುವುದಾಗಿ ಎಲ್ಲಿಯೂ ಕುಮಾರಸ್ವಾಮಿ ಅವರು ಹೇಳಿಲ್ಲ. ಎರಡೂ ಪಕ್ಷಗಳ ಪ್ರಣಾಳಿಕೆಗಳಲ್ಲಿನ ಪ್ರಮುಖ ಯೋಜನೆಗಳನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ. ಸಮ್ಮಿಶ್ರ ಸರ್ಕಾರ ಬಜೆಟ್ ಮೂಲಕ ಎರಡು ಪಕ್ಷಗಳ ಹಿತಾಸಕ್ತಿಯನ್ನು ರಕ್ಷಿಸಲಿದೆ. ಇನ್ನೂ ಈ ಬಾರಿಯ ಬಜೆಟ್ ನಲ್ಲಿ ಶೇ 100 ಕ್ಕೆ 100 ರಷ್ಟು ಸಿಹಿ ಸುದ್ದಿ ಸಿಗಲಿದ್ದು, ರೈತರ ಸಾಲಮನ್ನಾ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ನಡೆದ ಕೆಂಪೇಗೌಡ ಜಯಂತಿಯಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಉತ್ತರ ಕರ್ನಾಟಕ ಅಭಿವೃದ್ಧಿಯನ್ನು ಸರ್ಕಾರ ಮರೆತಿದೆ ಅಂತಾ ಮಾಧ್ಯಮಗಳು ಸುದ್ದಿ ಮಾಡುತ್ತಿವೆ. ಆದರೆ ನಾವು ಎಲ್ಲ ಭಾಗಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಇನ್ನು ಕೊಪ್ಪಳದ ಕಾರ್ಯಕ್ರಮದಲ್ಲಿ ಖರ್ಗೆ-ಸಿದ್ದರಾಮಯ್ಯ ಭೇಟಿ ಬಗ್ಗೆ ಕೇಳಿದ್ದಕ್ಕೆ ಮಾಧ್ಯಮಗಳಿಗೆ ಏನಾಗಿದೆ ಅಂತಾ ಡಿಸಿಎಂ ಜಿ.ಪರಮೇಶ್ವರ್ ಅವರು ಗರಂ ಆದರು.

Share This Article
Leave a Comment

Leave a Reply

Your email address will not be published. Required fields are marked *