ಜೆಡಿಎಸ್‍ನಿಂದ ಅಂಬಿ ಕಣಕ್ಕಿಳಿದರೆ, ಕಾಂಗ್ರೆಸ್ಸಿನಿಂದ ನಾನೇ ಸ್ಪರ್ಧಿಸುವೆ: ಎಂಎಲ್‍ಸಿ ಸಿ.ಎಂ.ಲಿಂಗಪ್ಪ

Public TV
1 Min Read

ರಾಮನಗರ: ಉಪ ಚುನಾವಣೆಯಲ್ಲಿ ರಾಮನಗರ ಮತ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಅಂಬರೀಶ್ ಕಣಕ್ಕೆ ಇಳಿದರೆ ಕಾಂಗ್ರೆಸ್ಸಿನಿಂದ ನಾನೇ ಸ್ಪರ್ಧಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಹೇಳಿದ್ದಾರೆ.

ರಾಮನಗರ ತಾಲೂಕು ಪಂಚಾಯತ್ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ರದ್ದು ಮಾಡಿದ ಹಿನ್ನೆಲೆಯಲ್ಲಿ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜೆಡಿಎಸ್‍ನೊಂದಿಗೆ ಹೊಂದಾಣಿಕೆ ಮಾಡಿಕೊಂಡರೆ ನಾನು ಪ್ರಬಲವಾಗಿ ವಿರೋಧ ಮಾಡುತ್ತೇನೆ. ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಇಕ್ಬಾಲ್ ಹುಸೇನ್ ಮತ್ತೇ ಸ್ಪರ್ಧಿಸುತ್ತಾರೆ. ಅವರು ಕಣಕ್ಕೆ ಇಳಿಯುವುದಿಲ್ಲ ಅಂತಾ ತಿಳಿಸಿದರೆ ನಾನೇ ಸ್ಪರ್ಧಿಸ್ತೇನೆ ಎಂದು ತಮ್ಮ ಇಂಗಿತವನ್ನು ವ್ಯಕ್ತಪಡಿಸಿದರು.

ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಅಭ್ಯರ್ಥಿಯಾಗಿದ್ದು, ಜೆಡಿಎಸ್‍ಗೆ ಕ್ಷೇತ್ರ ಬಿಟ್ಟುಕೊಟ್ಟರೆ ಪಕ್ಷದ ವಿರುದ್ಧ ಸಮರ ಸಾರಲು ಸಿದ್ಧನಿರುವೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಜಿಲ್ಲೆಯ ಕಾರ್ಯಕರ್ತರಿಂದ ವಿರೋಧವಿತ್ತು. ಅಲ್ಲದೇ ಮೈತ್ರಿಗೆ ನಮ್ಮ ಆತ್ಮಸಾಕ್ಷಿಯೂ ಒಪ್ಪುವುದಿಲ್ಲ ಎಂದಿದ್ದರು. ಸರ್ಕಾರದ ಒತ್ತಡಕ್ಕೆ ಮಣಿದು ಅಧಿಕಾರಿಗಳು ತಾಲೂಕು ಪಂಚಾಯತ್ ಚುನಾವಣೆಯನ್ನು ರದ್ದು ಮಾಡಲಾಗಿದೆ. ಅಧಿಕಾರಿಗಳು ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಹೇಳಿದಂತೆ ಕೇಳುತ್ತಿದ್ದಾರೆ ಎಂದು ಆರೋಪಿಸಿದರು.

ಜಿಲ್ಲೆಯ ಕಾಂಗ್ರೆಸ್ ಪ್ರಭಾವಿ ಮುಖಂಡ, ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಲು ಕುಮಾರಸ್ವಾಮಿ ನಿವಾಸಕ್ಕೆ ಹೋಗಬೇಕು. ನಾನು ಕಾಂಗ್ರೆಸ್ಸಿನ ನಿಷ್ಠಾವಂತ ನಾಯಕ, ಹೀಗಾಗಿ ಅಲ್ಲಿಗೆ ಹೋಗುವುದಿಲ್ಲ ಎಂದು ವ್ಯಂಗ್ಯವಾಡಿದ ಅವರು, ಅಧಿಕಾರಿಗಳ ವರ್ತನೆ ಹೀಗೆ ಮುಂದುವರೆದರೆ ಪ್ರತಿಭಟಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *