ಬಿಎಸ್‍ವೈಗೆ 10 ಪ್ರಶ್ನೆ ಕೇಳಿದ ಸಿಎಂ ಸಿದ್ದರಾಮಯ್ಯ

Public TV
2 Min Read

ಬೆಂಗಳೂರು: ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ತನ್ನ ಅಧಿಕಾರಿಕಾರದ ಅವಧಿಯಲ್ಲಿ ಶೂನ್ಯ ಕೊಡುಗೆ ನೀಡಿದ್ದು, ರಾಜ್ಯದಲ್ಲಿ ಭ್ರಷ್ಟಚಾರಕ್ಕೆ ಕಾರಣವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕರ್ನಾಟಕವನ್ನು ಅತ್ಯಂತ ಭ್ರಷ್ಟ ರಾಜ್ಯವಾಗಿಸಿದ್ದ, ಬೆಂಗಳೂರು ನಗರವನ್ನು ಗಾರ್ಬೇಜ್ ಸಿಟಿ ಎಂದು ಕುಖ್ಯಾತಿ ಗಳಿಸುವಂತೆ ಮಾಡಿದ ಹಾಗೂ ರೈತರ ಮೇಲೆ ಗೋಲಿಬಾರ್ ಗೆ ಆದೇಶಿಸಿದವರೊಬ್ಬರು ಈ ರೀತಿ ದೊಡ್ಡ ದೊಡ್ಡ ಮಾತುಗಳನ್ನಾಡುತ್ತಿರುವುದು ವಿಪರ್ಯಾಸ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರ ಹೆಸರು ಹೇಳದೆ ಟೀಕಿಸಿದ್ದಾರೆ. ಅಲ್ಲದೇ ಆಧಾರ ರಹಿತ ಆರೋಪಗಳ ಹೊರತಾಗಿ ಕರ್ನಾಟಕದ 6.5 ಕೋಟಿ ಜನತೆಗೆ ನೀಡಲು ನಿಮ್ಮ ಬಳಿ ಏನಿದೆ ಎಂದು ಪ್ರಶ್ನಿಸಿದ್ದಾರೆ.

ಇದರೊಂದಿಗೆ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಚರ್ಚಿಸಬಹುದಾದರೆ ಈ ಪ್ರಶ್ನೆಗಳಿಗೆ ಉತ್ತರಿಸಿ ಎಂದು 10 ಪ್ರಶ್ನೆಗಳನ್ನು ನೀಡಿ ಸವಾಲು ಎಸೆದಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಕೇಳಿರುವ 10 ಪ್ರಶ್ನೆಗಳು ಇಂತಿದೆ:

1. ಕನ್ನಡಿಗರ ಆಕಾಂಕ್ಷೆಯಂತೆ ನಾಡಿಗೆ ತನ್ನದೇ ಆದ ಪ್ರಮುಖ ಗುರುತು ಒದಗಿಸುವ ನಾಡ ಧ್ವಜ ಹೊಂದಲು ನೀವು ಬೆಂಬಲಿಸುತ್ತೀರಾ?

2. ಸ್ವತಂತ್ರ ಧರ್ಮಕ್ಕಾಗಿ ಬಸವೇಶ್ವರ ಅನುಯಾಯಿಗಳ ಆಕಾಂಕ್ಷೆಗಳನ್ನು ನೀವು ಬೆಂಬಲಿಸುತ್ತೀರಾ?

3. ಮಹದಾಯಿ ಸಮಸ್ಯೆಯನ್ನು ಶೀಘ್ರ ಪರಿಹರಿಸಲು ಪ್ರಧಾನಮಂತ್ರಿಯವರ ಮಧ್ಯಸ್ಥಿಕೆಯನ್ನು ನೀವು ಬೆಂಬಲಿಸುತ್ತೀರಾ?

4. ಕೇಂದ್ರ ಸರ್ಕಾರವು ವಾಣಿಜ್ಯ ಬ್ಯಾಂಕುಗಳಲ್ಲಿರುವ ರಾಜ್ಯದ ರೈತರ ಸಾಲ ಮನ್ನಾ ಮಾಡಬೇಕು ಎನ್ನುವುದನ್ನು ನೀವು ಬೆಂಬಲಿಸುತ್ತೀರಾ?

5. ಮಹಾರಾಷ್ಟ್ರದ ಯಾವತ್ಮಲ್ ನಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಮತ್ತು ಅದಕ್ಕೆ ಪ್ರಧಾನಮಂತ್ರಿಗಳೇ ಹೊಣೆ ಎಂದು ದೂರಿದ್ದ. ಇದರ ಬಗ್ಗೆ ಬಿಜೆಪಿ ಸರ್ಕಾರ ಏನು ಮಾಡುತ್ತಿದೆ? ರೈತರ ಆತ್ಮಹತ್ಯೆಗಳಿಗೆ ನೀವು ನಮ್ಮನ್ನು ದೂಷಿಸುತ್ತೀರ ಎಂದಾದರೆ ಈ ವಿಚಾರದಲ್ಲಿ ನೀವೇನು ಮಾಡುವಿರಿ?

6. ನೀವು ನೂರಾರು ಎಕರೆಗಳಷ್ಟು ಬಿಡಿಎ ಭೂಮಿಯನ್ನು ಡಿನೋಟಿಫೈ ಮಾಡಿದ್ದರಿಂದ ಹಲವಾರು ಮಂದಿ ಮನೆಗಳನ್ನು ಕಳೆದುಕೊಂಡಿದ್ದಾರೆ. ನೀವು ಏಕೆ ಹಾಗೆ ಮಾಡಿದ್ದು? ಬೆಂಗಳೂರಿನವರು ಮತ್ತೆ ನಿಮ್ಮನ್ನು ಹೇಗೆ ನಂಬುತ್ತಾರೆ?

7. ರೆಡ್ಡಿ ಸಹೋದರರು ರೂ.25,000 ಕೋಟಿ ಖನಿಜ ಸಂಪತ್ತನ್ನು ಲೂಟಿ ಮಾಡಲು ನೀವು ಬಿಟ್ಟದ್ದು ಏಕೆ? ಆ ಸಂದರ್ಭದಲ್ಲಿ ನೀವೇಕೆ ಅಸಹಾಯಕರಾದದ್ದು?

8. ನಾವು ಅನ್ನಭಾಗ್ಯ ಯೋಜನೆಯಡಿ ಸುಮಾರು 4 ಕೋಟಿಗೂ ಅಧಿಕ ಜನರಿಗೆ ಮಾಸಿಕ 7 ಕೆ.ಜಿ ಉಚಿತ ಅಕ್ಕಿ ಹಾಗೂ 1 ಕೋಟಿ ಮಕ್ಕಳಿಗೆ ಹಾಲು ನೀಡುತ್ತಿದ್ದೇವೆ. ನೀವು ಇದಕ್ಕಿಂತ ಭಿನ್ನವಾಗಿ ಏನು ಮಾಡುತ್ತೀರಿ?

9. ಬಿಜೆಪಿಯ ಮೂರು ಮುಖ್ಯಮಂತ್ರಿಗಳು 5 ವರ್ಷಗಳಲ್ಲಿ 6 ಕಿ.ಮೀ ಮೆಟ್ರೋ ಮಾರ್ಗವನ್ನು ನಿರ್ಮಿಸಿದ್ದರು. ನಾವು 5 ವರ್ಷಗಳಲ್ಲಿ 36 ಕಿ.ಮೀ ಮೆಟ್ರೋ ಮಾರ್ಗವನ್ನು ನಿರ್ಮಿಸಿದ್ದೇವೆ. ಹಂತ-2 ಅನ್ನು ನಿರ್ಮಿಸುತ್ತಿದ್ದೇವೆ ಮತ್ತು ಹಂತ-3 ಅನ್ನು ಸಿದ್ಧಪಡಿಸುತ್ತಿದ್ದೇವೆ.

10. ನಾವು ಭಾರತ ಸರ್ಕಾರದಿಂದ ಉಪನಗರ ರೈಲು ಯೋಜನೆಗೆ ಅನುದಾನ ದೊರೆಯುವಂತೆ ಮಾಡಿದ್ದೇವೆ, ಎಲೆಕ್ಟ್ರಿಕ್ ಬಸ್ ಗಳನ್ನು ಜಾರಿಗೊಳಿಸುತ್ತಿದ್ದೇವೆ, ಬಿಎಂಟಿಸಿ ಬಸ್ ಗಳ ಸಂಖ್ಯೆಯನ್ನು ಹೆಚ್ಚಿಸುತ್ತೇವೆ. ಸಂಚಾರ ದಟ್ಟಣೆ ನಿವಾರಣೆಗೆ ನಿಮ್ಮ ಪ್ರಕಾರ ಪರಿಹಾರವೇನು?

ಈ ಪ್ರಶ್ನೆಗೆ ರಾಜ್ಯದ ಮತದಾರರೊಂದಿಗೆ ನಿಮ್ಮ ದೂರದೃಷ್ಟಿಯ ಬಗ್ಗೆ ಮಾತನಾಡಿ ಎಂದು ಸಲಹೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ಆಧಾರ ರಹಿತ ಆರೋಪ ಮಾಡುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *