ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯ ಪ್ರವಾಸದ ಬೆನ್ನಲ್ಲೇ ಹೊತ್ತಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಕರೆದು ಶಾಕ್ ಕೊಟ್ಟಿದ್ದಾರೆ.
ಕಳಸಾ ಬಂಡೂರಿ ಯೋಜನೆ ಮತ್ತು ಕಾವೇರಿ ನೀರಿನ ವಿಷಯಕ್ಕೆ ಸಂಬಂಧಪಟ್ಟಂತೆ ಇಂದು ವಿರೋಧ ಪಕ್ಷಗಳ ಮುಖಂಡರು ಹಾಗು ಆಯಾ ಜಿಲ್ಲೆಗಳ ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸಂಸದರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಮಹದಾಯಿ ಮತ್ತು ರಾಜ್ಯ ವಿಪತ್ತು ಪರಿಹಾರ ನಿಧಿ ಹಂಚಿಕೆ, ಕಾವೇರಿ ನೀರಿನ ವಿಷಯ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ. ಮಹದಾಯಿ ವಿಚಾರಕ್ಕೆ ಸಂಬಂಧಪಟ್ಟಂತೆ ಗೋವಾ ಮುಖ್ಯಮಂತ್ರಿ ಹಾಗು ಗೋವಾ ಜಲಸಂಪನ್ಮೂಲ ಸಚಿವರು ನೀಡಿರುವ ಹೇಳಿಕೆಗಳು ಹಾಗೂ ಈ ಕುರಿತು ಮಧ್ಯಸ್ಥಿಕೆ ವಹಿಸಲು ಪ್ರಧಾನಿ ಮೋದಿಯವರು ಭೇಟಿಗೆ ಅವಕಾಶ ನೀಡದಿರುವುದು ಹೆಚ್ಚು ಚರ್ಚೆಯಾಗಲಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯ ಪ್ರವಾಸದಲ್ಲಿರುವ ಕಾರಣ ಸಿಎಂ ಸಭೆಯಲ್ಲಿ ಪಾಲ್ಗೊಳ್ಳುವ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ಸಿಎಂ ಸಭೆಗೆ ಗೈರಾದರೆ ಅದರ ಲಾಭ ಕಾಂಗ್ರೆಸ್ ಪಡೆದು ಬಿಜೆಪಿ ಪರ ವಿರೋಧಾಭಿಪ್ರಾಯ ರವಾನೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಅಂಶವನ್ನು ರಾಜ್ಯ ಬಿಜೆಪಿ ನಾಯಕರು ಅಮಿತ್ ಶಾ ಗಮನಕ್ಕೆ ತಂದಿದ್ದಾರೆ. ಹೀಗಾಗಿ ಇಂದು ಸಿಎಂ ಕರೆದಿರುವ ಎರಡೂ ಸಭೆಗಳಲ್ಲಿ ಪಾಲ್ಗೊಳ್ಳುವಂತೆ ಅಮಿತ್ ಶಾ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.