ಡಿಕೆಶಿ ವಿದೇಶದಲ್ಲಿರುವಾಗಲೇ ಆಪ್ತ ಸಚಿವರೊಂದಿಗೆ ಸಿಎಂ ಡಿನ್ನರ್ ಮೀಟಿಂಗ್!

Public TV
1 Min Read

– ಪವರ್ ಶೇರಿಂಗ್, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ಚರ್ಚೆ?

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಡಿನ್ನರ್ ಮೀಟಿಂಗ್ ಸಂಚಲನ ಮೂಡಿಸಿದೆ. ಮೂರು ಅಜೆಂಡಾಗಳೊಂದಿಗೆ ಬೆಳಗಾವಿಯಲ್ಲಿ ಆಪ್ತ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ.

ಅತ್ತ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸದಸ್ಯರ ಜೊತೆ ವಿದೇಶದಲ್ಲಿ ಪ್ರವಾಸದಲ್ಲಿದ್ದಾರೆ. ಈ ಹೊತ್ತಿನಲ್ಲೇ ಇತ್ತ ಸಿದ್ದರಾಮಯ್ಯ ಬಣದಿಂದ ಡಿನ್ನರ್ ಮೀಟಿಂಗ್ ನಡೆದಿರುವುದು ಕಾಂಗ್ರೆಸ್ ರಾಜಕೀಯ ಪಡಸಾಲೆಯಲ್ಲಿ ಕುತೂಹಲ ಮೂಡಿಸಿದೆ.

ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. ಗೃಹ ಸಚಿವ ಪರಮೇಶ್ವರ್, ಸಚಿವ ಹೆಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ ಪಾಲ್ಗೊಂಡಿದ್ದರು.

ಬಜೆಟ್‌ಗೂ ಮುನ್ನವೇ ಸಂಪುಟ ಪುನಾರಚನೆ ಗುಸುಗುಸು ಕೇಳಿಬಂದಿದೆ. ಈ ಬೆನ್ನಲ್ಲೇ ಎರಡು ವಿಚಾರಗಳ ಬಗ್ಗೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ. ಮುಂದಿನ ರಾಜಕೀಯ ಬದಲಾವಣೆಗಳ ಬಗ್ಗೆ ಡಿನ್ನರ್ ಪಾಲಿಟಿಕ್ಸ್ನಲ್ಲಿ ಭರ್ಜರಿ ಚರ್ಚೆ ನಡೆದಿದೆ ಎನ್ನಲಾಗಿದೆ.

ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ಪವರ್ ಶೇರಿಂಗ್ ವಿಚಾರ, ಈ ಮೂರು ವಿಚಾರಗಳ ಬಗ್ಗೆ ಆಪ್ತ ಸಚಿವರ ಜೊತೆ ಸಿಎಂ ಕ್ಲೋಸ್ ಡೋರ್ ಮೀಟಿಂಗ್ ನಡೆಸಿದ್ದಾರೆನ್ನಲಾಗಿದೆ.

ಸಚಿವ ಸಂಪುಟ ಪುನಾರಚನೆ ಆಗಬೇಕಾ ಬೇಡ್ವಾ? ವೈಯಕ್ತಿಕವಾಗಿ ಸಂಪುಟ ಪುನಾರಚನೆ ಇಷ್ಟವಿಲ್ಲದಿದ್ದರೂ ಹೈಕಮಾಂಡ್ ಸೂಚನೆ ನೀಡಿದರೆ ಏನು ಎಂಬ ಬಗ್ಗೆ ಸಿಎಂ ಚರ್ಚೆ ನಡೆಸಿದ್ದಾರೆ. ಸಂಪುಟ ಪುನಾರಚನೆ ಅನಿವಾರ್ಯ ಆದರೆ ಹೇಗಿರಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆದಿರುವ ಸಾಧ್ಯತೆ ಇದೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರ ಪ್ರಮುಖವಾಗುತ್ತೆ. ಹೈಕಮಾಂಡ್ ಬದಲಾವಣೆಗೆ ಒಪ್ಪಿದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ ಹೇಗಿರಲಿದೆ ಎಂಬುದರ ಬಗ್ಗೆಯೂ ಡಿನ್ನರ್ ಮೀಟಿಂಗ್‌ನಲ್ಲಿ ಚರ್ಚೆ ಆಗಿದೆ ಎಂಬ ಮಾಹಿತಿ ಇದೆ. ಪವರ್ ಶೇರಿಂಗ್ ವಿಚಾರದಲ್ಲಿ ಸಿಎಂ ಸೈಲೆಂಟ್ ಗೇಮ್ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.

Share This Article