ರಾಷ್ಟ್ರಪತಿ ಮುರ್ಮುಗೆ ಏಕವಚನ ಬಳಕೆ: ತಮ್ಮ ‌ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಸಿಎಂ

Public TV
2 Min Read

– ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಭೋದಿಸಿದೆ ಎಂದ ಸಿದ್ದರಾಮಯ್ಯ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ಏಕವಚನ ಬಳಕೆ ಮಾಡಿದ್ದಕ್ಕೆ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಸಿದ್ದರಾಮಯ್ಯ, ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ ಬಿಜೆಪಿ ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು. ಇದನ್ನೂ ಓದಿ: ರಾಷ್ಟ್ರಪತಿಗೆ ತುಚ್ಛವಾಗಿ ಸಂಬೋಧಿಸಿದ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ವಜಾ ಮಾಡಿ: ಹೆಚ್‍ಡಿಕೆ ಆಗ್ರಹ

ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ‌ ಸಂಭೋದಿಸಿದೆ.

ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡಾ ಏಕವಚನದಲ್ಲಿ ಸಂಭೋದಿಸುವುದು ರೂಢಿ. ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಆಗಿದ್ದೇನು?
ರಾಷ್ಟ್ರಪತಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನ ಬಳಕೆ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಸಿಎಂ ಹೇಳಿಕೆಗೆ ವಿಪಕ್ಷ ನಾಯಕರು ಟೀಕಾಪ್ರಹಾರ ನಡೆಸಿದ್ದರು. ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ವಜಾಗೊಳಿಸಬೇಕು ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಟ್ವೀಟ್‌ ಮಾಡಿ ಅಸಮಾಧಾನ ಹೊರಹಾಕಿದ್ದರು. ಇದನ್ನೂ ಓದಿ: ಹೆಚ್‍ಡಿಕೆ ಸಹವಾಸ ಮಾಡಿದವರು ಉದ್ಧಾರ ಆದ ಇತಿಹಾಸವಿಲ್ಲ: ವೀರಪ್ಪ ಮೊಯ್ಲಿ

ಬಳಿಕ ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಇದು ಬಾಯಿ ತಪ್ಪಿ ಆಡಿರುವ ಮಾತಿದು. ಇದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

Share This Article