ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು: ಕಾಂಗ್ರೆಸ್ ನಾಯಕ ಕೆ.ಬಿ.ಕೋಳಿವಾಡ

Public TV
1 Min Read

ಬೆಂಗಳೂರು: ಮುಡಾ ಹಗರಣ ಸಂಬಂಧ ಹೈಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ಈಗ ಆರೋಪಿ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಕ್ಷದ ಒಳಗಡೆಯೂ ರಾಜೀನಾಮೆಗೆ ಆಗ್ರಹ ವ್ಯಕ್ತವಾಗಿದೆ. ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಕೆ.ಬಿ.ಕೋಳಿವಾಡ (K.B.Koliwad) ಒತ್ತಾಯಿಸಿದರು.

ಬೇರೆ ಬೇರೆ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಅಲ್ಲೂ ಸಿಎಂ ವಿಚಾರ ಪ್ರಸ್ತಾಪಿಸಿ ವಿಪಕ್ಷಗಳು ಮಾತನಾಡುತ್ತಿವೆ. ಆದ್ದರಿಂದ ಪಕ್ಷಕ್ಕೆ ಮುಜುಗರ ಆಗುತ್ತಿದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddadamaiah), ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಸಲಹೆ ನೀಡಿದರು.

ತನಿಖೆ ಎದುರಿಸಿ ಸಿಎಂ ನಿಷ್ಕಳಂಕಿತರು ಎಂಬುದು ಸಾಬೀತಾದ ಮೇಲೆ ಮತ್ತೆ ಅವರೇ ಮುಖ್ಯಮಂತ್ರಿ ಆಗಲಿ. ಸಿಎಂ ರಾಜೀನಾಮೆ ಕೊಡಲ್ಲ ಎನ್ನುತ್ತಿರುವುದು ಅವರ ಅಭಿಪ್ರಾಯ. ಅವರು ರಾಜೀನಾಮೆ ಕೊಡಬೇಕು ಎಂಬುದು ನಮ್ಮ ಅಭಿಪ್ರಾಯ ಎಂದು ತಿಳಿಸಿದರು.

ನನಗೂ ಸಿಎಂಗೂ ಹಿಂದೆ ಭಿನ್ನಾಭಿಪ್ರಾಯ ಇದ್ದರೂ ಈಗ ಆತ್ಮೀಯವಾಗಿ ಇದ್ದೇವೆ. ಆದರೂ ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಕಾರಣಕ್ಕೆ ಅವರು ರಾಜೀನಾಮೆ ಕೊಡಬೇಕು ಅನ್ನೋದು ನನ್ನ ಅಭಿಪ್ರಾಯ. ನನ್ನ ಜೊತೆ ಬೇರೆ ಯಾವ ನಾಯಕರು ಇಲ್ಲ. ನನ್ನ ವೈಯುಕ್ತಿಕ ಅಭಿಪ್ರಾಯ ನಾನು ಹೇಳುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯ ರಾಜೀನಾಮೆ ಕೊಡದಿದ್ದರೆ, ರಾಜೀನಾಮೆ ಕೇಳುವುದು ಹೈಕಮಾಂಡ್‌ಗೆ ಮುಂದೆ ಬಿಟ್ಟಿದ್ದು. ಈಗ ಅವರು ರಾಜೀನಾಮೆ ನೀಡಿ ತನಿಖೆ ಎದುರಿಸಿ ಆನಂತರ ತಪ್ಪಿಲ್ಲ ಅಂದರೆ ಅವರೆ ಮತ್ತೆ ಮುಖ್ಯಮಂತ್ರಿ ಆಗಲಿ ಎಂದು ಸಲಹೆ ನೀಡಿದರು.

Share This Article