ಸಿಎಂ ಬಿಎಸ್‍ವೈರನ್ನ ಭೇಟಿ ಮಾಡಿದ ‘ಕೈ’ ಮಾಜಿ ಶಾಸಕ ಕೆ.ಎನ್.ರಾಜಣ್ಣ

Public TV
1 Min Read

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿ, ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ಇಂದು ಸಿಎಂ ಬಿಎಸ್‍ವೈರನ್ನ ಭೇಟಿ ಮಾಡಿದ್ದರು.

ಜಿಲ್ಲಾಧಿಕಾರಿಗಳು ಸೇರಿದಂತೆ ಸಿಇಓಗಳ ಸಭೆಯಲ್ಲಿ ಭಾಗವಹಿಸಿದ್ದ ಬಿಎಸ್ ಯಡಿಯೂರಪ್ಪ ಅವರು, ಸಭೆ ನಡುವೆ ಬಿಡುವು ಮಾಡಿಕೊಂಡು ರಾಜಣ್ಣರನ್ನು ಭೇಟಿಯಾಗಲು ಬಂದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿದ್ದ ಸಭೆಯ ನಡುವೆ ಹೊರ ಬಂದು ಪಡಸಾಲೆಯಲ್ಲಿ ಸುಮಾರು 15 ನಿಮಿಷ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ರಾಜಣ್ಣ ಅವರು ತುಮಕೂರು ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ವಿಚಾರವಾಗಿ ಸಿಎಂ ಜೊತೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಈ ಮಾತುಕತೆ ವೇಳೆಯೇ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ನಾಗಲಾಂಬಿಕಾದೇವಿ ಅವರನ್ನು ಕರೆಸಿದ ಸಿಎಂ, ಅವರಿಂದ ಮಾಹಿತಿ ಸಂಗ್ರಹ ಮಾಡಿದರು. ಸಿಎಂ ಭೇಟಿ ಸಂದರ್ಭದಲ್ಲಿ ರಾಜಣ್ಣ ಅವರಿಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಸಾಥ್ ನೀಡಿದರು.

ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ರಾಜಣ್ಣ ಅವರು ತೆರಳಿದರು. ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ವಿಚಾರದಲ್ಲಿ ಸಿಎಂ ಜೊತೆ ಚರ್ಚೆ ಮಾಡಿದ್ದು, ಈ ಸಂಬಂಧ ಏನಾದರು ಬದಲಾವಣೆ ಆಗಲಿದೆಯಾ ಎಂಬ ಕುತೂಹಲ ಈ ಭೇಟಿಯಿಂದ ಮೂಡಿದೆ.

Share This Article
Leave a Comment

Leave a Reply

Your email address will not be published. Required fields are marked *