ಕೈ-ಜೆಡಿಎಸ್ ದೋಸ್ತಿ ಮುಂದುವರಿಯುತ್ತಾ?

Public TV
1 Min Read

ಬೆಂಗಳೂರು: ವಿಶ್ವಾಸ ಮತಯಾಚನೆಯಲ್ಲಿ ಸೋತ ನಂತರ ರಾಜ್ಯಪಾಲರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಕೊಡುವ ಮೂಲಕ 14 ತಿಂಗಳ ದೋಸ್ತಿ ಸರ್ಕಾರ ಮುಗಿದಿದೆ.

ಬಿಜೆಪಿಯನ್ನ ಅಧಿಕಾರದಿಂದ ದೂರವಿಡಲು ಅನಿವಾರ್ಯವಾಗಿ ಹುಟ್ಟಿಕೊಂಡ ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಮುಂದಿನ ಹಾದಿ ಏನು ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿಗೆ ಜೆಡಿಎಸ್ ಜೊತೆಗಿನ ಮೈತ್ರಿಯೇ ಕಾರಣ ಅನ್ನೋದು ಕಾಂಗ್ರೆಸ್ ನಾಯಕರ ಬಹಿರಂಗ ಆರೋಪವಾಗಿದೆ.

ಜೆಡಿಎಸ್ ಜೊತೆಗೆ ಹೊಂದಾಣಿಕೆ ಮುಂದುವರಿಸಿದರೆ ಪಕ್ಷಕ್ಕೆ ಭವಿಷ್ಯವೇ ಇಲ್ಲ. ಹೀಗಾಗಿ ಮೈತ್ರಿ ಮುರಿದುಕೊಳ್ಳುವುದೇ ಉತ್ತಮ ಎಂದು ಈ ಹಿಂದೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್‍ಗೆ ಎಚ್ಚರಿಸಿದ್ದರು. ಜೆಡಿಎಸ್-ಕಾಂಗ್ರೆಸ್ ನೇರ ಸ್ಪರ್ಧೆ ಇರುವ ಜಿಲ್ಲೆಗಳಲ್ಲಿ ಸ್ಥಳೀಯ ಮಟ್ಟದ ಮುಖಂಡರ ಜಗಳ್‍ಬಂಧಿ ಜೋರಾಗಿತ್ತು.

ಬಿಜೆಪಿಯ ಬಳಿಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಅತೀ ದೊಡ್ಡ ಪಕ್ಷವಾಗಿದ್ದು, ಅಧಿಕೃತ ವಿಪಕ್ಷ ಸ್ಥಾನ ಅದಕ್ಕೇ ದಕ್ಕಲಿದೆ. ಈ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟದ ಜೊತೆಗೆ ತಳಮಟ್ಟದಿಂದ ಪಕ್ಷ ಸಂಘಟನೆಗೂ ನೆರವಾಗಲಿದೆ ಅನ್ನೋದು ಕೈ ನಾಯಕರ ಲೆಕ್ಕಾಚಾರವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *