ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಕಾಂಗ್ರೆಸ್, ಜೆಡಿಎಸ್ ಅತೃಪ್ತರು: ಬಿಎಸ್‍ವೈ

Public TV
1 Min Read

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಅನೇಕ ಅತೃಪ್ತ ಮುಖಂಡರು, ಶಾಸಕರು ಬಿಜೆಪಿ ಸೇರಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್‍ನಲ್ಲಿ ಆಯೋಜಿಸಿದ್ದ ಯುವ ಮೋರ್ಚಾ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರನ್ನು ಪಕ್ಷಕ್ಕೆ ಸೆಳೆಯುವ ಮೂಲಕ ಪಕ್ಷದ ಬಲವನ್ನು ಹೆಚ್ಚಿಸಬೇಕು. ಅಲ್ಲದೇ ವಿರೋಧಪಕ್ಷ ಸ್ಥಾನದ ಜವಾಬ್ದಾರಿಯನ್ನು ಸಮರ್ಥವಾಗಿ ಬಿಜೆಪಿ ನಿರ್ವಹಿಸುತ್ತದೆ ಎಂದು ಹೇಳಿದ್ದಾರೆ.

ಜೆಡಿಎಸ್ ಕೊಟ್ಟಿರುವ ಸುಳ್ಳು ಭರವಸೆಗಳನ್ನು ಜನ ನಂಬಿದ್ದರು. ಈಗ ಎರಡು ಪಕ್ಷಗಳು ಖಾತೆ ಹಂಚಿಕೆಯಲ್ಲಿ ಬಿಕ್ಕಟ್ಟು ಎದುರಿಸುತ್ತಿದ್ದು, ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿದೆ. ಅಪವಿತ್ರ ಮೈತ್ರಿ ಸರ್ಕಾರದ ಆಡಳಿತವನ್ನು ಕಾದು ನೋಡುತ್ತೇವೆ. ಕೇವಲ 37 ಸ್ಥಾನ ಗಳಿಸಿದ್ದ ಜೆಡಿಎಸ್ ಜತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಪ್ರಜಾತಂತ್ರ ವ್ಯವಸ್ಥೆಯನ್ನೇ ಬುಡಮೇಲು ಮಾಡಿದೆ ಎಂದು ಆರೋಪಿಸಿದರು.

ಬಿಜೆಪಿಯನ್ನು ಆಡಳಿತದಿಂದ ದೂರವಿಡಲು, ಕಾಂಗ್ರೆಸ್ ಮುಂದಾಗಿತ್ತು. ನಾವು ಜೆಡಿಎಸ್ ಜೊತೆಗೆ ಮೈತ್ರಿಗೆ ಮುಂದಾಗುತ್ತೇವೆ ಎಂಬುದು ಕಾಂಗ್ರೆಸ್ ಕಲ್ಪನೆಯಾಗಿತ್ತು. ಆದರೆ 20:20 ಸಂದರ್ಭದಲ್ಲಿ ವಂಚನೆ ಮಾಡಿದ್ದ ಜೆಡಿಎಸ್ ಜೊತೆ ಮೈತ್ರಿಗೆ ಬಿಜೆಪಿ ಸಿದ್ಧವಿರಲಿಲ್ಲ ಎಂಬುದು ಕಾಂಗ್ರೆಸ್‍ಗೆ ಗೊತ್ತಿರಲಿಲ್ಲ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ಆಡಳಿತದಲ್ಲಿ ಘೋಷಣೆಯಾಗಿದ್ದ ಸಾಲ ಮನ್ನಾದ 8500 ಕೋಟಿ ರೂ. ಸಹಕಾರ ಬ್ಯಾಂಕಿಗಳಿಗೆ ಪಾವತಿಯಾಗಿಲ್ಲ. ಹೀಗಾಗಿ ರೈತರು ಹೊಸ ಸಾಲ ಪಡೆಯಲು ಕಷ್ಟವಾಗುತ್ತದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ರಾಜಕೀಯ ಆಟವನ್ನು ನೋಡುತ್ತ ಮೌನವಾಗಿದ್ದೇನೆ ಎಂದು ಬಿಎಸ್‍ವೈ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *