ಕರ್ನಾಟಕ, ಗೋವಾ ರಾಜಕೀಯ ಹೈಡ್ರಾಮ ಖಂಡಿಸಿ ಸೋನಿಯಾ, ರಾಹುಲ್ ಪ್ರತಿಭಟನೆ

Public TV
1 Min Read

– ಬಿಜೆಪಿ ವಿರುದ್ಧ ಸಂಸತ್ತಿನ ಮುಂದೆ ಕೈ ಸಂಸದರ ಪ್ರತಿಭಟನೆ

ನವದೆಹಲಿ: ಕರ್ನಾಟಕ ಹಾಗೂ ಗೋವಾದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮವನ್ನು ಖಂಡಿಸಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ಸಿನ ಈ ಪರಿಸ್ಥಿತಿಗೆ ಬಿಜೆಪಿಯೇ ಕಾರಣವೆಂದು ಆರೋಪಿಸಿ ಸಂಸತ್ತಿನ ಮುಂದೆ ಕೈ ಸಂಸದರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಈ ಪ್ರತಿಭಟನೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಆನಂದ್ ಶರ್ಮಾ ಸೇರಿದಂತೆ ಹಲವು ಕೈ ಸಂಸದರು ಭಾಗಿಯಾಗಿದ್ದರು. ಸಂಸತ್ತಿನ ಸಂಕೀರ್ಣದ ಮುಂದಿರುವ ಗಾಂಧೀಜಿ ಪುತ್ಥಳಿಯ ಎದುರು ಬಿಜೆಪಿ ವಿರುದ್ಧ ಘೋಷಣೆ ಕೂಗಿ, ಪ್ರಜಾಪ್ರಭುತ್ವವನ್ನು ಉಳಿಸಿ ಎಂದು ಫಲಕಗಳನ್ನು ಹಿಡಿದು ಕೈ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ರಾಜ್ಯದಲ್ಲಿ ಜೆಡಿಎಸ್- ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರವನ್ನು ಬೀಳಿಸಲು ಬಿಜೆಪಿ ಈ ತಂತ್ರಗಾರಿಕೆ ನಡೆಸುತ್ತಿದೆ. ಮೈತ್ರಿ ಪಕ್ಷಗಳ ಶಾಸಕರನ್ನು ರಾಜೀನಾಮೆ ನೀಡುವಂತೆ ಮಾಡಿ, ರಾಜ್ಯದಲ್ಲಿ ದೋಸ್ತಿ ಸರ್ಕಾರವನ್ನು ಕೆಡವುದು ಬಿಜೆಪಿಯ ಪ್ಲಾನ್. ಅಲ್ಲದೆ ಸರ್ಕಾರದ ಸಂಖ್ಯಾಬಲ ಕಡಿಮೆಯಾಗಿದೆ, ಹೀಗಾಗಿ ಸಿಎಂ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿದೆ ಎಂದು ಆರೋಪಿಸಲಾಯಿತು.

ಇನ್ನೊಂದೆಡೆ ಗೋವಾದಲ್ಲಿ ಕಾಂಗ್ರೆಸ್ ನಾಯಕರು ಕೈತಪ್ಪಿ ಹೋಗಿದ್ದಾರೆ. ಒಟ್ಟು 15 ಮಂದಿ ಶಾಸಕರಲ್ಲಿ 10 ಮಂದಿ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಎರಡೂ ರಾಜ್ಯದಲ್ಲಿ ಕಾಂಗ್ರೆಸ್ ಅತಂತ್ರ ಸ್ಥಿತಿ ತಲುಪಲು ಕೇಸರಿ ಪಕ್ಷವೇ ಕಾರಣ. ಅವರಿಂದಲೇ ನಮ್ಮ ಪಕ್ಷಕ್ಕೆ ಈ ಸ್ಥಿತಿ ಎದುರಾಗಿದೆ ಎಂದು ಕಿಡಿಕಾರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *