ಕಂಟೇನರ್ ಲಾರಿ, ಗ್ಯಾಸ್ ಟ್ಯಾಂಕರ್ ಡಿಕ್ಕಿ- ನಾಲ್ವರು ಸಜೀವ ದಹನ

Public TV
1 Min Read

ದಾವಣಗೆರೆ: ಕಂಟೇನರ್ ಲಾರಿ ಹಾಗೂ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದು ಇಬ್ಬರು ಚಾಲಕ ಹಾಗೂ ಕ್ಲೀನರ್ ಸೇರಿದಂತೆ ನಾಲ್ವರು ಸಜೀವ ದಹನವಾಗಿದ್ದಾರೆ.

ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಈ ಘಟನೆ ನಡೆದಿದ್ದು, ಹರಿಯಾಣ ರಾಜ್ಯಕ್ಕೆ ಸೇರಿದ ಗ್ಯಾಸ್ ಟ್ಯಾಂಕರ್ ಹಾಗೂ ಎದುರುಗಡೆಯಿಂದ ಬರುತ್ತಿದ್ದ ಟಯರ್ ಗಳನ್ನು ತುಂಬಿದ್ದ ಕಂಟೇನರ್ ಲಾರಿ ಡಿಕ್ಕಿ ಹೊಡೆದು ಬೆಂಕಿ ಕಾಣಿಸಿಕೊಂಡಿದೆ. ಗ್ಯಾಸ್ ಟ್ಯಾಂಕರ್ ನಲ್ಲಿದ್ದ ಇಬ್ಬರು ಸಜೀವ ದಹನವಾಗಿದ್ದು, ಮೃತದೇಹಗಳ ಗುರುತು ಪತ್ತೆಯಾಗಿಲ್ಲ. ಅಪಘಾತದ ಹಿನ್ನಲೆ ದಟ್ಟವಾದ ಬೆಂಕಿ ಹಾಗೂ ಹೊಗೆ ಕಾಣಿಸಿಕೊಂಡಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ವಾಹನಗಳು ಸಂಪೂರ್ಣ ಸ್ಥಗಿತಗೊಂಡಿದ್ದು, ಕಿಲೋಮೀಟರ್ ಗಟ್ಟಲೇ ವಾಹನಗಳು ನಿಂತಿದ್ದವು.

ಕಂಟೇನರ್ ಲಾರಿಯಲ್ಲಿದ್ದ ಇನ್ನಿಬ್ಬರು ಕೂಡ ಸಜೀವ ದಹನವಾಗಿರಬಹುದು ಎಂದು ಅಗ್ನಿಶಾಮಕ ಸಿಬ್ಬಂದಿ ಅನುಮಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕಂಟೇನರ್ ಲಾರಿ ಹಾಗೂ ಟ್ಯಾಂಕರ್ ನಲ್ಲಿ ಒಟ್ಟು 4 ಮಂದಿ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದ್ದು, ಟ್ಯಾಂಕರ್ ನಿಂದ ದಟ್ಟ ಹೊಗೆ ಬರುತ್ತಿದ್ದ ಹಿನ್ನೆಲೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸ್ಥಳಕ್ಕೆ ಜಗಳೂರು ಠಾಣಾ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *