ಭಾರತದಲ್ಲಿ ಕೊರೊನಾಗೆ ಕರ್ನಾಟಕದಲ್ಲಿ ಮೊದಲ ಬಲಿ

Public TV
2 Min Read

– ಕಲಬುರಗಿಯ ವೃದ್ಧನಿಗೆ ಸೋಂಕು ತಗಲಿದ್ದು ಖಚಿತ
– ಕೊನೆಗೂ ಬಂತು ಕೊರೊನಾ ಸೋಂಕಿನ ವರದಿ

ಕಲಬುರಗಿ: ಕಲಬುರಗಿಯ 76 ವರ್ಷದ ವೃದ್ಧ ಸಾವನ್ನಪ್ಪಿದ್ದು ಕೊರೊನಾ ವೈರಸ್‍ನಿಂದಲೇ ಎಂದು ಖಚಿತವಾಗಿದೆ. ಈ ಮೂಲಕ ಭಾರತದಲ್ಲಿ ಕೊರೊನಾ ಮೊದಲ ಬಲಿ ಪಡೆದಂತಾಗಿದೆ.

ಕಲಬುರಗಿ ವೃದ್ಧನ ಲ್ಯಾಬ್ ರಿಪೋರ್ಟ್ ಈಗಷ್ಟೇ ನಮ್ಮ ಕೈಸೇರಿದೆ. ವರದಿಯಲ್ಲಿ ಕೊರೊನಾ ವೈರಸ್‍ನಿಂದಲೇ ಸಾವನ್ನಪ್ಪಿದ್ದಾರೆ ಎನ್ನುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಪಬ್ಲಿಕ್ ಟಿವಿಗೆ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ವೃದ್ಧನ ಸಾವನ್ನು ಖಚಿತಪಡಿಸಿದ್ದಾರೆ.  ಕಲಬುರ್ಗಿಯಲ್ಲಿ ಮೊನ್ನೆ ಮೃತಪಟ್ಟ 76 ವರ್ಷದ ವೃದ್ಧರಿಗೆ ಕೊರೊನಾ ಸೋಂಕು ತಗಲಿದ್ದು ಖಚಿತವಾಗಿದೆ. ಇವರೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಗುರುತಿಸಿ ಪ್ರತ್ಯೇಕವಾಗಿರಿಸಿ ನಿಗಾವಹಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 154 ಮಂದಿ ಉದ್ಯೋಗಿಗಳಿರುವ ಕಚೇರಿಗೆ ಹಾಜರಾಗಿ ತೆರಳಿದ್ದ ಕೊರೊನಾ ಪೀಡಿತ

ಫೆಬ್ರವರಿ 29ರಂದು ಸೌದಿಯಿಂದ ಕಲಬುರಗಿ ನಗರಕ್ಕೆ ವೃದ್ಧ ಆಗಮಿಸಿದ್ದರು ಬಂದಿದ್ದರು. ಮಾರ್ಚ್ 5ರಂದು ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ವಿಶೇಷ ವಾರ್ಡ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ಇದನ್ನೂ ಓದಿ: ‘ಗೋಮೂತ್ರದಿಂದ ಕೊರೊನಾ ವಾಸಿ ಟ್ವೀಟ್’- ಪೊಲೀಸ್ ಆಯುಕ್ತರಿಗೆ ಶ್ರೀರಾಮಲು ದೂರು

ಸಿದ್ದಿಕಿ ಅವರ ಗಂಟಲು ದ್ರವ ಸಂಗ್ರಹಿಸಿ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆ ಲ್ಯಾಬ್‍ಗೆ ಕಳಿಸಲಾಗಿತ್ತು. ಆದರೆ ವರದಿಗೂ ಮುನ್ನವೇ ಹೆಚ್ಚಿನ ಚಿಕಿತ್ಸೆಗಾಗಿ ಕುಟುಂಬಸ್ಥರು ಅವರನ್ನು ಹೈದರಾಬಾದ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದರು. ವೃದ್ಧ ಸಾವನ್ನಪ್ಪಿರುವ ಬೆನ್ನಲ್ಲೇ ಅಧಿಕಾರಿಗಳು ಕುಟುಂಬಸ್ಥರ ಆರೋಗ್ಯದ ಮೇಲೆ ನಿಗಾ ಇರಿಸಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ.

ಕೊರೊನಾ ವೈರಸ್‍ನಿಂದ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ಮುಗಿಯುವವರೆಗೂ ಕಲಬುರಗಿ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಶರಣಬಸಪ್ಪ ಕ್ಯಾತನಾಳ ಹಾಗೂ ಅವರ ತಂಡ ಉಸ್ತುವಾರಿ ವಹಿಸಿಕೊಂಡು ಎಲ್ಲಾ ರೀತಿಯ ಮುಂಜಾಗ್ರತಾ ಮತ್ತು ನಿಯಂತ್ರಣ ಕ್ರಮ ಕೈಗೊಳ್ಳುವುದಾಗಿ ಕಲಬುರಗಿ ಜಿಲ್ಲಾಧಿಕಾರಿ ಅಧಿಕೃತ ಜ್ಞಾಪನಾ ಪತ್ರದಲ್ಲಿ ಉಲ್ಲೇಖಿಸಿದ್ದರು. ಇದನ್ನೂ ಓದಿ: ಹನಿಮೂನಿಗೆ ಗ್ರೀಸ್‍ಗೆ ತೆರಳಿದ್ದ ಬೆಂಗ್ಳೂರು ದಂಪತಿ – ಪತಿಗೆ ಈಗ ಕೊರೊನಾ ಸೋಂಕು

ಭಾರತದಲ್ಲಿ ಕೊರೊನಾ ಪೀಡಿತರ ಸಂಖ್ಯೆ 61ಕ್ಕೆ ಹೆಚ್ಚಳವಾಗಿದೆ. ಈಗಾಗಲೇ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಬ್ರಿಟನ್ ನಲ್ಲಿ ಮೃತಪಟ್ಟಿದ್ದಾರೆ. ಇತ್ತ ಪುಣೆಯಲ್ಲಿ ಮತ್ತೆ ಮೂರು ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಕೇರಳದಲ್ಲಿ 12 ಜನಕ್ಕೆ ತಗುಲಿದ್ದ ಕೊರೊನಾ ಒಂದೇ ದಿನದಲ್ಲಿ 19ಕ್ಕೆ ಹೆಚ್ಚಾಗಿದೆ. ನಿನ್ನೆಯಷ್ಟೇ ಸಿಎಂ ಪಿಣರಾಯಿ ವಿಜಯನ್ ಅವರು ಸಭೆ ನಡೆಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ, 7ನೇ ತರಗತಿವರೆಗೆ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿದ್ದರು. ಅಲ್ಲದೆ ಮಾ.31ರ ವರೆಗೆ ಚಿತ್ರಮಂದಿರಗಳನ್ನು ಬಂದ್ ಮಾಡುವ ಕುರಿತು ಕೂಡ ಸರ್ಕಾರ ನಿರ್ಧಾರ ಕೈಗೊಂಡಿದೆ.

Share This Article
Leave a Comment

Leave a Reply

Your email address will not be published. Required fields are marked *