ವಾಲ್ಮೀಕಿ ಭಾವಚಿತ್ರಕ್ಕೆ ಅವಮಾನ: ಉದ್ರಿಕ್ತರಿಂದ ಬಸ್‍ಗೆ ಕಲ್ಲು ತೂರಾಟ

Public TV
1 Min Read

ರಾಯಚೂರು: ವಾಲ್ಮೀಕಿ ವೃತ್ತದ ನಾಮಫಲಕಕ್ಕೆ ಕಿಡಿಗೇಡಿಗಳು ಸಗಣಿ ಎರಚಿರುವ ಘಟನೆ ರಾಯಚೂರಿನ ಮಾನ್ವಿ ತಾಲೂಕಿನ ಬಾಗಲವಾಡ ಗ್ರಾಮದಲ್ಲಿ ನಡೆದಿದೆ.

ರಾತ್ರಿ ವೇಳೆ ಕಿಡಿಗೇಡಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ಇದರಿಂದ ಆಕ್ರೋಶಗೊಂಡ ವಾಲ್ಮೀಕಿ ಸಮಾಜದ ಯುವಕರು ಗ್ರಾಮದ ಮುಖ್ಯ ರಸ್ತೆ ತಡೆದು ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದರು. ಟೈರ್‍ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿ, ಸುಮಾರು ಒಂದು ಗಂಟೆ ಕಾಲ ಪ್ರತಿಭಟನೆ ನಡೆಸಿದರು. ಈ ವೇಳೆ ಗ್ರಾಮಕ್ಕೆ ಬಂದ ಸಾರಿಗೆ ಬಸ್ ಮೇಲೆ ಕಲ್ಲು ತೂರಾಟ ನಡೆಸಿ, ಬಸ್ ಗಾಜನ್ನ ಪುಡಿಪುಡಿ ಮಾಡಿದ್ದಾರೆ. ಪ್ರತಿಭಟನಾಕಾರರನ್ನ ನಿಯಂತ್ರಣಕ್ಕೆ ತಂದಿರುವ ಪೊಲೀಸರು ಪರಸ್ಥಿತಿ ತಿಳಿಗೊಳಿಸುವ ಪ್ರಯತ್ನ ನಡೆಸಿದ್ದಾರೆ.

ಆರು ತಿಂಗಳ ಹಿಂದೆ ಬಾಗಲವಾಡ ಗ್ರಾಮದಲ್ಲಿ ಇದೇ ರೀತಿಯ ಘಟನೆ ನಡೆದಿದ್ದು, ಈಗ ಪುನಃ ಮರುಕಳಿಸಿದಂತಾಗಿದೆ. ಘಟನೆ ಹಿನ್ನೆಲೆಯಲ್ಲಿ ರಾಯಚೂರು ಸಂಸದ ಬಿ.ವಿ.ನಾಯಕ್ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದರು. ತಪ್ಪಿತಸ್ಥರನ್ನ ಕೂಡಲೇ ಬಂಧಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ರು.

ಘಟನೆಯ ಕುರಿತು ಕವಿತಾಳ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಸದ್ಯ ಗ್ರಾಮದಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತಿದೆ.

 

Share This Article
Leave a Comment

Leave a Reply

Your email address will not be published. Required fields are marked *