ಮೈಸೂರು: ರಾಜ್ಯದ ಕೆಲವು ಕಡೆ ಸ್ಥಳೀಯ ಮಟ್ಟದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಭಿನ್ನಾಭಿಪ್ರಾಯ ಇದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಸುತ್ತೂರಿನಲ್ಲಿ ನಡೆದ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಹಾಗೂ ಕಾಂಗ್ರೆಸ್ಸಿನ ನಾಯಕರುಗಳ ನಡುವೆ ರಾಷ್ಟ್ರ ಮಟ್ಟದಲ್ಲಾಗಲಿ ಅಥವಾ ರಾಜ್ಯ ಮಟ್ಟದಲ್ಲಾಗಲಿ ಯಾವುದೇ ಭಿನ್ನಾಭಿಪ್ರಯಗಳಿಲ್ಲ. ಕೇವಲ ಹಾಸನ ಜಿಲ್ಲೆ ಸೇರಿದಂತೆ ಕೆಲವು ಭಾಗಗಳಲ್ಲಿ ಮಾತ್ರ ಸ್ಥಳೀಯ ಮುಖಂಡರ ನಡುವೆ ಹೊಂದಾಣಿಕೆ ಸರಿಯಿಲ್ಲ. ಇದು ಬಗೆ ಹರಿದರೇ ಎಲ್ಲಾ ಸಮಸ್ಯೆಗಳು ಬಗೆ ಹರಿಯುತ್ತವೆ. ಶೀಘ್ರವೇ ಎಲ್ಲಾ ಸರಿ ಹೋಗುತ್ತದೆ ಎನ್ನುವ ವಿಶ್ವಾಸ ನನಗೆ ಇದೆ. ಇದರಿಂದಾಗಿ ದೇಶಮಟ್ಟದಲ್ಲಿ ಬಿಜೆಪಿಯನ್ನು ಸೋಲಿಸಲು ಸುಲಭವಾಗುತ್ತದೆ ಎಂದು ತಿಳಿಸಿದರು.
ಸಮನ್ವಯ ಸಮಿತಿ ಸಭೆಯ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಎಲ್ಲಾ ಸಚಿವರುಗಳು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಸಮನ್ವಯ ಸಮಿತಿ ಸಭೆ ನಡೆಸಲು ತಡವಾಗಿದೆ. ಶೀಘ್ರವೇ ಸಮನ್ವಯ ಸಭೆ ನಡೆಯುತ್ತದೆ. ಕೊಡಗು ಜನರ ಬದುಕಲ್ಲಿ ಬೆಳಕು ಮೂಡಿಸಲು ಸಮ್ಮಿಶ್ರ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv