ಕೆಲವರಿಗೆ ಅವಕಾಶ ತಪ್ಪಿದೆ, ಮುಂದಿನ ದಿನಗಳಲ್ಲಿ ಅವರಿಗೆ ಅವಕಾಶ ಸಿಗಲಿದೆ: ಡಿಕೆಶಿ

Public TV
2 Min Read

ಬೆಂಗಳೂರು: ವಿಧಾನ ಪರಿಷತ್ ಸ್ಥಾನಕ್ಕೆ ನಮ್ಮ ಪಕ್ಷದಲ್ಲಿ ಬಹಳಷ್ಟು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದರು. ಅವರಿಗೆ ಮುಂದಿನ ದಿನಗಳಲ್ಲಿ ನ್ಯಾಯ ಒದಗಿಸಿ ಕೊಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

ನಾಮಪತ್ರ ಸಲ್ಲಿಕೆ ನಂತರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿಕ್ರಿಯೆ ನೀಡಿದ ಅವರು, ಪರಿಷತ್ ಚುನಾವಣೆ ಟಿಕೆಟ್ ಹಂಚಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಎಸ್.ಆರ್. ಪಾಟೀಲ್ ಅವರು ಪಕ್ಷದ ಹಿರಿಯ ನಾಯಕರಿದ್ದು, ಹೈಕಮಾಂಡ್ ಅವರ ವಿಚಾರವನ್ನು ಗಮನಿಸಿದೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಈ ಬಾರಿ ಕೇವಲ 2 ಸ್ಥಾನಗಳಿಗೆ ಮಾತ್ರ ಅವಕಾಶವಿದ್ದು, ಹಿಂದೆ ಹೆಚ್ಚು ಪ್ರಾತಿನಿಧ್ಯ ನೀಡದವರಿಗೆ ಆದ್ಯತೆ ನೀಡಲಾಗಿದೆ. ಮಹಿಳೆಯರಿಗೂ ಆದ್ಯತೆ ನೀಡಲು ಚಿಂತನೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಸರಿ ಮಾಡುತ್ತೇವೆ ಎಂದರು.

ಕೋವಿಡ್ ನಿಯಮಾವಳಿ ಉಲ್ಲಂಘನೆ ವಿಚಾರವಾಗಿ ನಮ್ಮೆಲ್ಲ ನಾಯಕರಿಗೆ ಸಮನ್ಸ್ ಬಂದಿದ್ದು, ಬಿಜೆಪಿ ಸರ್ಕಾರ ಸಂವಿಧಾನ ಬಾಹಿರವಾಗಿ ಕೇವಲ ಕಾಂಗ್ರೆಸ್ ಪಕ್ಷದವರ ವಿರುದ್ಧ ಮಾತ್ರ ಪ್ರಕರಣ ದಾಖಲಿಸಿದೆ. ಬಿಜೆಪಿ ನಾಯಕರು ಹಾಗೂ ಸಚಿವರು ಹಲವು ಬಾರಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದರೂ, ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಲ್ಲ. ಆ ಮೂಲಕ ಬಿಜೆಪಿ ಸರ್ಕಾರ ದ್ವೇಷ ಸಾಧಿಸುತ್ತಿದೆ. ನಾವು ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದರು.

ರಾಜ್ಯದಲ್ಲಿ ಕೋಮು ಸೌಹಾರ್ದತೆ ಕದಡುವ ಪ್ರಯತ್ನಗಳ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿ ಸರ್ಕಾರ ಕರ್ನಾಟಕದ ಘನತೆಯನ್ನು ಯಾಕೆ ಹಾಳು ಮಾಡುತ್ತಿದೆಯೋ ಗೊತ್ತಿಲ್ಲ. ನಮ್ಮ ರಾಜ್ಯ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ರಾಜ್ಯವಾಗಿದೆ. ಇಲ್ಲಿ ಎಲ್ಲರೂ ಯಾವುದೇ ಗೊಂದಲಗಳಿಲ್ಲದೇ ಬದುಕುತ್ತಿದ್ದು, ಬಿಜೆಪಿ ಸರ್ಕಾರ ಚುನಾವಣೆ ಹಿನ್ನೆಲೆಯಲ್ಲಿ ಕರಾವಳಿ ಭಾಗ ಸೇರಿದಂತೆ ಇತರ ಕಡೆಗಳಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿಗಳು ದಾವೋಸ್ ಪ್ರವಾಸದಲ್ಲಿದ್ದು, ಅಲ್ಲಿ ಹಲವು ಅಲ್ಪಸಂಖ್ಯಾತರ ಕಂಪನಿಗಳ ಜೊತೆ ಬಂಡವಾಳ ಹೂಡಿಕೆ ಒಪ್ಪಂದಕ್ಕೆ ಸಹಿ ಹಾಕುತ್ತಿದ್ದಾರೆ. ಆದರೆ ಇಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳು ಗೊಂದಲ ಸೃಷ್ಟಿಸುತ್ತಿವೆ. ಇವು ರಾಜ್ಯಕ್ಕೆ ದೊಡ್ಡ ಹೊಡೆತ ನೀಡಲಿವೆ. ಈಗಾಗಲೇ ಕಿರಣ್ ಮಜುಮ್ದಾರ್, ಮೋಹನ್ ದಾಸ್ ಪೈ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಕೂಡ ರಾಜ್ಯದ ಘನತೆ ರಕ್ಷಿಸುವ ವಿಚಾರವಾಗಿ ಪತ್ರ ಬರೆದಿದ್ದಾರೆ ಎಂದರು.

ಬೆಂಗಳೂರಿನ ಘನತೆ ಬಗ್ಗೆ ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಅವರು ಗುಣಗಾನ ಮಾಡಿದ್ದರು. ಮಂಗಳೂರು ಹಾಗೂ ಕರಾವಳಿ ಭಾಗದಲ್ಲಿ ಪ್ರತಿಷ್ಠಿತ ಸಂಸ್ಥೆಗಳಿದ್ದು, ಅಲ್ಲಿ ಬಂಡವಾಳ ಹೂಡಿಕೆಗೆ ಹೆಚ್ಚಿನ ಅವಕಾಶಗಳಿವೆ. ಆದರೆ ಈ ಬೆಳವಣಿಗೆಗಳು ಇದಕ್ಕೆ ತೊಡಕಾಗಲಿವೆ. ಹೀಗಾಗಿ ಕರಾವಳಿ ಭಾಗದ ಜನ ಮುಂಬೈ, ಸೌದಿ ರಾಷ್ಟ್ರಗಳಿಗೆ ಹೋಗುತ್ತಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಬೇಕು. ಕೋಮು ಸೌಹಾರ್ದತೆ ಕಾಪಾಡಬೇಕು ಎಂದು ಆಗ್ರಹಿಸುತ್ತೇನೆ. ಇಡೀ ಸರ್ಕಾರ ಸ್ವಾರ್ಥ ರಾಜಕಾರಣದ ಬಗ್ಗೆ ಗಮನಹರಿಸುತ್ತಿದೆ. ರಾಜ್ಯದ ಬಗ್ಗೆ ಗಮನಹರಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

Share This Article
Leave a Comment

Leave a Reply

Your email address will not be published. Required fields are marked *