ಪ್ರತಿಭಟನೆ ಬಿಸಿ – ಮೆಟ್ರೋದಲ್ಲಿ ಡಿಕೆಶಿ ಪ್ರಯಾಣ

Public TV
1 Min Read

ಬೆಂಗಳೂರು: ನ್ಯಾಯಾಲಯಕ್ಕೆ ಹೋಗುತ್ತಿದ್ದ ಸಚಿವ ಡಿ.ಕೆ.ಶಿವಕುಮಾರ್ ಅವರಿಗೂ ಮೀಸಲಾತಿ ಹೋರಾಟದ ಬಿಸಿ ತಟ್ಟಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಿದ್ದಾರೆ.

ವಿಧಾನಸೌಧದಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಡಿ.ಕೆ.ಶಿವಕುಮಾರ್ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಪರಿಶಿಷ್ಟ ಪಂಗಡವರ ಪ್ರತಿಭಟನೆಯ ಬಿಸಿ ತಟ್ಟಿದೆ.

ಪರಿಶಿಷ್ಟ ಪಂಗಡದವರಿಗೆ ಶೇಕಡಾ 7.5ರಷ್ಟು ಮೀಸಲಾತಿಗೆ ಆಗ್ರಹಿಸಿ ವಾಲ್ಮೀಕಿ ಸಮುದಾಯ ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ. ವಿಧಾನಸೌಧದ ನಾಲ್ಕೂ ಪ್ರವೇಶ ದ್ವಾರದಲ್ಲೂ ಪ್ರತಿಭಟನಾಕಾರರು ಜಮಾಯಿಸಿದ್ದು, ವಿಧಾನಸೌಧದ ಸುತ್ತಮುತ್ತ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇದೇ ವೇಳೆ ಡಿಕೆಶಿ ಕಾರು ಬರುತ್ತಿದ್ದಂತೆ ಪ್ರತಿಭಟನಾಕಾರರು ಕಾರಿಗೆ ಮುತ್ತಿಗೆ ಹಾಕಿದ್ದಾರೆ. ಕೊನೆಗೆ ಡಿ.ಕೆ.ಶಿವಕುಮಾರ್ ವಿಧಾನಸೌಧದಿಂದ ಸೆಂಟ್ರಲ್ ಕಾಲೇಜಿಗೆ ಮೆಟ್ರೋ ರೈಲಿನಲ್ಲಿ ಆಗಮಿಸಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

2017ರ ಆಗಸ್ಟ್ ನಲ್ಲಿ ಡಿ.ಕೆ. ಶಿವಕುಮಾರ್ ಮನೆಯ ಮೇಲೆ ಐಟಿ ದಾಳಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ 2018ರ ಆಗಸ್ಟ್ ನಲ್ಲಿ ಐಟಿ ನಾಲ್ಕನೇ ಪ್ರಕರಣ ದಾಖಲಿಸಿತ್ತು. ಆರೋಪ ಮುಕ್ತ ಮಾಡುವಂತೆ ಡಿ.ಕೆ.ಶಿವಕುಮಾರ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ನೀಡಲಿದೆ.

ಭಾರೀ ಪ್ರತಿಭಟನೆ:
ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಿಂದ ಆರಂಭವಾದ ಪ್ರತಿಭಟನೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮಿಜಿಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಮುಂದುವರಿದಿದೆ. ಪ್ರತಿಭಟನಾಕಾರರು ಬ್ಯಾರಿಕೇಡ್‍ಗಳನ್ನು ತಳ್ಳಿ ನಾಲ್ಕು ಕಡೆಯೂ ಪ್ರತಿಭಟಿಸುತ್ತಿದ್ದಾರೆ. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ನೂಕಾಟ-ತಳ್ಳಾಟ ನಡೆಯುತ್ತಿದೆ. ಪ್ರತಿಭಟನಾಕಾರರು ರಸ್ತೆಯಲ್ಲಿ ಹೊರಳಾಡಿ ಆಕ್ರೋಶ ಹೊರಹಾಕುತ್ತಿದ್ದಾರೆ.

ವಿಧಾನಸೌಧದ ನಾಲ್ಕೂ ಪ್ರವೇಶ ದ್ವಾರದಲ್ಲೂ ಪ್ರತಿಭಟನಾಕಾರರು ಜಮಾಯಿಸಿದ್ದು, ವಿಧಾನಸೌಧದ ಸುತ್ತಮುತ್ತ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಫ್ರೀಡಂ ಪಾರ್ಕ್, ಆನಂದ್ ರಾವ್ ವೃತ್ತ, ಕಾರ್ಪೋರೇಷನ್ ಸರ್ಕಲ್‍ನಲ್ಲಿ ಭಾರೀ ಟ್ರಾಫಿಕ್ ಉಂಟಾಗಿದೆ. ಹೈಕೋರ್ಟ್ ವಿಧಾನಸೌಧ ನಡುವಿನ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *