ಆಪರೇಷನ್ ಮುಗಿಸಿ ಹೊರಗೆ ಬರ್ತಿದ್ದಂತೆ ಯುವತಿ ಸಾವು

Public TV
1 Min Read

– ವೈದ್ಯರ ನಿರ್ಲಕ್ಷ್ಯದ ಆರೋಪ

ಭುವನೇಶ್ವರ: ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಮೃತಪಟ್ಟಿದ್ದಾಳೆಂದು ಆಕೆ ಸಂಬಂಧಿಕರು ಮತ್ತು ಸ್ಥಳೀಯರು ಪ್ರತಿಭಟನೆ ಮಾಡಿದ್ದು, ಒಡಿಶಾದ ಬೆರ್ಹಾಂಪುರ ಪಟ್ಟಣದ ಖಾಸಗಿ ಆಸ್ಪತ್ರೆಯ ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಐಶ್ವರ್ಯ ಸಿಂಗ್ ಡಿಯೋ (24) ಮೃತ ಯುವತಿ. ಮಂಗಳವಾರ ಸಂಜೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಐಶ್ವರ್ಯಳನ್ನ ಗುರುದೇವ್ ಆಸ್ಪತ್ರೆಗೆ ಕುಟುಂಬದವರು ದಾಖಲಿಸಿದ್ದರು. ವೈದ್ಯರು ಪರೀಕ್ಷಿಸಿ ಯುವತಿಗೆ ಅಪೆಂಡಿಕ್ಸ್ ಇದೆ. ಹೀಗಾಗಿ ಆಪರೇಷನ್ ಮಾಡಬೇಕು ಎಂದು ಹೇಳಿದ್ದಾರೆ. ಹಾಗೆಯೇ ವೈದ್ಯರು ಐಶ್ವರ್ಯಗೆ ಆಪರೇಷನ್ ಮಾಡಿದ್ದಾರೆ. ಆದರೆ ಆಪರೇಷನ್ ಥಿಯೇಟರ್ ನಿಂದ ಹೊರಗೆ ಕರೆದುಕೊಂಡು ಬರುವಾಗ ಯುವತಿ ಮೃತಪಟ್ಟಿದ್ದಾಳೆ.

ನಾವು ಐಶ್ವರ್ಯಾಳನ್ನು ಮಂಗಳವಾರ ಸಂಜೆ 6.30ಕ್ಕೆ ಗುರುದೇವ್ ಆಸ್ಪತ್ರೆಗೆ ದಾಖಲಿಸಿದ್ದೆವು. ಆಗ ಡಾ.ಪ್ರವತ್ ಪಾನಿಗ್ರಾಹಿ ಅಪೆಂಡಿಕ್ಸ್‌ನಿಂದ ಬಳಲುತ್ತಿದ್ದಾಳೆ, ಶಸ್ತ್ರಚಿಕಿತ್ಸೆಗೆ ಮಾಡಬೇಕು ಎಂದು ಹೇಳಿದ್ದರು. ಆದರೆ ವೈದ್ಯರು ಹೆಚ್ಚಿನ ಪ್ರಮಾಣದಲ್ಲಿ ಅರಿವಳಿಕೆ (ಅನಸ್ತೇಷಿಯಾ) ನೀಡಿದ್ದದ್ದಾರೆ. ಹೀಗಾಗಿ ವೈದ್ಯರ ನಿರ್ಲಕ್ಷ್ಯದಿಂದಾಗಿ ಐಶ್ವರ್ಯ ಮೃತಪಟ್ಟಿದ್ದಾಳೆ” ಎಂದು ಮೃತ ಯುವತಿಯ ಸಂಬಂಧಿಯೊಬ್ಬರು ಹೇಳಿದ್ದಾರೆ.

ಈ ಆಸ್ಪತ್ರೆಯಲ್ಲಿ ನಿರ್ಲಕ್ಷ್ಯದ ಪ್ರಕರಣಗಳು ಪದೇ ಪದೇ ವರದಿಯಾಗುತ್ತಿರುವುದರಿಂದ ಸರ್ಕಾರವು ಆಸ್ಪತ್ರೆಯ ಪರವಾನಗಿಯನ್ನು ರದ್ದುಗೊಳಿಸಬೇಕು ಎಂದು ಸಂಬಂಧಿ ಹೇಳಿದ್ದಾರೆ.

ಎರಡು ತಿಂಗಳ ಹಿಂದೆ ಇದೇ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ರೋಗಿಯೊಬ್ಬ ಸಾವನ್ನಪ್ಪಿದ್ದನು. ಯುವತಿಯ ಸಂಬಂಧಿಕರು ಮತ್ತು ಸ್ಥಳೀಯರಿಂದ ಆಸ್ಪತ್ರೆಯ ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾದ ನಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *