ವೈದ್ಯರ ಮುಷ್ಕರ ಎಫೆಕ್ಟ್- ಜೆಡಿಎಸ್ ಕಾರ್ಯಕರ್ತ ಸಾವು

Public TV
1 Min Read

ಬಾಗಲಕೋಟೆ: ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಚಿಕಿತ್ಸೆ ಸಿಗದೆ ಓರ್ವ ಜೆಡಿಎಸ್ ಕಾರ್ಯಕರ್ತ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.

ಬಾದಾಮಿ ತಾಲೂಕು ಕೆರೂರು ಪಟ್ಟಣ ನಿವಾಸಿ ದಾವಲಸಾಬ್ ಕೊಣ್ಣೂರ (55) ಮೃತ ಜೆಡಿಎಸ್ ಕಾರ್ಯಕರ್ತ. ದಾವಲಸಾಬ್ ಜ್ವರ, ಅಸ್ತಮಾದಿಂದ ಬಳಲುತ್ತಿದ್ದರು. ಇಂದು ತೀವ್ರವಾಗಿ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅಲ್ಲಿ ವೈದ್ಯರು ಇರಲಿಲ್ಲ. ಹೀಗಾಗಿ ಮತ್ತೊಂದು ಆಸ್ಪತ್ರೆಗೆ ಸಾಗಿಸಿದರೂ ಅದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ದಾವಲ್‍ಸಾಬ್ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಜಿಲ್ಲಾಸ್ಪತ್ರೆ ತಲುಪುವ ಮಾರ್ಗದಲ್ಲೇ ಅವರು ಸಾವನ್ನಪ್ಪಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಂಡು, ಚಿಕಿತ್ಸೆ ನೀಡಿದ್ದರೆ ದಾವಲಸಾಬ್ ಬದುಕುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದಿರುವೇ ಅವರ ಸಾವಿಗೆ ಕಾರಣ ಎಂದು ಸಂಬಂಧಿಕರ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮೃತ ರೋಗಿಯೊಬ್ಬರ ಸಂಬಂಧಿಕರು ಇತ್ತೀಚೆಗೆ ಇಬ್ಬರು ಕಿರಿಯ ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. ಈ ಘಟನೆ ಪಶ್ಚಿಮ ಬಂಗಾಳದಲ್ಲಿ ವೈದ್ಯರ ದೊಡ್ಡ ಮಟ್ಟದ ಚಳುವಳಿಗೆ ಕಾರಣವಾಯಿತು. ಆದರೆ ಪ್ರತಿಭಟನೆಯನ್ನು ನಿಲ್ಲಿಸುವಂತೆ ಮಮತಾ ಬ್ಯಾನರ್ಜಿ ವೈದ್ಯರಿಗೆ ಎಚ್ಚರಿಕೆ ನೀಡಿದ್ದರು.

ಮಮತಾ ಬ್ಯಾನರ್ಜಿ ಅವರ ಹೇಳಿಕೆಯಿಂದ ಅಸಮಾಧಾನ ಹೊರಹಾಕಿದ ವೈದ್ಯರು, ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದರು. ಈ ಪ್ರತಿಭಟನೆಯನ್ನು ಬೆಂಬಲಿಸಿ ಕರ್ನಾಟಕದಲ್ಲಿಯೂ ಪ್ರತಿಭಟನೆ ನಡೆಸಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *