ಮೆಕುನು ಚಂಡಮಾರುತ- ದಕ್ಷಿಣ ಕನ್ನಡ, ಉಡುಪಿ ಶಾಲಾ ಕಾಲೇಜುಗಳಿಗೆ ಇಂದು, ನಾಳೆ ರಜೆ

Public TV
1 Min Read

ಉಡುಪಿ/ಮಂಗಳೂರು: ಮೆಕುನು ಚಂಡಮಾರುತದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಎರಡು ದಿನಗಳ ರಜೆಯನ್ನು ಜಿಲ್ಲೆಯ ಜಿಲ್ಲಾಧಿಕಾರಿಗಳು ಘೋಷಣೆ ಮಾಡಿದ್ದಾರೆ.

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಮೋಡ ಮುಸುಕಿದ ವಾತಾವರಣವಿದ್ದು ಮತ್ತೆರಡು ದಿನ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಶಾಲಾ ಆರಂಭದಲ್ಲಿ ವಿಪರೀತ ಮಳೆಯಾಗುತ್ತಿದ್ದು ಮಕ್ಕಳು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲೆಗಳಿಗೆ ಇಂದು ಮತ್ತು ನಾಳೆ ದಿನ ರಜೆ ನೀಡಲಾಗಿದೆ.

ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಉಡುಪಿ ಡಿಸಿ ಪ್ರಿಯಾಂಕಾ ಮೇರಿ, ಶಾಲಾ ಮಕ್ಕಳಿಗೆ ಸಮಸ್ಯೆಯಾಗದತೆ, ಪೋಷಕರಿಗೆ ಆತಂಕವಾಗವಾರದೆಂಬ ಹಿನ್ನೆಲೆಯಲ್ಲಿ ರಜೆ ನೀಡಿರುವುದಾಗಿ ಹೇಳಿದ್ದಾರೆ.

ಗ್ರಾಮೀಣ ಪ್ರದೇಶದ ತೊರೆಗಳು ತುಂಬಿ ತುಳುಕುತ್ತಿದ್ದು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ಮುಂಜಾಗೃತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಮೆಕುನು ಚಂಡಮಾರುತದ ಅಬ್ಬರ ಕಡಿಮೆಯಾದ ಕೂಡಲೇ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದೆ. ಹೀಗಾಗಿ ಒಂದು ವಾರದಿಂದ ಆಗಾಗ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ.

ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮತ್ತೆರಡು ದಿನ ಉಡುಪಿಯಲ್ಲಿ ಮಳೆಯಾಗುತ್ತದೆ ಎಂಬ ಸಂದೇಶವನ್ನು ಹವಾಮಾನ ಇಲಾಖೆ ರವಾನಿಸಿದೆ. ಮೂರು ದಿನ ಕಡ್ಡಾಯವಾಗಿ ಯಾರೂ ಕಡಲಿಗೆ ಇಳಿಯಬೇಡಿ ಅಂತ ಜಿಲ್ಲಾಡಳಿತ ಮೀನುಗಾರರಿಗೆ ಎಚ್ಚರಿಕೆ ರವಾನಿಸಿದೆ.

ವಾಯುಭಾರ ಕುಸಿತವಾಗಿದ್ದು, ಜೂನ್ 1 ಕ್ಕೆ ಮುಂಗಾರು ಮಳೆ ಕರಾವಳಿಗೆ ಪ್ರವೇಶ ಮಾಡುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಸಮಸ್ಯೆಯಾಗದಂತೆ ರಜೆ ನೀಡಿರುವುದಾಗಿ ಡಿ.ಸಿ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *