ವಿದ್ಯಾರ್ಥಿನಿ ಸಾವು ಪ್ರತಿಭಟನೆ ವೇಳೆ ಕಲ್ಲೇಟು- ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

Public TV
1 Min Read

– ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಘುಲಾಠಿ ಪ್ರಹಾರ
– ಪ್ರತಿಭಟನೆ ವೇಳೆ ಚಪ್ಪಲಿ ಎಸೆದ ಯುವಕ ಪೊಲೀಸ್ ವಶಕ್ಕೆ

ರಾಯಚೂರು: ನಗರದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣದ ಹಿನ್ನೆಲೆಯಲ್ಲಿ ನ್ಯಾಯಕ್ಕಾಗಿ ಇಂದು ಜಿಲ್ಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಬೃಹತ್ ಹೋರಾಟ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ವೇಳೆ ಕಿಡಿಗೇಡಿಗಳು ಕಲ್ಲುತೂರಾಟ ಕೂಡ ನಡೆಸಿದ್ದಾರೆ.

ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ಗುರು ತಲೆಗೆ ಕಲ್ಲೇಟು ಬಿದ್ದು ಗಾಯಗೊಂಡಿದ್ದಾರೆ. ಅಲ್ಲದೇ ವಿಶ್ವಕರ್ಮ ಸಮಾಜದ ಮುಖಂಡ ಮಾರುತಿ ಬಡಿಗೇರ ಅವರು ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಮುಂದಾದರು. ಈ ವೇಳೆ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡು ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಯೊಳಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಲಘುಲಾಠಿ ಪ್ರಹಾರ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಪ್ರತಿಭಟನೆ ವೇಳೆ ಸಿಟ್ಟಿಗೆದ್ದಿದ್ದ ಪ್ರತಿಭಟನಾಕಾರರರು ಪೊಲೀಸರ ಮೇಲೆ ನೀರಿನ ಬಾಟಲಿ ಹಾಗೂ ಚಪ್ಪಲಿ ಎಸೆದಿದ್ದಾರೆ. ಚಪ್ಪಲಿ ಎಸೆದ ಯುವಕನನ್ನ ಪೊಲೀಸರು ವಶಕ್ಕೆ ಪಡೆದರು. ಜಿಲ್ಲಾಧಿಕಾರಿ ಶರತ್ ಬಿ ಪ್ರತಿಕ್ರಿಯಿಸಿ, ಪ್ರಕರಣವನ್ನು ಸಿಐಡಿ ತನಿಖೆ ನಡೆಸುತ್ತಿದೆ ಸಹಕರಿಸುವಂತೆ ಹೇಳಿ ಹೋರಾಟಗಾರರ ಬಳಿ ಮನವಿ ಮಾಡಿದರು.

ಹೋರಾಟದಲ್ಲಿ ಸಿನಿಮಾ ನಟಿ ಹರ್ಷಿಕಾ ಪೂಣಚ್ಚ, ನಟ ಭುವನ್, ವಿಶ್ವಕರ್ಮ ಸಮಾಜದ ಮಠಾಧೀಶರು ಸೇರಿದಂತೆ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿನಿ ಸಾವಿಗೆ ನ್ಯಾಯ ಸಿಗಬೇಕು ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಅಂತ ಹೋರಾಟಗಾರರು ಆಗ್ರಹಿಸಿದರು.

Share This Article
Leave a Comment

Leave a Reply

Your email address will not be published. Required fields are marked *