ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ: ಸಿದ್ದರಾಮಯ್ಯ

Public TV
1 Min Read

ಬೆಂಗಳೂರು: ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ರಾಷ್ಟ್ರೀಯ ಅರಣ್ಯ ಹುತಾತ್ಮ‌ರ ದಿ‌ನದ ಅಂಗವಾಗಿ ಅರಣ್ಯ ಭವನದಲ್ಲಿನ‌ (Aranya Bhavana) ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ಈ ವೇಳೆ ರಾಜ್ಯದಲ್ಲಿ ಅನುಪಾತಕ್ಕೆ ತಕ್ಕಷ್ಟು ಅರಣ್ಯವಿಲ್ಲ. ಆದ್ದರಿಂದ ಅರಣ್ಯೀಕರಣ ಹೆಚ್ಚಾಗಬೇಕು. ಕಾಡು ಮತ್ತು ವನ್ಯ ಪ್ರಾಣಿ ಸಂಪತ್ತಿನ‌ ರಕ್ಷಣೆ ಕೇವಲ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಕರ್ತವ್ಯ ಎಂದರೆ ನಾವು ನಮ್ಮ‌ ಹೊಣೆಗಾರಿಕೆಯಿಂದ ತಪ್ಪಿಸಿಕೊಂಡಂತಾಗುತ್ತದೆ ಎಂದರು.

ರಾಜ್ಯದಲ್ಲಿ ಆನೆ, ಹುಲಿಗಳ ಸಂಖ್ಯೆ ಹೆಚ್ಚುತ್ತಿರುವುದು ಸಂತೋಷದ ಸಂಗತಿ. ಆದರೆ ಪ್ರಾಣಿ-ಮನುಷ್ಯ ಸಂಘರ್ಷ ತಪ್ಪಿಸಿ, ಪ್ರಾಣಿ ಸಂಪತ್ತನ್ನು ಕಾಪಾಡುವ ದಿಕ್ಕಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕೆಲಸಗಳು ಆಗಬೇಕಿದೆ. ಇದಕ್ಕಾಗಿ ಲಭ್ಯ ಇರುವ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.

ಅರಣ್ಯ ಹುತಾತ್ಮರ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 30 ರಿಂದ 50 ಲಕ್ಷ ರೂ. ಹೆಚ್ಚಿಸಲಾಗಿದೆ. ಅರಣ್ಯ ಹುತಾತ್ಮರು ಮನುಕುಲದ ಸಂರಕ್ಷಕರು. ಇವರ ತ್ಯಾಗ ಅರಣ್ಯ ಸಂರಕ್ಷಣೆಗೆ ಸ್ಫೂರ್ತಿಯಾಗಲಿ ಎಂದು ಹಾರೈಸಿದರು.

ಅರಣ್ಯ ಮತ್ತು ಜೀವಶಾಸ್ತ್ರ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಹುತಾತ್ಮ‌ರ ಕುಟುಂಬದ ಸದಸ್ಯರು ಮತ್ತು ಬಂಧುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share This Article