ಬೆಂಗಳೂರು: ಕನ್ನಡ ಚಿತ್ರರಂಗದ ಮೂವರು ಮೇರು ನಟರ ಸ್ಮಾರಕಗಳು ಒಂದೇ ಕಡೆ ಆಗಬೇಕೇಂಬುದು ನನ್ನ ಬಯಕೆ ಎಂದು ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.
ನಗರದಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕನ್ನಡದ ಮೂವರು ಮೇರು ನಟರಾದ ಡಾ. ರಾಜ್ಕುಮಾರ್, ಡಾ. ವಿಷ್ಣುವರ್ಧನ್, ಡಾ. ಅಂಬರೀಶ್ ಅವರ ಸ್ಮಾರಕಗಳು ಒಂದೇ ಕಡೆ ಆಗಬೇಕು ಎಂಬುವುದು ನನ್ನ ಬಯಕೆ. ನಾನು ಹೇಳಿದ್ದು ಆದರೆ ಒಳ್ಳೆಯದು ಎಂದು ವಿಷ್ಣು ಸ್ಮಾರಕ ಸ್ಥಳಾಂತರ ಬಗ್ಗೆ ಪರೋಕ್ಷವಾಗಿ ಒಪ್ಪಿಗೆ ನೀಡಿದ್ದಾರೆ.
ಸದ್ಯ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಚರ್ಚೆ ಬೇಡ. ಈಗಾಗಲೇ ಅಂಬರೀಶ್ ಅವರ ಅಂತಿಮ ಕಾರ್ಯಗಳನ್ನು ಮಾಡಲು ಸರ್ಕಾರ ಯಶಸ್ವಿಯಾಗಿ ವ್ಯವಸ್ಥೆ ಮಾಡಿದೆ. ಸಿಎಂ ಕುಮಾರಸ್ವಾಮಿ ಅವರು, ಸಚಿವ ಡಿಕೆ ಶಿವಕುಮಾರ್ ಅವರು ಸ್ಮಾರಕದ ಬಗ್ಗೆ ಚಿಂತನೆ ಹೊಂದಿದ್ದಾರೆ. ನನ್ನ ಅಭಿಪ್ರಾಯದಂತೆ ಮೂವರಿಗೂ ಸರಿಸಮಾನವಾಗಿ ಒಂದೇ ಕಡೆ ಸ್ಮಾರಕ ನಿರ್ಮಾಣ ಮಾಡುವುದು ಒಳ್ಳೆಯದು ಎಂಬ ಸಲಹೆ ನೀಡುವುದಾಗಿ ಹೇಳಿದರು. ಅಲ್ಲದೇ ಈ ಹಿಂದೆ ನಡೆದ ಬಗ್ಗೆ ಈಗ ಚರ್ಚೆ ಮಾಡುವುದು ಬೇಡ. ಏಕೆಂದರೆ ಈಗಿನ ಸರ್ಕಾರ ಉತ್ತಮ ನಿರ್ಧಾರ ಕೈಗೊಳ್ಳಲಿ ಎಂದರು. ಅಂದ ಹಾಗೇ, ವಿಷ್ಣುವರ್ಧನ್ ಅವರು 2009ರಲ್ಲಿ ಇಹಲೋಕ ತ್ಯಜಿಸಿದಾಗ ಯಡಿಯೂರಪ್ಪ ಅವರೇ ಸಿಎಂ ಆಗಿದ್ದರು.
ಅಭಿಮಾನಿಗಳ ಬೇಡಿಕೆ ಬಗ್ಗೆ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ ಭಾರತಿ ವಿಷ್ಣು ವರ್ಧನ್ ಅವರು, ಈಗಾಗಲೇ ಮೈಸೂರಿನಲ್ಲಿ ಅವರ ಸ್ಮಾರಕ ನಿರ್ಮಾಣ ಕಾರ್ಯ ಒಂದು ಹಂತಕ್ಕೆ ಆಗಿರುವುದರಿಂದ ಮತ್ತೆ ಅದರ ಸ್ಥಳಾಂತರದ ಚರ್ಚೆ ಬೇಡ. ಈ ಬಗ್ಗೆ ಚರ್ಚೆ ಮಾಡಲು ನಮಗೆ ಇಷ್ಟವಿಲ್ಲ. ಏಕೆಂದರೆ ಅದಕ್ಕೆ ಕಾಲಾವಕಾಶ ಅಂತ್ಯವಾಗಿದೆ. ಕೆಲವರು ಸ್ಮಾರಕದ ಬಗ್ಗೆ ಕೋರ್ಟ್ ಮೆಟ್ಟಿಲು ಹತ್ತಿದ್ದು, ಸಿಎಂ ಅವರು ಈ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಂಡರೆ ಒಳಿತು ಎಂದು ತಿಳಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv