ಎಸ್‌ಎಂಕೆ ಐಟಿ ಬಿಟಿ ಕೊಡುಗೆಗೆ ಕರ್ನಾಟಕ ಸದಾ ಋಣಿ: ಸಿದ್ದರಾಮಯ್ಯ

Public TV
1 Min Read

– ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು ಕೃಷ್ಣ ಅವರು ಕರ್ನಾಟಕಕ್ಕೆ ನೀಡಿದ ಕೊಡುಗೆಗಳನ್ನು ನೆನಪಿಸಿಕೊಂಡಿದ್ದಾರೆ.

ಸಿಎಂ ಶೋಕ ಸಂದೇಶದಲ್ಲೇನಿದೆ?
ಎಸ್.ಎಂ.ಕೃಷ್ಣ ಅವರ ಸಾವಿನಿಂದ ನಾನು ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ. ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು ಎಂದು ಅವರು ಹೇಳಿಕೊಂಡಿದ್ದಾರೆ.

ಹೊಸ ರಾಜಕಾರಣಿಗಳಿಗೆ ಮಾದರಿ
ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ.

ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಎಸ್ ಎಂ ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Share This Article