ಕಾಂಗ್ರೆಸ್‍ನಿಂದ ರೋಷನ್ ಬೇಗ್ ಅಮಾನತು

Public TV
1 Min Read

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಕಾಂಗ್ರೆಸ್‍ನಿಂದ ಅಮಾನತು ಮಾಡಿ ಕೆಪಿಸಿಸಿ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಆದೇಶ ಹೊರಡಿಸಿದ್ದಾರೆ.

ಮಾಜಿ ಸಚಿವ ರೋಷನ್ ಬೇಗ್ ವಿರುದ್ಧ ಕೆಪಿಸಿಸಿ ನೀಡಿದ್ದ ದೂರನ್ನು ಪರಿಗಣಿಸಿದ ಕಾಂಗ್ರೆಸ್ ಹೈಕಮಾಂಡ್ ಸೂಕ್ತ ಕ್ರಮಕ್ಕೆ ಸಮ್ಮತಿಸಿದೆ. ತಕ್ಷಣವೇ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ವಿ.ವೈ.ಘೋರ್ಪಡೆ ತಿಳಿಸಿದ್ದಾರೆ.

ರೋಷನ್ ಬೇಗ್ ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರು. ಆದರೆ ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ರೋಷನ್ ಬೇಗ್ ಅವರು ತಮ್ಮದೇ ಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ್ದರು. ರಾಜ್ಯದಲ್ಲಿ ಪಕ್ಷ ದಯನೀಯವಾಗಿ ಸೋಲಲು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್-ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಕಾರಣರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೊದಲು ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಬೇಕೆಂದು ಎಂದು ಕಿಡಿಕಾರಿದ್ದರು.

ಲೋಕಸಭಾ ಚುನಾವಣೆಗೂ ಮುನ್ನ ನಾನೇ ಮುಂದಿನ ಮುಖ್ಯಮಂತ್ರಿ, ನಾನೇ ಮುಖ್ಯಮಂತ್ರಿ ಎನ್ನುತ್ತಿದ್ದರು. ಈಗ ಫಲಿತಾಂಶ ಬಂದ ಮೇಲೆ ಇದೆಲ್ಲ ಇಳಿಯಿತೆ ಸಿದ್ದರಾಮಯ್ಯ ಎಂದಿದ್ದ ರೋಷನ್ ಬೇಗ್, “ಇಳಿದು ಬಾ, ನೀ ಇಳಿದು ಬಾ” ಎಂದು ಸಿದ್ದರಾಮಯ್ಯ ಮಾದರಿಯನ್ನೇ ಅನುಕರಿಸಿ ನಟನೆಯ ಮೂಲಕ ವ್ಯಂಗ್ಯವಾಡಿದ್ದರು. ಅಷ್ಟೇ ಅಲ್ಲದೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧವೂ ಕಿಡಿಕಾರಿದ್ದರು. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಮೂಲಕ ಕಾಂಗ್ರೆಸ್ ನಾಯಕರ ಕೆಂಗೆಣ್ಣಿಗೆ ಗುರಿಯಾಗಿದ್ದರು.

ಐಎಂಎ ಹಗರಣದಲ್ಲಿ ರೋಷನ್ ಬೇಗ್ ಅವರ ಹೆಸರು ಕೇಳಿ ಬರುತ್ತಿದೆ. ಹೀಗಾಗಿ ಮುಜುಗುರಕ್ಕೆ ಈಡಾಗುವುದನ್ನು ತಪ್ಪಿಸಲು  ಮುಂಜಾಗ್ರತಾ ಕ್ರಮವಾಗಿ ಮಾಜಿ ಸಚಿವರ ವಿರುದ್ಧ ಎಐಸಿಸಿ ಕ್ರಮಕೈಗೊಂಡಿದೆ ಎಂದು ಮೂಲಗಳಿಂದ ಕೇಳಿಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *