ಬೇಳೂರು ಗೋಪಾಲಕೃಷ್ಣ ವಿರುದ್ಧ ಎಫ್‍ಐಆರ್

Public TV
1 Min Read

ಮಂಡ್ಯ: ಲೋಕಸಭಾ ಉಪಚುನಾವಣೆಯಲ್ಲಿ ರಾಮನಗರ ಅಭ್ಯರ್ಥಿಯಂತೆ ಮಂಡ್ಯ ಬಿಜೆಪಿ ಅಭ್ಯರ್ಥಿಯೂ ಕಣದಿಂದ ಹಿಂದೆ ಸರಿಯುತ್ತಾರೆ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ಸಿನ ಬೇಳೂರು ಗೋಪಾಲಕೃಷ್ಣ ವಿರುದ್ಧ ದೂರು ದಾಖಲಾಗಿದೆ.

ಗೋಪಾಲಕೃಷ್ಣ ಹೇಳಿಕೆಯ ವಿರುದ್ಧ ಮಂಡ್ಯ ಲೋಕಸಭಾ ಉಪ ಚುನಾವಣಾ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಚುನಾವಣಾಧಿಕಾರಿಗಳಿಗೆ ನವೆಂಬರ್ 2ರಂದು ದೂರನ್ನು ನೀಡಿದ್ದರು. ದೂರಿನಲ್ಲಿ ಗೋಪಾಲಕೃಷ್ಣ ಹೇಳಿಕೆಯಿಂದಾಗಿ ಚುನಾವಣೆಯಲ್ಲಿ ಹಿನ್ನಡೆಯಾಗುವ ಸಾಧ್ಯತೆ ಇದೆ. ಬೇಳೂರು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟಾಗುವ ರೀತಿ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ಸೂಕ್ತ ಕ್ರಮವಹಿಸುವಂತೆ ಉಲ್ಲೇಖಿಸಿದ್ದರು.

ಈ ಸಂಬಂಧ ಚುನಾವಣಾಧಿಕಾರಿಗಳು ಹೆಚ್ಚಿನ ತನಿಖೆಯನ್ನು ನಡೆಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಚುನಾವಣಾಧಿಕಾರಿಗಳ ಸೂಚನೆ ಮೇರೆಗೆ ಮಂಡ್ಯ ನಗರದ ಪಶ್ಚಿಮ ಠಾಣೆಯಲ್ಲಿ ಐಪಿಸಿ ಸೆಕ್ಷನ್ 171ಜಿ (ಚುನಾವಣಾ ನಿಬಂಧನೆ ಉಲ್ಲಂಘನೆ) ಅಡಿಯಲ್ಲಿ ಬೇಳೂರು ಗೋಪಾಲಕೃಷ್ಣ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

ಬೇಳೂರು ಗೋಪಾಲಕೃಷ್ಣ ಹೇಳಿದ್ದೇನು?
ರಾಮನಗರ ವಿಧಾನಸಭಾ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಹಿಂದೆ ಸರಿದಂತೆ, ಮಂಡ್ಯ ಲೋಕಸಭಾ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಕೂಡ ಚುನಾವಣಾ ಕಣದಿಂದ ಹಿಂದೆ ಸರಿಯುತ್ತಾರೆ ಎಂದು ಹೇಳಿಕೆ ನೀಡಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *