ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ (Eshwarappa), ಪುತ್ರ ಹಾಗೂ ಸೊಸೆ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಶ್ವರಪ್ಪ ಪುತ್ರ ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧವೂ ಭ್ರಷ್ಟಚಾರ ಕಾಯ್ದೆಯಡಿ ಕೇಸ್ ಆಗಿದೆ. ಇದನ್ನೂ ಓದಿ: ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ರೆ ನೇಣು ಹಾಕಿಕೊಳ್ಳುತ್ತೇನೆ: ರವಿಕುಮಾರ್
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಈಶ್ವರಪ್ಪ ಹಾಗೂ ಕುಟುಂಬದ ವಿರುದ್ಧ ನ್ಯಾಯಾಲಯದಲ್ಲಿ ವಿನೋದ್ ಎಂಬವರು ಖಾಸಗಿ ದೂರು ದಾಖಲಿಸಿದ್ದಾರೆ.
ಖಾಸಗಿ ದೂರಿನ ಅನ್ವಯ ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ ನೀಡಿತ್ತು. ಕೋರ್ಟ್ ಸೂಚನೆ ಬಳಿಕ ಲೋಕಾಯುಕ್ತ ಠಾಣೆಯಲ್ಲಿ ಕೇಸ್ ಆಗಿದೆ. ಪ್ರಕರಣದ ಬೆನ್ನಲ್ಲೇ ದಾಖಲೆಗಳನ್ನ ಸಲ್ಲಿಸುವಂತೆ ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: ದಾವಣಗೆರೆ ಬಿಜೆಪಿ ಸಂಘರ್ಷಕ್ಕೆ ಮದ್ದು – ರೇಣುಕಾಚಾರ್ಯ ಅಂಡ್ ಟೀಮ್ಗೆ ಬುಲಾವ್
ದೂರು ನೀಡಿದ್ದ ವಕೀಲ ವಿನೋದ್ಗೆ ದಾಖಲಾತಿ ಸಲ್ಲಿಸಲು ನೋಟಿಸ್ ಕೊಡಲಾಗಿದೆ. ಜುಲೈ 4ರ ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ಲೋಕಾಯುಕ್ತದ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.
ಏನಿದು ಪ್ರಕರಣ?
ಈಶ್ವರಪ್ಪ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಪ್ರಕರಣ ದಾಖಲಾಗಿತ್ತು. ವಿನೋದ್ ಅವರು 2016ರಲ್ಲಿ ಸಲ್ಲಿಸಿದ್ದ ಖಾಸಗಿ ದೂರನ್ನು ಲೋಕಾಯುಕ್ತ ಕೋರ್ಟ್ ವಜಾಗೊಳಿಸಿತ್ತು. ವಜಾ ಆದೇಶವನ್ನು ಪ್ರಶ್ನಿಸಿ ವಿನೋದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ದೂರಿನ ಮರು ಪರಿಶೀಲನೆಗೆ ಆದೇಶ ಹೊರಡಿಸಿತ್ತು.