ಮಂಡ್ಯದಲ್ಲಿ ಮತ್ತೊಂದು ಭೀಕರ ಅಪಘಾತ – ಆಟೋಗೆ ಟಿಪ್ಪರ್ ಡಿಕ್ಕಿಯಾಗಿ 5 ಮಂದಿ ದುರ್ಮರಣ

Public TV
1 Min Read

– ಮೃತದೇಹಗಳು ಛಿದ್ರ ಛಿದ್ರ

ಮಂಡ್ಯ: ಜಿಲ್ಲೆಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಆಟೋಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಐದು ಮಂದಿ ಮೃತಪಟ್ಟಿರುವ ಘಟನೆ ನಾಗಮಂಗಲ ತಾಲೂಕಿನ ಸಂಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶುಕ್ರವಾರ ಸಂಜೆ ಈ ದುರ್ಘಟನೆ ನಡೆದಿದ್ದು, ಮೃತರನ್ನು ಮಂಡ್ಯ ಜಿಲ್ಲೆಯ ಸುಖದಾರೆ ಗ್ರಾಮದ ಕುಮಾರ್ (42), ಕಾಳೇನಹಳ್ಳಿಯ ಅರಸಮ್ಮ(40), ಆಟೋ ಡ್ರೈವರ್ ಸತೀಶ್(40), ಬೋರಲಿಂಗ(40) ಮತ್ತು ತಮಿಳುನಾಡಿನ ಸುರೇಶ್ ಎಂದು ಗುರುತಿಸಲಾಗಿದೆ. ಈ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೆಳ್ಳೂರು ಕ್ರಾಸ್‍ನಲ್ಲಿರುವ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಹಾಗೂ ಗಾಯಾಳುಗಳೆಲ್ಲರೂ ಶುಕ್ರವಾರ ಸಂತೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ನಾಗಮಂಗಲಕ್ಕೆ ಆಟೋದಲ್ಲಿ ಹೋಗಿದ್ದರು. ಬಳಿಕ ಕೆಲಸ ಮುಗಿಸಿಕೊಂಡು ತಮ್ಮ ಗ್ರಾಮಗಳಿಗೆ ತೆರಳುತ್ತಿದ್ದರು. ಆದರೆ ಸಂಕನಹಳ್ಳಿ ಗೇಟ್ ಬಳಿ ಆಟೋ ಬರುತ್ತಿದ್ದಂತೆ ಎದುರಿನಿಂದ ಬಂದ ಟಿಪ್ಪರ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಷ್ಟೇ ಅಲ್ಲದೆ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಟಿಪ್ಪರ್ ನ ಕೆಳಗೆ ಸಿಲುಕಿದ್ದು, ಸುಮಾರು ಅರ್ಧ ಕಿಲೋ ಮೀಟರ್ ದೂರದವರೆಗೆ ಆಟೋವನ್ನು ಟಿಪ್ಪರ್ ಎಳೆದುಕೊಂಡು ಹೋಗಿದೆ. ಪರಿಣಾಮ ಟಿಪ್ಪರ್ ಕೆಳಗೆ ಸಿಲುಕಿದ ಆಟೋದಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸುದ್ದಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಸ್ತುವಾರಿ ಸಚಿವ ಪುಟ್ಟರಾಜು ಅವರು ಮೃತರ ಕುಟುಂಬಸ್ಥರು ಮತ್ತು ಗಾಯಾಳುಗಳ ಮನೆಯವರು ಆಸ್ಪತ್ರೆಗೆ ತೆರಳಲು ಖಾಸಗಿ ಬಸ್ ವ್ಯವಸ್ಥೆ ಮಾಡಿದರು. ಅವರು ಕೂಡ ಆಸ್ಪತ್ರೆಗೆ ತೆರಳಿ ಮೃತರ ಕುಟುಂಬದವರಿಗೆ, ಗಾಯಾಳುಗಳಿಗೆ ಸಾಂತ್ವನ ಹೇಳಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.

ಈ ಕುರಿತು ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *