ಪಕ್ಷಕ್ಕಾಗಿ ಶ್ರಮಿಸಿದ್ದ ನನ್ನನ್ನು ಕಡೆಗಣಿಸಿದ್ದು ಎಷ್ಟು ಸರಿ ಸಿದ್ದರಾಮಯ್ಯ ಎದುರು ಎಂ.ಬಿ. ಪಾಟೀಲ್ ಕಣ್ಣೀರು!

Public TV
1 Min Read

ಬೆಂಗಳೂರು: ಸಮಾಜಕ್ಕಾಗಿ ಮತ್ತು ಪಕ್ಷಕ್ಕಾಗಿ ಶ್ರಮಿಸಿದ್ದ ನನ್ನನ್ನು ಕಡೆಗಣಿಸಿದ್ದು ಎಷ್ಟು ಸರಿ ಎಂದು ಸಿದ್ದರಾಮಯ್ಯರ ಮುಂದೆ ಮಾಜಿ ಸಚಿವ ಎಂ.ಬಿ.ಪಾಟೀಲ್ ಭಾವೋದ್ವೇಗಕ್ಕೆ ಒಳಗಾದ್ರು ಎಂದು ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ.

ಬುಧವಾರ ಸಚಿವ ಸಂಪುಟ ರಚನೆಯಾಗಿದ್ದು, ಕಾಂಗ್ರೆಸ್ ಮತ್ತು ಉತ್ತರ ಕರ್ನಾಟಕ ಭಾಗದ ಪ್ರಭಾವಿ ಲಿಂಗಾಯತ ಮುಖಂಡ ಎಂ.ಬಿ.ಪಾಟೀಲ್‍ರಿಗೆ ಸಚಿವ ಸ್ಥಾನ ಕೈ ತಪ್ಪಿತ್ತು. ನೂತನ ಸಚಿವರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲವೆಂದು ಗೊತ್ತಾದ ಕೂಡಲೇ ಎಂ.ಬಿ.ಪಾಟೀಲ್ ಸಾರ್ವಜನಿಕವಾಗಿ ಪಕ್ಷದ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದರು.

ಇತ್ತ ಭದ್ರಾವತಿ ಶಾಸಕ ಸಂಗಮೇಶ್‍ವರಿಗೂ ಸಚಿವ ಸ್ಥಾನ ತಪ್ಪಿದ್ದರಿಂದ ಇಂದು ಬೆಳಗ್ಗೆ ಸಿದ್ದರಾಮಯ್ಯರ ನಿವಾಸದ ಜಮಾಯಿಸಿದ್ದಾರೆ. 8 ಬಸ್, 15 ಕಾರುಗಳಲ್ಲಿ ಬಂದಿರುವ ಶಾಸಕ ಸಂಗಮೇಶ್ ಬೆಂಬಲಿಗರು ತಮ್ಮ ನಾಯಕನಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ.

ಸಚಿವ ಸ್ಥಾನ ಕೈತಪ್ಪಿದ ಉಭಯ ಪಕ್ಷಗಳಲ್ಲಿನ ಆಕಾಂಕ್ಷಿಗಳು ಆಕ್ರೋಶಗೊಂಡಿದ್ದು, ಕೆಲವರು ಪಕ್ಷ ಬಿಡುವ ಮಾತುಗಳನ್ನಾಡಿದ್ದಾರೆ. ತಮ್ಮ ಬೆಂಬಲಿಗರ ಜೊತೆ ಪ್ರತ್ಯೇಕ ಸಭೆ ನಡೆಸಿದ ಎಂ.ಬಿ ಪಾಟೀಲ್, ಎಚ್.ಕೆ ಪಾಟೀಲ್, ಕಾಂಗ್ರೆಸ್ ಹೈಕಮಾಂಡ್ ಗೆ 3 ದಿನಗಳ ಕಾಲಾವಕಾಶ ನೀಡಿದ್ದಾರಂತೆ. ಅಷ್ಟರಲ್ಲಿ ಕ್ಷೇತ್ರಕ್ಕೆ ಹೋಗಿ ಅಲ್ಲಿ ಬೆಂಬಲಿಗರ ಜೊತೆ ಮಾತನಾಡಿ, ಪಕ್ಷಕ್ಕೆ ರಾಜೀನಾಮೆ ಕೊಡಬೇಕಾ ಅಥವಾ ಬೇರೆ ಪಕ್ಷಕ್ಕೆ ಹೋಗಬೇಕಾ ಎಂಬುದರ ಬಗ್ಗೆ ತೀರ್ಮಾನಿಸುತ್ತೇವೆ ಅಂತ ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ.

ಕುಂದಗೋಳ ಶಾಶಕ ಶಿವಳ್ಳಿ, ಪಕ್ಷದಲ್ಲಿ ನನಗೆ ನ್ಯಾಯ ಸಿಗೋವರೆಗೂ ಬಿಡಲ್ಲ ಎಂದಿದ್ದಾರೆ. ಈ ಮಧ್ಯೆ ಸತೀಶ ಜಾರಕಿಹೊಳಿ, ಹ್ಯಾರಿಸ್, ಬಿ.ಸಿ. ಪಾಟೀಲ, ಬಿ. ನಾಗೇಂದ್ರ ಸೇರಿದಂತೆ ಅತೃಪ್ತ ಶಾಸಕರು ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ಸಭೆ ನಡೆಸಿ, ಮುಂದಿನ ನಡೆಯ ಕುರಿತು ಚರ್ಚಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *