ಮಾಜಿ ಸಚಿವ ನಾಗೇಂದ್ರ 6 ದಿನ ಇ.ಡಿ ಕಸ್ಟಡಿಗೆ

Public TV
1 Min Read

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ (Valmiki Case) ನಿಗಮದಲ್ಲಿನ ಕೋಟ್ಯಂತರ ರೂ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ನಾಗೇಂದ್ರ (Nagendra) ಅವರನ್ನು ಹೆಚ್ಚಿನ ವಿಚಾರಣೆಗೆ 6 ದಿನಗಳ ಕಾಲ ಇ.ಡಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಹೆಚ್ಚಿನ ವಿಚಾರಣೆ, ಮಹಜರು ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ನಾಗೇಂದ್ರ ಅವರನ್ನು ಯಲಹಂಕದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಜು.18 ರ ವರೆಗೆ ಇ.ಡಿ ಕಸ್ಟಡಿಗೆ ನೀಡಿ ನ್ಯಾಯಾದೀಶರು ಆದೇಶಿಸಿದ್ದಾರೆ. ಬಳಿಕ ನ್ಯಾಯಾಧೀಶರ ಮನೆಯಿಂದ ಶಾಂತಿನಗರದಿಂದ ಇ.ಡಿ ಕಚೇರಿಗೆ ಆರೋಪಿಯನ್ನು ಇ.ಡಿ ಅಧಿಕಾರಿಗಳು ಕರೆದೊಯ್ದಿದ್ದಾರೆ. ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ: ಸದನದಲ್ಲಿ ಮುಡಾ, ವಾಲ್ಮೀಕಿ ಹಗರಣ ಅಸ್ತ್ರ ಪ್ರಯೋಗಕ್ಕೆ ಸಜ್ಜು!

ನಿಗಮದಲ್ಲಿ ನೂರಾರು ಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ ಕಾಂಗ್ರೆಸ್‌ ಶಾಸಕ ನಾಗೇಂದ್ರರನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಶುಕ್ರವಾರ ಬಂಧಿಸಿದರು. ಬಳಿಕ ರಾತ್ರಿ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಇ.ಡಿ ಅಧಿಕಾರಿಗಳು 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರ ಮುಂದೆ ಮನವಿ ಮಾಡಿದರು. ಆದರೆ 6 ದಿನ ಕಸ್ಟಡಿಗೆ ನ್ಯಾಯಾಧೀಶರು ನೀಡಿದ್ದಾರೆ. ಜು.18 ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಬಿಡಿಎ ಅಕ್ರಮ ಕೇಸ್ ಮುಚ್ಚಿಹಾಕಲು ಲಂಚ ಪಡೆದ ಆರೋಪ – ಸಿಸಿಬಿ ಅಧಿಕಾರಿ ಯತೀಶ್ ಅಮಾನತು

ನ್ಯಾಯಾಧೀಶರ ಮುಂದೆ ನಾಗೇಂದ್ರ ಅವರು ಅನಾರೋಗ್ಯ ಸಮಸ್ಯೆ ಬಗ್ಗೆ ತಿಳಿಸಿದರು. ಬಿಪಿ, ಜೊತೆಗೆ ಸುಸ್ತು ಇದೆ ಎಂದರು. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಪ್ರತಿದಿನ ಮೂರು ಗಂಟೆ ವಿಚಾಣೆಗೆ ಅವಕಾಶ ನೀಡಲಾಗಿದೆ. ವಿಚಾರಣೆ ಬಳಿಕ 30 ನಿಮಷಗಳ ಕಾಲ ವಿಶ್ರಾಂತಿ ನೀಡಬೇಕು. ಪ್ರತಿದಿನ ವೈದ್ಯಕೀಯ ತಪಾಸಣೆ ಮಾಡುವಂತೆ ನ್ಯಾಯಾಧೀಶರು ತಿಳಿಸಿದ್ದಾರೆ.

Share This Article