ಅರುಣಾಸ್ತಮಾನ- ಪಂಚಭೂತಗಳಲ್ಲಿ ಅರುಣ್ ಜೇಟ್ಲಿ ಲೀನ

Public TV
2 Min Read

ನವದೆಹಲಿ: ಬಿಜೆಪಿಯ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರ ಅಂತ್ಯಕ್ರಿಯೆಯನ್ನು ಇಂದು ನಿಗಮ್ ಬೋಧ್ ಘಾಟ್ ನಲ್ಲಿ ನೆರವೇರಿಸಲಾಯ್ತು.

ಬಿಜೆಪಿ ಕಚೇರಿಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಅರುಣ್ ಜೇಟ್ಲಿ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಿಡಲಾಗಿತ್ತು. ಅಲ್ಲಿಂದ ಮೆರವಣಿಗೆ ಮೂಲಕ ನಿಗಮ್ ಬೋಧ್ ಘಾಟ್‍ಗೆ ತಲುಪಿ, ಮಧ್ಯಾಹ್ನ 3.15 ಸುಮಾರಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಜೇಟ್ಲಿ ಅವರನ್ನು ಇದೇ ತಿಂಗಳ 9ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಸುದೀರ್ಘ 15 ದಿನಗಳ ಕಾಲ ವೆಂಟಿಲೇಟರ್, ಐಸಿಯುನಲ್ಲಿಟ್ಟರೂ ಚಿಕಿತ್ಸೆ ಫಲಿಸದೇ ಶನಿವಾರ ಮಧ್ಯಾಹ್ನ 12.07ಕ್ಕೆ ಕೊನೆಯುಸಿರೆಳೆದಿದ್ದರು.

66 ವರ್ಷ ವಯಸ್ಸಿನ ಜೇಟ್ಲಿ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಶನಿವಾರ ಮಧ್ಯಾಹ್ನದಿಂದಲೇ ಕೈಲಾಶ್ ಕಾಲೋನಿಯ ನಿವಾಸದಲ್ಲಿ ಸಂಬಂಧಿಕರು, ಗಣ್ಯರು, ಅಭಿಮಾನಿಗಳು ಅಂತಿಮ ನಮನ ಸಲ್ಲಿಸಿದರು. ನಿಗಮ್ ಬೋಧ್ ಘಾಟ್ ನಲ್ಲಿ ಅಪಾರ ರಾಜಕೀಯ ಗಣ್ಯರು ಅರುಣ್ ಜೇಟ್ಲಿಯವರ ಅಂತಿಮ ದರ್ಶನ ಪಡೆದು ಭಾವುಕರಾದರು.

ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ಮೋದಿ, ಹಿರಿಯ ನಾಯಕರಾದ ಅಡ್ವಾಣಿ, ಮುರಳಿ ಮನೋಹರ ಜೋಷಿ, ಒಡನಾಡಿಗಳಾಗಿದ್ದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಎಲ್ಲಾ ನಾಯಕರು, ಕಾಂಗ್ರೆಸ್‍ನ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಡೆಲ್ಲಿ ಸಿಎಂ ಕೇಜ್ರಿವಾಲ್, ಮಮತಾ ಬ್ಯಾನರ್ಜಿ ಕಂಬನಿ ಮಿಡಿದಿದ್ದಾರೆ. ಕ್ರಿಕೆಟಿಗರಾದ ಸೆಹ್ವಾಗ್, ಗಂಭೀರ್ ಸಹ ಸಂತಾಪ ಸೂಚಿಸಿದ್ದಾರೆ. ಅಂದಹಾಗೆ, ಸುಷ್ಮಾ ಸ್ವರಾಜ್ ಬೆನ್ನಿಗೇ ಜೇಟ್ಲಿ ಅವರು ಅಗಲಿರೋದು ಬಿಜೆಪಿ ನಾಯಕರಿಗೆ ಸಹಿಸಲಾಗದ ನೋವು ತಂದಿದೆ. ಸಾಲು ಸಾಲು ದಿಗ್ಗಜರನ್ನು ಕಳೆದುಕೊಳ್ಳುತ್ತಿರುವ ಬಿಜೆಪಿ ಬಡವಾಗುತ್ತಿದೆ.

ಇತ್ತ ಬಹ್ರೇನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಆಪ್ತ ಗೆಳೆಯ ಅರುಣ್ ಜೇಟ್ಲಿಯವರನ್ನು ನೆನೆದು ಭಾವುಕಾರದರು. ವಿದ್ಯಾರ್ಥಿ ಜೀವನದಿಂದಲೂ ನಾವಿಬ್ಬರೂ ಒಟ್ಟಿಗೆ ಬಂದಿದ್ದೇವೆ, ರಾಜಕೀಯದಲ್ಲೂ ಒಟ್ಟಿಗೆ ಕೆಲಸ ಮಾಡಿದ್ದೇವೆ. ಅವರ ಸಾವನ್ನು ಊಹಿಸಿಕೊಳ್ಳಲೂ ನನ್ನಿಂದ ಸಾಧ್ಯವಾಗುತ್ತಿಲ್ಲ ಎಂದು ಹೇಳಿ ಸಂತಾಪ ಸೂಚಿಸಿದ್ದರು.

ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಪ್ರಧಾನಿಯವರು ಜೇಟ್ಲಿ ಪತ್ನಿಗೆ ಕರೆ ಮಾಡಿ ಸಾಂತ್ವಾನ ಹೇಳಿದ್ದಾರೆ. ಈ ವೇಳೆ ಯಾವುದೇ ಕಾರಣಕ್ಕೂ ವಿದೇಶ ಪ್ರವಾಸ ರದ್ದು ಮಾಡದಂತೆ ಜೇಟ್ಲಿ ಕುಟುಂಬ ಮನವಿ ಮಾಡಿಕೊಂಡಿದೆ. ವಿದೇಶ ಪ್ರವಾಸದ ಹಿನ್ನೆಲೆಯಲ್ಲಿ ಪ್ರಧಾನಿಗಳು ಜೇಟ್ಲಿಯವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿಲ್ಲ.

Share This Article
Leave a Comment

Leave a Reply

Your email address will not be published. Required fields are marked *