ಹಳೆಯ ಎಲ್ಲ ಬಾಕಿ ತೀರಿಸ್ತೇವೆ – ಮೋದಿ ಹೇಳಿಕೆಯ ಬೆನ್ನಲ್ಲೇ ಶಾಂತಿ ಮಂತ್ರ ಪಠಿಸಿದ ಪಾಕಿಸ್ತಾನ

Public TV
2 Min Read

ಇಸ್ಲಾಮಾಬಾದ್: ಭಾರತ ಯುದ್ಧ ಆರಂಭಿಸಿದರೆ ನಾವು ಯುದ್ಧಕ್ಕೆ ತಯಾರಿದ್ದೇವೆ ಎಂದು ಹೇಳಿಕೆ ನೀಡಿದ್ದ ಪಾಕಿಸ್ತಾನ ಈಗ ಶಾಂತಿ ಮಾತುಕತೆ ಪ್ರಸ್ತಾಪವನ್ನು ಇಟ್ಟಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಏಕಾಂಗಿಯಾಗಿಸುವ ಭಾರತದ ಪ್ರಯತ್ನಗಳು ಒಂದೊಂದಾಗಿ ಫಲ ಕೊಡಲಾರಂಭಿಸಿದ ಬೆನ್ನಲ್ಲೇ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಈಗ ಶಾಂತಿಮಂತ್ರವನ್ನು ಪಠಿಸಲು ಆರಂಭಿಸಿದ್ದಾರೆ.

ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ಸಾಕ್ಷ್ಯವನ್ನು ನೀಡಿದರೆ ಪಾಕಿಸ್ತಾನ ತಕ್ಷಣವೇ ಸ್ಪಂಧಿಸುತ್ತದೆ. ಹಾಗೆಯೇ ಶಾಂತಿ ನೆಲೆಸಲು ಅವಕಾಶ ಮಾಡಿಕೊಟ್ಟರೆ ನನ್ನ ಮಾತಿಗೆ ನಾನು ಬದ್ಧನಾಗಿರುತ್ತೇನೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿ, ಉಗ್ರರ ವಿರುದ್ಧ ಇಡೀ ವಿಶ್ವದಲ್ಲಿ ಒಂದೇ ಮಾತು ಕೇಳಿಬರುತ್ತಿದೆ. ಭಯೋತ್ಪಾದನೆ ನಡೆಸುವವರನ್ನು ಮತ್ತು ಇಂತಹ ದುಷ್ಕೃತ್ಯಕ್ಕೆ  ಬೆಂಬಲ ನೀಡುವವರಿಗೆ ಪಾಠ ಕಲಿಸಬೇಕು ಎನ್ನುವ ಆಗ್ರಹ ಎಲ್ಲ ಕಡೆ ಕೇಳಿಬರುತ್ತಿದೆ. ಭಾರತ ಈಗ ಬದಲಾಗುತ್ತಿದೆ. ಈ ಬಾರಿ ಉಗ್ರರು ಹಾಗೂ ಭಯೋತ್ಪಾದನೆ ವಿರುದ್ಧ ಹೋರಾಡಲು ಸಮಯ ಬಂದಿದೆ. ಅನ್ಯಾಯವಾಗಿ ಸೈನಿಕರು ಬಲಿಯಾದ ನೋವನ್ನು ಮರೆಯಲು ಸಾಧ್ಯವೇ ಇಲ್ಲ. ಭಯೋತ್ಪಾದನೆ ಹಾಗೂ ಉಗ್ರರ ವಿರುದ್ಧ ಹೇಗೆ ಹೋರಾಡಬೇಕು ಅವರನ್ನು ಯಾವ ರೀತಿ ಸದೆಬಡಿಯಬೇಕು ಎನ್ನುವುದು ನಮಗೆ ಗೊತ್ತಿದೆ. ಅಷ್ಟೇ ಅಲ್ಲದೇ ಈ ಬಾರಿ ಹಳೆಯ ಎಲ್ಲ ಬಾಕಿಗಳನ್ನು ತೀರಿಸುತ್ತೇವೆ. ಅಂತಿಮ ಜಯ ನಮಗೆ ಸಿಗಲಿದೆ ಎಂದು ಗುಡುಗಿದ್ದರು.

ಮೋದಿಯಿಂದ ಖಾರವಾದ ಪ್ರತಿಕ್ರಿಯೆ ವ್ಯಕ್ತವಾದ ಬೆನ್ನಲ್ಲೇ ಇಮ್ರಾನ್ ಖಾನ್ ಅವರು ಶಾಂತಿ ಮಾತನ್ನು ಆಡಲು ಆರಂಭಿಸಿದ್ದಾರೆ. ಬಡತನ ಮತ್ತು ಅನಕ್ಷರಸ್ಥತೆಯ ವಿರುದ್ಧ ಒಟ್ಟಾಗಿ ಹೋರಾಟ ನಡೆಸೋಣ ಎಂದು ನರೇಂದ್ರ ಮೋದಿ ಹೇಳಿದ್ದರು. ಆ ಮಾತಿಗೆ ನಾನು ಬದ್ಧನಾಗಿದ್ದೇನೆ. ಶಾಂತಿಗೆ ಒಂದು ಅವಕಾಶ ನೀಡಿ, ಪುಲ್ವಾಮಾ ದಾಳಿಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ನಾನು ನಿಮಗೆ ನೀಡುತ್ತೇನೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

ಇಮ್ರಾನ್ ಖಾನ್ ಅವರು ಪಾಕಿಸ್ತಾನದ ಪ್ರಧಾನಿಯಾದ ನಂತರ ಮೋದಿ ಅವರು ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದರು. ಬಳಿಕ ಮಾತನಾಡುತ್ತ ಬಡತನ ಮತ್ತು ಅನಕ್ಷರತೆ ವಿರುದ್ಧ ಒಟ್ಟಾಗಿ ಹೋರಾಡಬೇಕು ಎಂದು ಹೇಳಿದ್ದಾಗ ನಾನು ‘ಪ್ಯಾಥನ್ ಮಗ’ ಎಂದು ಇಮ್ರಾನ್ ಖಾನ್ ಹೇಳಿದ್ದರು. ಪ್ಯಾಥನ್ ಎಂದರೆ ಇರಾನಿನ ಒಂದು ಜನಾಂಗ. ಇವರು ಪ್ರಾಮಾಣಿಕತೆ ಮತ್ತು ಸತ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಆದರೆ ಇಂದು ಪಾಕ್ ಪ್ರಧಾನಿ ತಮ್ಮ ಮಾತನ್ನು ಮರೆತಿದ್ದಾರೆ, ಅವರು ತಮ್ಮ ಮಾತಿನ ಪ್ರಕಾರ ನಡೆದುಕೊಳ್ಳುತ್ತಿಲ್ಲ ಎಂದು ಮೋದಿ ಟೀಕಿಸಿದ್ದರು.

ಕಳೆದ ಫೆಬ್ರವರಿ 19ರಂದು ಪುಲ್ವಾಮಾ ದಾಳಿ ಕುರಿತು ಪ್ರತಿಕ್ರಿಯೆ ನೀಡಿದ್ದ ಇಮ್ರಾನ್ ಖಾನ್ ಅವರು, ಭಾರತ ಪಾಕಿಸ್ತಾನ ಜೊತೆಗೆ ಸಹಕರಿಸಿದರೆ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿರುದ್ಧ ಕ್ರಮ ಕೈಗೊಳ್ಳಲು ಪಾಕಿಸ್ತಾನ ಸಿದ್ಧವಿದೆ ಎಂದು ಭರವಸೆ ನೀಡಿದ್ದರು. ಅಷ್ಟೇ ಅಲ್ಲದೆ ಉಗ್ರರ ದಾಳಿಗೆ ಪ್ರತ್ಯುತ್ತರ ನೀಡಲು ಆಕ್ರಮಣಕ್ಕೆ ಮುಂದಾದರೆ ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆಯನ್ನು ಕೂಡ ನೀಡಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *