ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10 ಸಾವಿರ ರೂ. ಗೌರವಧನ ನೀಡಲು ಸರ್ಕಾರ ಒಪ್ಪಿಗೆ

Public TV
1 Min Read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇಂದು ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10 ಸಾವಿರ ರೂ. ಗೌರವಧನವನ್ನು ಏ.1ರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ.

ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ. ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು.

ಪೋರ್ಟಲ್ ಸುಧಾರಣೆಗೆ ಸೂಚನೆ: ಮಾಹಿತಿಯನ್ನು ಪೋರ್ಟಲ್‌ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಗಮನ ಸೆಳೆದಾಗ ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

ಗೌರವಧನ ನಿಲ್ಲಿಸದೆ ರಜೆ: ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ, ಪ್ರತಿ ತಿಂಗಳು ಸಿಗುವ ರಜೆ ಕ್ರೋಢೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವ ಧನ ನಿಲ್ಲಿಸದೆ ರಜೆ ಮಂಜೂರು ಮಾಡಲು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದರು.

ಆಯವ್ಯಯ ಪೂರ್ವಭಾವಿ ಸಭೆ ನಡೆಸುವಾಗ ಆಶಾ ಕಾರ್ಯಕರ್ತೆಯರೊಂದಿಗೂ ಸಭೆ ನಡೆಸಲಾಗುವುದು. ಸರ್ಕಾರ ನಿಮ್ಮೊಂದಿಗಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ. ಹೋರಾಟ ಮಾಡುವುದು ಸಂವಿಧಾನ ಬದ್ಧ ಹಕ್ಕು. ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.

Share This Article