ಉತ್ತರ ಕರ್ನಾಟಕಕ್ಕೆ ಅನುದಾನ ಸಿಗದಿರುವುದರಿಂದ ಪ್ರತ್ಯೇಕ ಕರ್ನಾಟಕದ ಕೂಗು ಕೇಳ್ತಿದೆ: ಜಯಮೃತ್ಯುಂಜಯ ಶ್ರೀ

Public TV
1 Min Read

ದಾವಣಗೆರೆ: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಸರಿಯಾಗಿ ಅನುದಾನ ಸಿಗುತ್ತಿಲ್ಲ. ಹೀಗಾಗಿ ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬರುತ್ತಿದೆ ಎಂದು ಕೂಡಲ ಸಂಗಮದ ಜಯಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ.

ನಗರದಲ್ಲಿ ಹಮ್ಮಿಕೊಂಡಿದ್ದ ನಾಯಕ ಜನಾಂಗದ ವಿದ್ಯಾರ್ಥಿನಿಲಯ ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಉತ್ತರ ಕರ್ನಾಟಕ್ಕೆ ನೀಡುವ ಅನುದಾನದಲ್ಲಿ ತಾರತಮ್ಯ ಮಾಡುತ್ತಿದೆ. ಅಲ್ಲದೇ ಶಾಸಕರಾದ ಬಸವರಾಜ್ ಹೊರಟ್ಟಿಯವರಿಗೆ ಸಭಾಪತಿ ಸ್ಥಾನ ಕೊಡದೇ, ಅದನ್ನು ಕಿತ್ತುಕೊಂಡಿದೆ. ಇದರಿಂದಾಗಿ ಉತ್ತರ ಕರ್ನಾಟಕದ ಜನರಿಗೆ ಬೇಸರವಾಗಿದೆ ಎಂದು ಹೇಳಿದ್ದಾರೆ.

ನಮಗೂ ಅಖಂಡ ಕರ್ನಾಟಕದಲ್ಲಿ ಇರಬೇಕು ಎನ್ನುವುದು ಇಷ್ಟ. ಆದರೆ ಈ ರೀತಿ ಧೋರಣೆ ಮಾಡಿದರೆ, ಉಗ್ರವಾದ ಹೋರಾಟದ ಹಾದಿಯನ್ನು ತುಳಿಯುವುದು ಸರ್ವೇಸಾಮಾನ್ಯ. ಅಧಿವೇಶನ ಮುಗಿಯುವುದರೊಳಗಾಗಿ ಕನಿಷ್ಠ ಐದಾರು ಇಲಾಖೆಗಳನ್ನಾದರೂ ಕನ್ನಡ ಸೌಧಕ್ಕೆ ಸ್ಥಳಾಂತರಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.

ಇದೇ ವೇಳೆ ಪ್ರತ್ಯೇಕ ಲಿಂಗಾಯಿತ ಧರ್ಮದ ಹೋರಾಟವನ್ನು ಲೋಕಸಭಾ ಚುನಾವಣೆಯಾದ ಬಳಿಕ ಮುಂದುವರಿಸುತ್ತೇವೆಂಬ ಶಾಸಕ ಎಂ.ಬಿ.ಪಾಟೀಲ್ ಹೇಳಿಕೆಯನ್ನು ಸಮರ್ಥಿಸಿಕೊಂಡು ಮಾತನಾಡಿದ ಅವರು, ಎಂ.ಬಿ.ಪಾಟೀಲ್ ಹೇಳಿರುವುದಕ್ಕೂ ಅರ್ಥವಿದೆ. ಕೆಲ ತಾಂತ್ರಿಕ ಕಾರಣದಿಂದ ಲೋಕಸಭಾ ಚುನಾವಣೆವರೆಗೂ ಹೋರಾಟವನ್ನು ತಡೆಹಿಡಿದಿದ್ದಾರೆ. ಆದರೆ ಅದು ಯಾವ ಕಾರಣಕ್ಕೆ ಎನ್ನುವುದು ಗೊತ್ತಾಗುತ್ತಿಲ್ಲ. ನಮ್ಮ ಹೋರಾಟ ಮಾತ್ರ ನಿರಂತರವಾಗಿ ಸಾಗುತ್ತದೆ. ಕೇಂದ್ರ ಸರ್ಕಾರ ಪ್ರತ್ಯೇಕ ಧರ್ಮದ ಮನವಿಯನ್ನು ತಿರಸ್ಕರಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಲಂಡನ್ ಗೆ ಹೋಗಿ ಬಸವಣ್ಣನವರ ಪ್ರತಿಮೆಯನ್ನು ಉದ್ಘಾಟನೆ ಮಾಡಿ ಬಂದಿದ್ದಾರೆ. ಅವರಿಗೆ ಬಸವಣ್ಣನವರ ಬಗ್ಗೆ ಅಪಾರವಾದ ಗೌರವ ಇದೆ. ಕೆಲವು ಕಾಣದ ಕೈಗಳು ಪ್ರತ್ಯೇಕ ಧರ್ಮದ ಬಗ್ಗೆ ಅವರಿಗೆ ತಪ್ಪು ಮಾಹಿತಿಯನ್ನು ನೀಡಿವೆ. ಈ ಬಗ್ಗೆ ನಾವೆಲ್ಲ ಒಮ್ಮೆ ಹೋಗಿ ಪ್ರಧಾನಿಗಳಿಗೆ ಮನವರಿಕೆ ಮಾಡಿಕೊಡುತ್ತೇವೆ. ಒಂದು ವೇಳೆ ಅದು ಸಾಧ್ಯವಾಗದಿದ್ದರೆ, ಅಂಬೇಡ್ಕರ್ ಸಂವಿಧಾನ ಇದೆ. ಅದರ ಮೂಲಕ ಪ್ರತ್ಯೇಕವಾಗುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *