ಬಳ್ಳಾರಿ ಬಿಜೆಪಿಯಲ್ಲಿ ಧಗ ಧಗ- ನಗರಾಭಿವೃದ್ಧಿ ಪ್ರಾಧಿಕಾರ ನೇಮಕಾತಿ ವಾಪಾಸ್ ಪಡೆದ ಬಿಎಸ್‍ವೈ

Public TV
1 Min Read

ಬಳ್ಳಾರಿ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ದಮ್ಮೂರು ಶೇಖರ್ ಅವರನ್ನು ನೇಮಕ ಮಾಡಿದ್ದ ಸರ್ಕಾರ ಕೂಡಲೇ ಜಾರಿಯಾಗುವಂತೆ ನೇಮಕಾತಿ ಆದೇಶವನ್ನು ವಾಪಾಸ್ ಪಡೆದಿದೆ. ಈ ಕುರಿತು ಪಬ್ಲಿಕ್ ಟಿವಿಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.

ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ದಮ್ಮೂರು ಶೇಖರ್ ಅವರನ್ನು ನೇಮಕ ಮಾಡಲಾಗಿತ್ತು. ಆದರೆ ಜಿಲ್ಲಾ ಕಾರ್ಯಕರ್ತರಿಂದ ನೇಮಕಕ್ಕೆ ವಿರೋಧ ವ್ಯಕ್ತವಾದ ಪರಿಣಾಮ ನೇಮಕಾತಿ ಆದೇಶವನ್ನು ವಾಪಾಸ್ ಪಡೆದಿದ್ದಾಗಿ ತಿಳಿಸಿದರು.

ಇದಕ್ಕೂ ಮುನ್ನ ದಮ್ಮೂರು ಶೇಖರ್ ನೇಮಕ ವಿರೋಧಿಸಿ ಪ್ರತಿಕಾಗೋಷ್ಠಿ ನಡೆಸಿದ್ದ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು, ಜಿಲ್ಲೆಯ 20 ಕ್ಕೂ ಹೆಚ್ಚು ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ ನೀಡುತ್ತೇವೆ ಎಂದು ತಿಳಿಸಿದ್ದರು. ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಅವರು ರಾಜೀನಾಮೆ ಸ್ವೀಕಾರ ಮಾಡಿದ್ದರು. ಬಿಜೆಪಿ ನಾಯಕರ ಕಲಹ ಬಹಿರಂಗವಾಗುತ್ತಿದಂತೆ ಎಚ್ಚೆತ್ತ ಸಿಎಂ ಬಿಎಸ್‍ವೈ ಅವರು, ನೇಮಕಾತಿ ಆದೇಶವನ್ನು ವಾಪಾಸ್ ಪಡೆದ್ದು, ಜಿಲ್ಲಾ ನಾಯಕರೊಂದಿಗೆ ಚರ್ಚೆ ನಡೆಸುತ್ತೇನೆ ಎಂದಿದ್ದಾರೆ.

ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಲಿಂಗಪ್ಪ ಅವರು ಶಾಸಕ ಸೋಮಶೇಖರ ರೆಡ್ಡಿ ಮತ್ತು ಜಿಲ್ಲಾ ಬಿಜೆಪಿ ನಾಯಕರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಹಣ ಕೊಟ್ಟು ಏನನ್ನಾದರೂ ಖರೀದಿ ಮಾಡಲು ಸಾಧ್ಯವಿಲ್ಲ, ಹೀಗೆ ಖರೀದಿ ಮಾಡಲು ಹೋದವರು ಪರಿಸ್ಥಿತಿ ಏನಾಗಿದೆ ಗೊತ್ತಿದೆ ಎಂದು ಹೇಳಿ ಪರೋಕ್ಷವಾಗಿ ಟೀಕಿಸಿದರು. ಅಲ್ಲದೇ ರಾಜೀನಾಮೆ ನೀಡಿ ಮತ್ತೆ ಗೆದ್ದು ಬನ್ನಿ ಎಂದು ಸೋಮಶೇಖರ್ ರೆಡ್ಡಿಗೆ ಸವಾಲು ಎಸೆದರು.

Share This Article
Leave a Comment

Leave a Reply

Your email address will not be published. Required fields are marked *