ಬೆಂಗಳೂರು: ಕ್ವಿಟ್ ಇಂಡಿಯಾ ಚಳವಳಿ ವರ್ಷಾಚರಣೆ ಅಂಗವಾಗಿ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಂಗಳವಾರ ಬೆಂಗಳೂರಿನಲ್ಲಿರುವ ಮೂವರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿ, ಸಿಹಿ ತಿನಿಸುವ ಮೂಲಕ ಗೌರವ ಸಲ್ಲಿಸಿದರು.
ಜೆಪಿ ನಗರದ 4ನೇ ಹಂತದ ಆಶ್ರಯ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿರುವ ಸ್ವಾತಂತ್ರ್ಯ ಹೋರಾಟಗಾರರಾದ ಆರ್. ನಾರಾಯಣಪ್ಪ ಅವರ ಮನೆಗೆ ತೆರಳಿದ ಅವರು, ಆರ್. ನಾರಾಯಣಪ್ಪ ಅವರಿಗೆ ಸನ್ಮಾನಿಸಿ, ಸಿಹಿ ತಿನಿಸಿದರು. ನಂತರ ಅವರಿಗೆ ಪ್ರಮಾಣ ಪತ್ರ ನೀಡಿ, ನಮನ ಸಲ್ಲಿಸಿದರು. ಈ ವೇಳೆ ಕಂದಾಯ ಸಚಿವ ಆರ್. ಅಶೋಕ್ ಭಾಗಿಯಾಗಿದ್ದರು.
ನಂತರ ಬನಶಂಕರಿ 3ನೇ ಹಂತದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರಾದ ಶಂಕರನಾರಾಯಣ ರಾವ್ ಅವರ ಮನೆಗೆ ತೆರಳಿ ಅವರನ್ನು ಸನ್ಮಾನಿಸಿ, ಸಿಹಿ ತಿನಿಸಿದರು. ಅವರೊಂದಿಗೆ ಕೆಲಕಾಲ ಕುಶಲೋಪರಿ ವಿಚಾರಿಸಿದ ರಾಜ್ಯಪಾಲರು, ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿಯಾಗಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟ ತಮಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.
ತದನಂತರ ಮಲ್ಲೇಶ್ವಂರಂನಲ್ಲಿರುವ ನಾಗಭೂಷಣ್ ರಾವ್ ಅವರ ಮನೆಗೆ ತೆರಳಿದ ಗೆಹ್ಲೋಟ್, ನಾಗಭೂಷಣ್ ರಾವ್ ಅವರನ್ನು ಸನ್ಮಾನಿಸಿ, ಸಿಹಿ ತಿನಿಸಿದರು. ನಂತರ ಅವರ ಕುಶಲೋಪರಿ ವಿಚಾರಿಸಿದರು. ಈ ವೇಳೆ ನಾಗಭೂಷಣ್ ಅವರು ಸ್ವಾತಂತ್ರ್ಯದ ಹೋರಾಟಗಳಲ್ಲಿ ಭಾಗಿಯಾದ ಘಟನೆಗಳ ಬಗ್ಗೆ ವಿವರಿಸಿದರು. ಇದರ ಬಗ್ಗೆ ಮಾಹಿತಿ ಪಡೆದ ರಾಜ್ಯಪಾಲರು, ತಮ್ಮ ದೇಶ ಸೇವೆ ನಮ್ಮೆಲ್ಲರಿಗೆ ಸ್ಫೂರ್ತಿ. ನಿಮಗೆ ಹಾಗೂ ನಿಮ್ಮ ಕುಟುಂಬಗಳಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಹೇಳಿ ತಲೆಬಾಗಿ ನಮಿಸಿದರು. ಇದನ್ನೂ ಓದಿ: ಕೇಂದ್ರ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ: ಈಶ್ವರ ಖಂಡ್ರೆ ವಾಗ್ದಾಳಿ
ಈ ವೇಳೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ನಾರಾಯಣ, ಜಿಲ್ಲಾಧಿಕಾರಿ ಶ್ರೀನಿವಾಸ್ ಸೇರಿದಂತೆ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಎಲ್ಲಿದ್ದೀಯಪ್ಪಾ ಕುಮಾರಸ್ವಾಮಿ?: ಸಚಿವ ಅಶ್ವಥ್ನಾರಾಯಣ್ ಲೇವಡಿ