ಸಾವಿನ ಮನೆಯಲ್ಲಿ ಮತಫಸಲು ತೆಗೆಯುವ ನಿರ್ಲಜ್ಜ ನಡೆ ಅಸಹನೀಯ: ಹೆಚ್‌ಡಿಕೆ

Public TV
4 Min Read

– ಅಧಿವೇಶನವನ್ನು ಹಳ್ಳ ಹಿಡಿಸಿದ್ದಕ್ಕೂ ಈ ಎಲ್ಲಾ ಪ್ರತಿಗಾಮಿ ಘಟನೆಗಳಿಗೆ ಸಂಬಂಧ ಇದೆ
– ಹಚ್ಚಹಸಿರಿನ ನಿರ್ಮಲ ಮಲೆನಾಡಿನಲ್ಲಿ ಹೊತ್ತಿ ಉರಿಯುತ್ತಿರುವ ದ್ವೇಷದಳ್ಳುರಿ‌ ಇಡೀ ರಾಜ್ಯಕ್ಕೇ ಶಾಪ

ಬೆಂಗಳೂರು : ಶಿವಮೊಗ್ಗ ಘಟನೆ ಮತ್ತು ಹಿಜಬ್‌ ಪ್ರಕರಣದ ವಿಚಾರಕ್ಕೆ ಕೂಡಲೇ ರಾಜ್ಯಪಾಲ ಮಧ್ಯೆ ಪ್ರವೇಶ ಮಾಡಬೇಕು ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಆಗ್ರಹಿಸಿ ಸರಣಿ ಟ್ವೀಟ್ ಮಾಡಿದ್ದಾರೆ. ರಾಜ್ಯಪಾಲರು ಮಧ್ಯೆ ಪ್ರವೇಶ ಮಾಡುವಂತೆ ಒತ್ತಾಯ ಮಾಡಿದ್ದಾರೆ.

ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ. ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ ಈಗ ವಿರುದ್ಧ ದಿಕ್ಕಿನಲ್ಲಿ ಜಗತ್ತಿನ ಗಮನ ಸೆಳೆದು ಕೃತಾರ್ಥವಾಗುತ್ತಿದೆ. ರಾಷ್ಟ್ರೀಯ ಪಕ್ಷಗಳೆರಡೂ ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿ ಇಟ್ಟು ವಿಕೃತ ಕೇಕೆ ಹಾಕುತ್ತಿವೆ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ

ಶಿಕ್ಷಣದ ಕಾಶಿ ಕರ್ನಾಟಕದ ಶಾಲೆ-ಕಾಲೇಜುಗಳಲ್ಲಿ ಸಂಘರ್ಷದ ವಾತಾವರಣ ಸೃಷ್ಟಿಸಿ ಮಕ್ಕಳಲ್ಲಿ ದ್ವೇಷದ ವಿಷವುಕ್ಕಿಸಲಾಗುತ್ತಿದೆ. ಎರಡು ವರ್ಷದಿಂದ ಕೋವಿಡ್‌ ಹೊಡೆತದಿಂದ ಮಲಗಿರುವ ವಿದ್ಯಾರಂಗವನ್ನು ಸರ್ವನಾಶ ಮಾಡುವ ಹುನ್ನಾರವಷ್ಟೇ ಇದು. ಬಡವರ ಮಕ್ಕಳು ಓದಿ ವಿದ್ಯಾವಂತರಾಗಬಾರದೇ? ಎಂದು ಪ್ರಶ್ನೆ ಮಾಡಿದ್ದಾರೆ.

ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯಾದ್ಯಂತ ರಾಜಕೀಯ ಕೊರೊನಾವನ್ನು ಹಬ್ಬಿಸುತ್ತಿವೆ. ಆ ಮೂಲಕ ಜನರ ಮನಸ್ಸುಗಳನ್ನು ಹಾಳು ಮಾಡುತ್ತಿವೆ. ಈ ಮಹಾಮಾರಿಗೆ ಲಸಿಕೆ ಇಲ್ಲ. ಜನರು ಈ ಹುನ್ನಾರವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಕಿವಿಮಾತು ಹೇಳಿದ್ದಾರೆ.  ಇದನ್ನೂ ಓದಿ: ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಕಹಳೆ – ರಷ್ಯಾ ಮೇಲೆ ಹಣಕಾಸು ಸೇರಿ ವಿವಿಧ ನಿರ್ಬಂಧ ಹೇರಿದ ಅಮೆರಿಕ!

ಅಧಿಕೃತ ಪ್ರತಿಪಕ್ಷದ ಸ್ವಪ್ರತಿಷ್ಠೆ, ಆಡಳಿತ ಪಕ್ಷದ ಅಸಮರ್ಥತೆಗೆ ವಿಧಾನ ಕಲಾಪ ಆಪೋಶನವಾಯಿತು. ನಾನು ಹೊಡೆದಂಗೆ ಮಾಡುತ್ತೇನೆ. ನೀನು ಅತ್ತಂಗೆ ಮಾಡು ಎನ್ನುವಂತೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಕುಮ್ಮಕ್ಕಾಗಿ ಕಲಾಪಕ್ಕೆ ಕುಣಿಕೆ ಬಿಗಿದು ಜನರ ಆಶೋತ್ತರಗಳನ್ನು ಸದನದಲ್ಲೇ ಸಮಾಧಿ ಮಾಡಿದವು.ನಿಗದಿತ ವೇಳಾಪಟ್ಟಿಗಿಂತ 3 ದಿನ ಮೊದಲೇ ಮುಗಿದ ಅಧಿವೇಶನದಲ್ಲಿ ಆರೂವರೆ ಕೋಟಿ ಕನ್ನಡಿಗರಿಗೆ ಸೊನ್ನೆ ಸುತ್ತಲಾಗಿದೆ. ಜನಪ್ರತಿನಿಧಿಗಳ ಕೇವಲ ಟಿಎ-ಡಿಎಗಾಗಿ ಮತ್ತು ವೇತನ, ಭತ್ಯೆ ಏರಿಸಿಕೊಳ್ಳಲಷ್ಟೇ ಅಧಿವೇಶನ ನಡೆದಿದೆ. ಜನರು ಏನೆಂದುಕೊಂಡಾರು? ಎಂಬ ಕನಿಷ್ಠ ಭಯವೂ ಇಲ್ಲದ ಆತ್ಮವಂಚನೆಯ ಪರಾಕಾಷ್ಠೆ ಇದು ಎಂದು ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಟಿವಿ ಚರ್ಚೆಗೆ ಮೋದಿ ಆಹ್ವಾನಿಸಿದ್ದ ಪಾಕ್ ಪ್ರಧಾನಿಗೆ ಖಡಕ್ ಉತ್ತರ ಕೊಟ್ಟ ಶಶಿ ತರೂರ್

ಹಿಜಬ್, ಕೇಸರಿ ಶಾಲು ಮತ್ತು ಶಿವಮೊಗ್ಗದಲ್ಲಿ ನಡೆದ ಯುವಕನ ಕೊಲೆ.ಇವೆಲ್ಲಾ ಯಾರಿಂದ, ಯಾರಿಗಾಗಿ ನಡೆಯುತ್ತಿವೆ? ಈ ಟೂಲ್ʼಕಿಟ್ ರೂವಾರಿಗಳು ಯಾರು? ಅಧಿವೇಶನವನ್ನು ಹಳ್ಳ ಹಿಡಿಸಿದ್ದಕ್ಕೂ ಈ ಎಲ್ಲಾ ಪ್ರತಿಗಾಮಿ ಘಟನೆಗಳಿಗೆ ಸಂಬಂಧ ಇದೆ ಎನ್ನುವ ಅನುಮಾನ ನನ್ನದು ಎಂದಿದ್ದಾರೆ.

ಸತ್ಯವೇನೆಂಬುದು ಜನರಿಗೆ ಗೊತ್ತಾಗಬೇಕು. ಸಾವಿನ ಮನೆಯಲ್ಲಿ ಮತಫಸಲು ತೆಗೆಯುವ ನಿರ್ಲಜ್ಜ ನಡೆ ಅಸಹನೀಯ. ಶಾಂತಿಯನ್ನು ಕದಡಿದ ಪಾಪ ಸುಮ್ಮನೆ ಬಿಡುವುದಿಲ್ಲ. ಹಚ್ಚಹಸಿರಿನ ನಿರ್ಮಲ ಮಲೆನಾಡಿನಲ್ಲಿ ಹೊತ್ತಿ ಉರಿಯುತ್ತಿರುವ ದ್ವೇಷದಳ್ಳುರಿ‌ ಇಡೀ ರಾಜ್ಯಕ್ಕೇ ಶಾಪವಾಗಿ ಪರಿಣಮಿಸಲಿದೆ ಎಂದಿದ್ದಾರೆ.

ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶ ಮಾಡಬೇಕು. ಅವರು ಯಾರ ಕೈಗೊಂಬೆಯೂ ಆಗಬಾರದು ಎಂದು ನಾನು ಮತ್ತೊಮ್ಮೆ ಆಗ್ರಹಿಸುತ್ತೇನೆ. ಶಾಂತಿ-ಭದ್ರತೆ ನಿರ್ವಹಣೆಯಲ್ಲಿ ವಿಫಲವಾಗಿರುವ ಸರಕಾರಕ್ಕೆ ರಾಜ್ಯಪಾಲರು ಕಿವಿ ಹಿಂಡಲೇಬೇಕು ಎಂದು ಒತ್ತಾಯ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *