ಮುಂದಿನ ವಾರ ಕನ್ನಡಪರ ಸಂಘಟನೆಗಳ ಸಭೆ ಕರೆದ ಹೆಚ್.ಡಿ.ಕುಮಾರಸ್ವಾಮಿ

Public TV
3 Min Read

ಬೆಂಗಳೂರು: ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ರಾಜ್ಯವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಂದಿನ ವಾರ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರ ಜೊತೆ ಮಹತ್ವದ ಸಭೆ ನಡೆಸುವುದಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

150ಕ್ಕೂ ಹೆಚ್ಚು ಕನ್ನಡ ಸಂಘಟನೆಗಳ ಮುಖಂಡರು ಕುಮಾರಸ್ವಾಮಿ ಅವರ ಬಿಡದಿ ತೋಟದಲ್ಲಿ ಭೇಟಿಯಾಗಿ ಅವರ ಜೊತೆ ಮಾತುಕತೆ ನಡೆಸಿದರು. ಸಭೆಯ ನಂತರ ಕುಮಾರಸ್ವಾಮಿ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, ರಾಜ್ಯವು ಅನೇಕ ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದೆ. ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ನಾವು ಅನೇಕ ಕಠಿಣ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಇವುಗಳನ್ನು ಪರಿಣಾಮಕಾರಿಯಾಗಿ ಎದುರಿಸಬೇಕಾದರೆ ಎಲ್ಲ ಸಂಘಟನೆಗಳು ಒಟ್ಟಾಗಿ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಚರ್ಚೆ ಮಾಡಲು ಸಭೆ ಕರೆದಿದ್ದೇನೆ ಎಂದರು. ಇದನ್ನೂ ಓದಿ: ಪಿಸ್ತೂಲ್ ತೋರಿಸಿ ಧಮ್ಕಿ ಹಾಕಿದ್ದ ಬಿಜೆಪಿ ಮುಖಂಡನ ಮೇಲೆ ಪ್ರಕರಣ ದಾಖಲು

ರಾಜ್ಯದಲ್ಲಿ ಕನ್ನಡ ಸಂಘಟನೆಗಳ ಜೊತೆಗೆ ರೈತಪರ, ನೀರಾವರಿ ವಿಷಯಗಳನ್ನಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಅನೇಕ ಸಂಘಟನೆಗಳಿವೆ. ಅವೆಲ್ಲವನ್ನು ಒಗ್ಗೂಡಿಸುವ ಕೆಲಸ ಮಾಡಲಾಗುವುದು ಎಂದು ವಿಶ್ವಾಸದ ಮಾತುಗಳನ್ನು ಆಡಿದರು.

ನಮ್ಮ ಸಮಸ್ಯೆಗಳ ಬಗ್ಗೆ ನಾವೇ ಹೋರಾಟ ನಡೆಸಿ ಸಾಧಿಸಿಕೊಳ್ಳಬೇಕಿದೆ. ಆ ಗುರಿ ಸಾಧನೆಗಾಗಿ ಪ್ರಾದೇಶಿಕ ರಾಜಕೀಯ ಶಕ್ತಿಯ ಅಗತ್ಯವಿದೆ. ಈ ದಿಕ್ಕಿನಲ್ಲಿ ಜೆಡಿಎಸ್ ಪಕ್ಷ ಇಂಥ ಸಂಘಟನೆಗಳನ್ನು ಒಗ್ಗೂಡಿಸಿ ಮುಂದಿನ ಕಾರ್ಯತಂತ್ರ ರೂಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಬೆಂಗಳೂರಿನಲ್ಲಿ ಸಭೆ:
ಇಂದು ಸುಮಾರು ನೂರೈವತ್ತಕ್ಕೂ ಹೆಚ್ಚು ಕನ್ನಡ ಮುಖಂಡರ ಜೊತೆ ಚರ್ಚೆ ನಡೆಸಿದ್ದೇನೆ. ಮುಂದಿನ ವಾರ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಇವರೆಲ್ಲರ ಜೊತೆ ಮುಕ್ತವಾಗಿ ಮಾತುಕತೆ ನಡೆಸಲಿದ್ದೇನೆ. ಕನ್ನಡಿಗರ ನಿರುದ್ಯೋಗ ಸಮಸ್ಯೆ, ಖಾಸಗಿ ಹಾಗೂ ಕೇಂದ್ರ ಸರ್ಕಾರದ ಮಟ್ಟದಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಇತ್ಯಾದಿ ವಿಷಯಗಳ ಬಗ್ಗೆ ಮುಖಂಡರಿಂದ ಮಾಹಿತಿ ಪಡೆದುಕೊಳ್ಳುತ್ತೇನೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ರಾಜ್ಯವನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಬೇಕು ಎನ್ನುವ ನಿಟ್ಟಿನಲ್ಲಿ ಚರ್ಚೆ ಮಾಡಲಾಗುತ್ತದೆ. ಪ್ರಾದೇಶಿಕ ಪಕ್ಷದ ಸರ್ಕಾರ ತರುವ ದಿಸೆಯಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ಹೇಳಿದರು.

ರಾಷ್ಟ್ರೀಯ ಪಕ್ಷಗಳು ತಿರಸ್ಕೃತ:
ದೇಶದಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಜನರು ತಿರಸ್ಕರಿಸುತ್ತಿದ್ದಾರೆ. ಪ್ರಾದೇಶಿಕ ಪಕ್ಷಗಳಿಗೆ ಹೆಚ್ಚೆಚ್ಚು ಮಣೆ ಹಾಕುತ್ತಿದ್ದಾರೆ. ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಕಳೆದ 75 ವರ್ಷಗಳಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ನೀರಾವರಿ ಸೇರಿದಂತೆ ವಿವಿಧ ವಲಯಗಳಲ್ಲಿ ಭಾರೀ ಅನ್ಯಾಯ ಮಾಡಿವೆ. ಆದರೆ, ಅಧಿಕಾರದಲ್ಲಿದ್ದ ಅಲ್ಪಸ್ವಲ್ಪ ಅವಧಿಯಲ್ಲೇ ಜೆಡಿಎಸ್ ಪಕ್ಷವು ಜನರ ಆಶೋತ್ತರಗಳನ್ನು ಈಡೇರಿಸಿದೆ. ಈ ಬಗ್ಗೆ ಸರ್ಕಾರದ ಬಳಿ ನೈಜ ದಾಖಲೆಗಳೇ ಇವೆ. ಹಾಗೆಯೇ ಭಾಷೆಗೆ ಸಂಬಂಧಿಸಿದಂತೆ ಕನ್ನಡವು ದೆಹಲಿಯಿಂದ ನಾನಾ ರೀತಿಯ ಕಿರುಕುಳ ಅನುಭವಿಸುತ್ತಿದೆ. ಇದನ್ನು ತಪ್ಪಿಸಬೇಕಿದೆ ಎಂದು ಕರೆ ನೀಡಿದರು.

ಈ ಸಂಘಟನೆಯಲ್ಲಿ ರೈತ ಮುಖಂಡರನ್ನೂ ಒಗ್ಗೂಡಿಲಾಗುವುದು. ಜಾತಿ, ಮತ ಮತ್ತು ಧರ್ಮವನ್ನು ಮೀರಿ ಎಲ್ಲರನ್ನೂ ಒಂದು ವೇದಿಕೆಗೆ ತಂದು ಕಾರ್ಯಕ್ರಮ ರೂಪಿಸಲಾಗುವುದು. ಎಲ್ಲ ಮುಖಂಡರ ಜತೆ ಮುಕ್ತವಾಗಿ ಚರ್ಚೆ ನಡೆಸಲು ನಾನು ಸಿದ್ಧನಿದ್ದೇನೆ. ಎರಡನೇ ಬಾರಿ ನಾನು ಮುಖ್ಯಮಂತ್ರಿಯಾದಾಗ ನನ್ನ 14 ತಿಂಗಳ ಆಡಳಿತಾವಧಿಯಲ್ಲಿ ನಾಲ್ಕೈದು ಬಾರಿ ವಿಧಾನಸಭೆಯಲ್ಲೇ ರೈತರ ಸಭೆ ಮಾಡಿದ್ದೇನೆ. ಆದರೆ ಸರ್ಕಾರ ಅಂಥ ಒಂದು ಸಭೆಯನ್ನೂ ಮಾಡಿಲ್ಲ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ‘ನಿಮಗಾಗಿ ಆಸ್ತಿ ಮಾಡಿಲ್ಲ’ – ಹೆಂಡತಿಗೆ ಮರಣಪತ್ರ ಬರೆದು ಕಂದಾಯ ನೌಕರ ಆತ್ಮಹತ್ಯೆ

ಉತ್ತಮ ನಡವಳಿಕೆ ಅಲ್ಲ!
ಆಡಳಿತ ಪಕ್ಷದ ಶಾಸಕರೇ ಸರ್ಕಾರದ ಬಗ್ಗೆ ಹಾದಿಬೀದಿಯಲ್ಲಿ ಲಘುವಾಗಿ ಮಾತನಾಡುವುದು, ಮಂತ್ರಿಗಳ ಬಗ್ಗೆ ಹೇಳಿಕೆಗಳನ್ನು ನೀಡುವುದು ಉತ್ತಮ ನಡವಳಿಕೆ ಅಲ್ಲ ಎಂದು ಅಭಿಪ್ರಾಯಪಟ್ಟರು.

ಸಮಸ್ಯೆಗಳಿದ್ದರೆ ಪಕ್ಷದ ಚೌಕಟ್ಟಿನೊಳಗೆ ಬಗೆಹರಿಸಿಕೊಳ್ಳಬೇಕು. ಆದು ಬಿಟ್ಟು ಶಿಸ್ತಿನ ಪಕ್ಷ ಎಂದು ‘ಟ್ಯಾಗ್‍ಲೈನ್’ ಹಾಕಿಕೊಂಡ ಪಕ್ಷದಲ್ಲಿ ದಿನನಿತ್ಯ ಶಾಸಕರು ಸರ್ಕಾರ, ಮಂತ್ರಿಗಳ ಬಗ್ಗೆ ಮಾತನಾಡುವುದು ಉತ್ತಮ ಬೆಳವಣಿಗೆ ಅಲ್ಲ ಎಂದರು.

Share This Article
Leave a Comment

Leave a Reply

Your email address will not be published. Required fields are marked *