ನವದೆಹಲಿ: ಬೆಲೆ ಕುಸಿತದಿಂದ ತೀವ್ರ ಕಂಗಾಲಾಗಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ.ಇದನ್ನೂ ಓದಿ: ಅಡ್ಡೂರು ಆಂಗ್ಲ ಸರ್ಕಾರಿ ತರಗತಿ ಉದ್ಘಾಟನೆ – ಶಾಲೆಯ ನೆಲಮಹಡಿ ನಿರ್ಮಾಣದ ಕೊಡುಗೆ ನೀಡಿದ ಝಕಾರಿಯಾ ಜೋಕಟ್ಟೆ
ಪತ್ರದ ಮೂಲಕ ಮನವಿ ಮಾಡಿಕೊಂಡಿರುವ ಅವರು, ಸದ್ಯಕ್ಕೆ ಕೇಂದ್ರ ಸರ್ಕಾರ ನೆರವಿಗೆ ಬಾರದಿದ್ದರೆ ಬೆಳೆಗಾರರಿಗೆ ಬೇರೆ ನೆರವಿನ ಖಾತರಿ ಇಲ್ಲ. ನಫೆಡ್ ಮತ್ತು ಎನ್ಸಿಸಿಎಫ್ ಮೂಲಕ ಮಾವು ಖರೀದಿ ಮಾಡಬೇಕು ಹಾಗೂ ತಕ್ಷಣವೇ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಕರ್ನಾಟಕದ ಗ್ರಾಮೀಣ ಭಾಗದ ಮಾವು ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ಕಷ್ಟಕ್ಕೆ ಸಿಲುಕಿದ್ದಾರೆ. ಸರಿಯಾದ ಬೆಲೆ ಸಿಗದ ಕಾರಣ ಮಾವನ್ನು ರಸ್ತೆಗೆ ಸುರಿಯುತ್ತಿದ್ದಾರೆ. ಇಂತಹ ಕಷ್ಟಕಾಲದಲ್ಲಿ ತಾವು ರೈತರ ನೆರವಿಗೆ ಧಾವಿಸಬೇಕು ಎಂದು ಕೋರಿದ್ದಾರೆ.
ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲಿ ಒಂದಾಗಿದೆ. ಮಾವನ್ನು ರಾಜ್ಯದಲ್ಲಿ ಸುಮಾರು 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ, ಹೆಚ್ಚಾಗಿ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ರಬಿ ಋತುವಿನಲ್ಲಿ ಅಂದಾಜು 8ರಿಂದ 10 ಲಕ್ಷ ಟನ್ ಮಾವು ಈ ಜಿಲ್ಲೆಗಳಲ್ಲಿ ಬೆಳೆಯಲ್ಪಡುತ್ತದೆ. ದುರಾದೃಷ್ಟದ ಸಂಗತಿ ಎಂದರೆ, ಹವಾಮಾನ ವೈಪರೀತ್ಯದಿಂದ ರೋಗರುಜಿನಗಳು ತಗುಲಿ ಪ್ರಸಕ್ತ ವರ್ಷದಲ್ಲಿ ಮಾವಿನ ಇಳುವರಿ ಶೇ.30ರಷ್ಟು ಕಡಿಮೆಯಾಗಿದೆ ಎಂಬ ಅಂಶವನ್ನು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.ಇದನ್ನೂ ಓದಿ: ಭಾರತ್-NCAP ನಲ್ಲಿ ಟಾಟಾ ಹ್ಯಾರಿಯರ್ EVಗೆ ಸಿಕ್ತು 5 ಸ್ಟಾರ್ ರೇಟಿಂಗ್