ಸೂಪರ್ ಸಿಎಂ ರೇವಣ್ಣ ಇಲಾಖೆಯಲ್ಲಿ ಬರೋಬ್ಬರಿ ಒಂದೇ ದಿನ 800 ಅಧಿಕಾರಿಗಳಿಗೆ ಬಡ್ತಿ

Public TV
1 Min Read

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಕೌಂಟ್‍ಡೌನ್ ಆರಂಭವಾಗಿದ್ದರೆ, ಇತ್ತ ಮೈತ್ರಿಯ ಸೂಪರ್ ಸಿಎಂ ಎಂದೇ ಬಿಂಬಿತವಾಗಿರುವ ಸಚಿವ ಹೆಚ್.ಡಿ.ರೇವಣ್ಣರ ಇಲಾಖೆಯಲ್ಲಿ ಒಂದೇ ದಿನದಲ್ಲಿ 800 ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ. ಒಂದೇ ದಿನದಲ್ಲಿ ನೂರಕ್ಕೂ ಹೆಚ್ಚು ಎಂಜಿನಿಯರ್ ಗಳನ್ನು ವರ್ಗಾವಣೆಯ ಆದೇಶಕ್ಕೆ ರೇವಣ್ಣ ಸಹಿ ಹಾಕಿದ್ದಾರೆ.

ಸೋಮವಾರ ಸಚಿವರೆಲ್ಲಾ ರಾಜೀನಾಮೆ ನೀಡಿದ್ದರೂ, ರೇವಣ್ಣ ಅವರು ತಮ್ಮ ಲೋಕೋಪಯೋಗಿ ಇಲಾಖೆಯಲ್ಲಿ ಇನ್ನು ಸಕ್ರೀಯವಾಗಿದ್ದು, ಅಧಿಕಾರಿಗಳ ವರ್ಗಾವಣೆ ಮತ್ತು ಬಡ್ತಿ ಸಂಬಂಧ ತರಾತುರಿಯಲ್ಲಿ ಇಲಾಖಾ ಪದೋನ್ನತಿ ಸಮಿತಿ (ಡಿಸಿಪಿ) ಸಭೆಯನ್ನೂ ನಡೆಸಿದ್ದಾರೆ. ಮೈತ್ರಿ ಉಳಿಸಿಕೊಳ್ಳಲು ಎರಡೂ ಪಕ್ಷದ ಮುಖಂಡರು ಓಡಾಡುತ್ತಿದ್ದರೆ, ರೇವಣ್ಣ ಅವರು ಮಾತ್ರ ವರ್ಗಾವಣೆ ದಂಧೆಯಲ್ಲಿ ತೊಡಗಿಕೊಂಡಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ.

ಸರ್ಕಾರ ಪತನದಂಚಿಗೆ ತಲುಪಿರುವ ಸಮಯದಲ್ಲಿ ದಿಢೀರ್ ಎಂದು ಅಧಿಕಾರಿಗಳಿಗೆ ಬಡ್ತಿ ನೀಡಿರುವ ಹಿಂದೆ ಸಚಿವರ ಸ್ವಹಿತಾಸಕ್ತಿ ಅಡಗಿದೆ ಎಂಬ ಆರೋಪ ಕೇಳಿ ಬಂದಿದೆ. ಆತುರದಲ್ಲಿ ಬಡ್ತಿ ನೀಡುವ ವಿಷಯ ಕುರಿತು ಸಭೆ ನಡೆಸಲು ಅಧಿಕಾರಿಗಳ ಮಟ್ಟದಲ್ಲಿ ವಿರೋಧ ವ್ಯಕ್ತವಾಗಿತ್ತು. ವಿಕಾಸಸೌಧದಲ್ಲಿ ನೆಪಮಾತ್ರಕ್ಕೆ ಸಭೆ ನಡೆಸಿದ ಅಧಿಕಾರಿಗಳು ರಹಸ್ಯ ಸ್ಥಳಕ್ಕೆ ತೆರಳಿ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ರೇವಣ್ಣ ಸಚಿವರಾಗುತ್ತಿದ್ದಂತೆ ಹಲವು ವಿಭಾಗೀಯ ಕಚೇರಿಗಳನ್ನು ಹಾಸನಕ್ಕೆ ಸ್ಥಳಾಂತರಿಸಿಕೊಂಡಿದ್ದರು. ರೇವಣ್ಣ ಅವರ ಈ ನಡೆಗೆ ಸಚಿವ ಸಂಪುಟದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈ ಹಿಂದೆ ಲೋಕೋಪಯೋಗಿ ಇಲಾಖೆಯಲ್ಲಿ ಕೈ ಬಿಟ್ಟ ಪ್ರಕರಣಗಳನ್ನು ಸಹ ಇತ್ಯರ್ಥಪಡಿಸಲು ಸಚಿವರು ಅಧಿಕಾರಿಗಳ ಮೂಲಕ ಮುಂದಾಗಿದ್ದಾರೆ. ಇದರಲ್ಲಿಯೂ ಸಚಿವರ ಸ್ವಹಿತಾಸಕ್ತಿಯೇ ಅಡಗಿದೆ ಎಂಬ ಆರೋಪಗಳು ಬಲವಾಗಿ ಕೇಳಿ ಬಂದಿದೆ.

ಬಡ್ತಿ ಪಡೆದ ಅಧಿಕಾರಿಗಳ ವಿವರ ಹೀಗಿದೆ
ಎಇ ಹುದ್ದೆಯಿಂದ ಎಇಇ ಹುದ್ದೆ-100
ಜೆಇ ಹುದ್ದೆಯಿಂದ ಎಇಇ(2)-200
ಎಇಇ ಹುದ್ದೆಯಿಂದ ಇಇ – 400
ಇಇ ಹುದ್ದೆಯಿಂದ ಎಸ್‍ಇ-126

Share This Article
Leave a Comment

Leave a Reply

Your email address will not be published. Required fields are marked *