ಬೆಂಗಳೂರಿನ ಹಲವು ಕಡೆ ಭಾರೀ ಮಳೆ- ವಾಹನ ಸವಾರರ ಪರದಾಟ

Public TV
1 Min Read

ಬೆಂಗಳೂರು: ಸಿಲಿಕಾನ್ ಸಿಟಿ (Rain in Bengaluru) ಯ ಹಲವೆಡೆ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದೆ.

ಮೆಜೆಸ್ಟಿಕ್, ಕೆಆರ್ ಮಾರ್ಕೆಟ್, ಟೌನ್ ಹಾಲ್, ಕಾರ್ಪೋರೇಷನ್ ಹಾಗೂ ಕೋರಮಂಗಲ ಸುತ್ತಮುತ್ತ ಭಾರೀ ಮಳೆಯಾಗಿದ್ದು, ವಾಹನ ಸವಾರರು ಕೆಲಕಾಲ ಪರದಾಟ ಅನುಭವಿಸಿದರು. ಯಮಲೂರಿನ ರಸ್ತೆಯಲ್ಲಿ ಮಳೆ ನೀರು ತುಂಬಿಹೋಗಿತ್ತು. ಕೆರೆಯಂತಾದ ರಸ್ತೆಯಿಂದಾಗಿ ವಾಹನ ಸವಾರರು ಪರದಾಡಿದ್ದಾರೆ.

ಮಾರತಹಳ್ಳಿ ಬಳಿ ಸಪ್ತಗಿರಿ ಲೇಔಟ್ ನಲ್ಲಿ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಮನೆಯಿಂದ ನೀರು ಹೊರಹಾಕಲು ಜನರ ಹರಸಾಹಸ ಪಟ್ಟಿದ್ದಾರೆ. ಇದನ್ನೂ ಓದಿ: ಅತೀ ತೀವ್ರ ತೂಫಾನ್ ಆಗಿ ಬದಲಾದ ಬಿಪರ್ಜೋಯ್- ಮುಂಬೈನಲ್ಲಿ ವೈಮಾನಿಕ ಸೇವೆಗಳಲ್ಲಿ ವ್ಯತ್ಯಯ

ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರಿ ಮಳೆಯಾಗುವ ಸಂಭವವಿದೆ. ಕರಾವಳಿ ಭಾಗ ಸೇರಿ ರಾಜ್ಯದ ನಾನಾ ಭಾಗದಲ್ಲಿ ವರುಣಾರ್ಭಟದ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಬಹುತೇಕ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಮಳೆಯಾಗಲಿದೆ.

ರಾಜ್ಯದ ಕೆಲವೆಡೆ ಬಿರುಗಾಳಿ, ಗುಡುಗು ಮಿಂಚಿನ ಸಾಧ್ಯತೆ. ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಸಾಗುವ ಸಾಧ್ಯತೆ ಇದೆ. ಮಂಗಳವಾರ ಕೂಡ ಗಾಳಿ ವೇಗ ಇದೇ ರೀತಿ ಮುಂದುವರೆಯುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40 ರಿಂದ 45 ಮೀಟರ್‍ನಿಂದ 55 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಂಭವವಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

Share This Article