ಬೆಂಗಳೂರಿನಲ್ಲಿ ಇನ್ನೆರಡು ದಿನ ಕಾಡಲಿದ್ದಾನೆ ವರುಣ; ಶಾಲೆಗಳಿಗೆ ರಜೆ ಘೋಷಣೆ

Public TV
2 Min Read

– ಸಿಲಿಕಾನ್ ಸಿಟಿಗೆ ಇಂದು ಆರೆಂಜ್, ನಾಳೆ ಯೆಲ್ಲೋ ಅಲರ್ಟ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಜನರನ್ನು ಹೈರಾಣಾಗಿಸಿದೆ. ಮುಂದಿನ ಎರಡು ದಿನ ಕೂಡ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಬೆಂಗಳೂರು (Bengaluru Rains) ಸೇರಿದಂತೆ ರಾಜ್ಯಾದ್ಯಂತ ಹವಾಮಾನ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ.

ಬೆಂಗಳೂರಲ್ಲಿ ಮೊನ್ನೆ ರಾತ್ರಿ ಆರಂಭವಾದ ಮಳೆ ನಿನ್ನೆಯೆಲ್ಲ ಸುರಿದು ನಗರದಲ್ಲಿ ಹತ್ತಾರು ಅವಾಂತರಗಳನ್ನ ಸೃಷ್ಟಿ ಮಾಡಿತ್ತು. ನಗರದ ಹಲವೆಡೆ ಜನಜೀವನ ಅಸ್ತವ್ಯಸ್ತ ಮಾಡಿದೆ. ಈ ಮಧ್ಯೆ ಹವಾಮಾನ ಇಲಾಖೆ ಮತ್ತೊಮ್ಮೆ ಎಚ್ಚರಿಕೆಯನ್ನ ನೀಡಿದ್ದು, ನಗರದಲ್ಲಿ ಮತ್ತೆರೆಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಎಫೆಕ್ಟ್ನಿಂದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಸೆರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದು ಮುಂದಿನ ಎರಡು ದಿನ ಮುಂದುವರೆಯಲಿದ್ದು, ಇಂದು, ನಾಳೆ ರಾಜ್ಯದ್ಯಾಂತ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಉಡುಪಿ, ದಕ್ಷಿಣ ಕನ್ನಡ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರಿನಲ್ಲಿ ಇಂದು, ನಾಳೆ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಬುಧವಾರ ನಗರದ ಪ್ರಾಥಮಿಕ ಮತ್ತು ಫ್ರೌಡ ಶಾಲಾಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ಅತ್ತ ಐಟಿ ಕಂಪನಿಗಳು ಕೂಡ ಮಳೆಯ ಎಫೆಕ್ಟ್ ಹಿನ್ನೆಲೆ ತಮ್ಮ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಂಗೆ ಅವಕಾಶ ನೀಡಿದ್ದಾರೆ.

ನಗರದ ಮಳೆ ಅವಾಂತರದ ಸಂಬಂಧ ಡಿಸಿಎಂ ಕೆಲ ಮಹತ್ವದ ಸೂಚನೆ ನೀಡಿದ್ದಾರೆ. ಮಳೆ ನೀರು ಮನೆಗಳಿಗೆ ನುಗ್ಗಿ ತೊಂದರೆಯಾದ ಕುಟುಂಬಗಳಿಗೆ ಪಾಲಿಕೆಯಿಂದ 10 ಸಾವಿರ ರೂ. ಶೀಘ್ರ ಪರಿಹಾರ ಬಿಡುಗಡೆಗೆ ಸೂಚನೆ ನೀಡಿದ್ದಾರೆ. ಅಲ್ಲದೆ ಕೂಡಲೇ ಸಮಸ್ಯೆ ಇರುವ ಪ್ರದೇಶಗಳಲ್ಲಿ ಸಮಸ್ಯೆ ಬಗೆಹರಿಸಲು ಸೂಚನೆ ನೀಡಲಾಗಿದೆ. ಪಾಲಿಕೆ ವಾರ್ ರೂಂ 24 ಗಂಟೆ ಕೆಲಸ ಮಾಡುವಂತೆ ಸೂಚಿಸಿದ್ದು, ಮಳೆ ಎದುರಿಸಲು ಬೇಕಾದ ಸಿದ್ಧತೆಗಳನ್ನ ಶೀಘ್ರ ಕಾರ್ಯರೂಪಕ್ಕೆ ತರುವಂತೆ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ.

Share This Article