ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಆಗಸ್ಟ್ 15ರಿಂದ 19ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ಅವರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯ ಮೇಲೂ ಇದು ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡಿನಲ್ಲಿ ಗಾಳಿ ಬೀಸುತ್ತಿದ್ದು, ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಮುಂದಿನ ಐದು ದಿನ ಕರಾವಳಿ ಭಾಗದಲ್ಲಿ ಅತಿಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.
ಪಶ್ಚಿಮಘಟ್ಟ ಪ್ರದೇಶಗಳಲ್ಲೂ ಭಾರೀ ಮಳೆಯಾಗೋ ಮುನ್ಸೂಚನೆ ದೊರಕಿದೆ. ದಕ್ಷಿಣ ಒಳನಾಡಿನಲ್ಲಿ ಕೂಡ 16ರಿಂದ 18ರವರೆಗೆ ಮಳೆಯಾಗಲಿದೆ. ಬೆಂಗಳೂರು, ಕೋಲಾರ, ಮಂಡ್ಯ, ಮೈಸೂರು ತುಮಕೂರು ಹಾಗೂ ಸುತ್ತ ಮುತ್ತಿನ ಪ್ರದೇಶದಲ್ಲಿ ಸಾಧಾರಣ ಮಳೆ ಆಗಲಿದೆ. ಹಾಗೆಯೇ ಬೆಂಗಳೂರಿನಲ್ಲಿ ಒಮ್ಮೊಮ್ಮೆ ಅತಿ ಹೆಚ್ಚು ಮಳೆಯಾಗೋ ಸಾಧ್ಯತೆ ಕೂಡ ಇದೆ ಎಂದು ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.