ಕಾರು ಗುದ್ದಿದ ರಭಸಕ್ಕೆ 4 ಅಂತಸ್ತಿನ ಕಟ್ಟಡ ಕುಸಿತ – 10 ಮಂದಿ ದುರ್ಮರಣ

Public TV
1 Min Read

ಭೋಪಾಲ್: ನಾಲ್ಕು ಅಂತಸ್ತಿನ ಹಳೆಯ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ.

ಭಾನುವಾರ ರಾತ್ರಿ ಸಾರ್ವಟೆ ಬಸ್ ನಿಲ್ದಾಣದ ಬಳಿ ಸುಮಾರು ರಾತ್ರಿ 9.15 ಕ್ಕೆ ಈ ದುರ್ಘಟನೆ ಸಂಭವಿಸಿದೆ. ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಲಾಡ್ಜ್ ಮತ್ತು ಹೋಟೆಲ್ ಗಳು ಇದ್ದವು. ಹಳೆಯ ಕಟ್ಟವಾಗಿದ್ದರಿಂದ ವೇಗವಾಗಿ ಬಂದ ಕಾರೊಂದು ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ 4 ಅಂತಸ್ತಿನ ಹಳೆಯ ಕಟ್ಟಡ ಕುಸಿದುಬಿದ್ದಿದೆ.

ಕಾರು ಗುದ್ದಿದ ತಕ್ಷಣ ಕಟ್ಟಡ ನೆಲಕ್ಕುರುಳಿದ್ದು, ಈ ವೇಳೆ ಕಟ್ಟಡದಲ್ಲಿ ಸಿಲುಕಿ 10 ಮಂದಿ ಮೃತಪಟ್ಟಿದ್ದು, 7 ಜನರು ಗಂಭೀರ ಗಾಯಗೊಂಡಿದ್ದಾರೆ. ಹಲವು ಮಂದಿ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರಬಹುದು ಎಂದು ಅಂದಾಜಿಸಲಾಗಿದೆ.

ಈ ಘಟನೆ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಹಲವು ಕಾರುಗಳು ಸೇರಿದಂತೆ ಆಟೋಗಳು ಕೂಡ ಕಟ್ಟಡದ ಅವಶೇಷಗಳಡಿ ಸಿಲುಕಿವೆ ಎನ್ನಲಾಗುತ್ತಿದೆ. ಕಟ್ಟಡ ಕುಸಿತದ ಮಾಹಿತಿ ಸಿಕ್ಕ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಶುರು ಮಾಡಿದ್ದಾರೆ. ಕಟ್ಟಡದಲ್ಲಿ ಹಲವು ಜನರು ಸಿಲುಕಿರುವ ಶಂಕೆ ಇದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಜೆಸಿಬಿಯಿಂದ ರಕ್ಷಣೆ ಕಾರ್ಯ ನಡೆಸಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಿದ್ದಾರೆ.

ಕಟ್ಟಡದ ಅವಶೇಷಗಳಡಿಯಲ್ಲಿ ಇನ್ನೂ 20 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಐದು ಗಾಯಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಅವರನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆಯಿಂದ ಸಾವು-ನೋವು ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಡಿಐಜಿ ಹರಿನಾರಾಯಣ ಮಿಶ್ರಾ ತಿಳಿಸಿದ್ದಾರೆ.

2 ಲಕ್ಷ ಪರಿಹಾರ: ಈ ಘಟನೆಯಲ್ಲಿ ಮೃತಪಟ್ಟಿರುವ ವ್ಯಕ್ತಿಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡಿರುವ ವ್ಯಕ್ತಿಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘೋಷಣೆ ಮಾಡಿದ್ದಾರೆ. ಪ್ರಸ್ತುತ ಕಾರ್ಯಾಚರಣೆ ಮುಂದುವರೆದಿದೆ.

Share This Article
Leave a Comment

Leave a Reply

Your email address will not be published. Required fields are marked *