ಗಾಳಿ ಸುದ್ದಿಗೆ ಆತಂಕಪಡಬೇಡಿ, ಆರೋಗ್ಯವಾಗಿದ್ದೇನೆ: ಸಿದ್ದರಾಮಯ್ಯ

Public TV
1 Min Read

ಬೆಂಗಳೂರು: ಗಾಳಿ ಸುದ್ದಿಗಳಿಗೆ ಆತಂಕಪಡಬೇಡಿ. ನಾನು ಆರೋಗ್ಯವಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಆರೋಗ್ಯದ ಕುರಿತು ಟ್ವೀಟ್ ಮಾಡಿದ ಅವರು, ನಾನು ಆರೋಗ್ಯವಾಗಿದ್ದೇನೆ. ನಿಯಮಿತವಾದ ಆರೋಗ್ಯ ತಪಾಸಣೆಗಾಗಿ ವೈದ್ಯರ ಬಳಿ ಹೋಗಿದ್ದೇನೆ. ಗಾಳಿ ಸುದ್ದಿಗಳನ್ನು ನಂಬಿ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಆಗಿದ್ದೇನು..?
ಇಂದು ಬೆಳಗ್ಗೆ 6:30 ಸುಮಾರಿಗೆ ಸಿದ್ದರಾಮಯ್ಯಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಎದೆನೋವು ಕೂಡ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸಂಬಂಧಿಕರು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇತ್ತೀಚೆಗೆ ಉಪಚುನಾವಣೆಯಲ್ಲಿ ಸಕ್ರಿಯವಾಗಿದ್ದ ಸಿದ್ದರಾಮಯ್ಯ, ಸ್ವಲ್ಪ ದಣಿದಿದ್ದರು. ಈ ಕಾರಣಕ್ಕೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಅವರ ಕುಟುಂಬ ವೈದ್ಯರ ಸಲಹೆಯ ಮೇರೆಗೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅವರನ್ನು ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡುವುದಿಲ್ಲ. ಪರೀಕ್ಷೆ ಮಾಡಿ ವಾಪಸ್ ಮನೆಗೆ ಕಳುಹಿಸಲಾಗುವುದು ಎಂದು ವೈದ್ಯರು ಹೇಳಿದ್ದಾರೆ.

ಉಪಚುನಾವಣೆಯ ಕಾಂಗ್ರೆಸ್ ನೇತೃತ್ವ ವಹಿಸಿದ್ದ ಸಿದ್ದರಾಮಯ್ಯ, 15 ಕ್ಷೇತ್ರಗಳಲ್ಲಿ 2 ಕ್ಷೇತ್ರದಲ್ಲಿ ಮಾತ್ರ ಪಕ್ಷವನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದರು. ಉಪಚುನಾವಣೆಯಲ್ಲಿ ಪಕ್ಷ ಹೀನಾಯವಾಗಿ ಸೋತಿದ್ದಕ್ಕೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ತಮ್ಮ ಸಿಎಲ್‍ಪಿ ನಾಯಕನ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದರು.

 

Share This Article
Leave a Comment

Leave a Reply

Your email address will not be published. Required fields are marked *