ಮೈಸೂರು: ಚಾಲೆಂಜಿಂಗ್ ಸ್ಟಾರ್ ಅವರ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.
ದರ್ಶನ್ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಸಂಸದ ಪ್ರತಾಪ್ ಸಿಂಹ, “ನಾನು ಕೆಂಚಾಲೋ ಮಂಚಾಲೋ ಕಾಲದಿಂದಲೂ ದರ್ಶನ್ ಅಭಿಮಾನಿಯಾಗಿದ್ದೇನೆ. ಸದ್ಯ ದರ್ಶನ್ ಅವರು ಆರೋಗ್ಯವಾಗಿದ್ದಾರೆ. ಆಕಸ್ಮಿಕವಾಗಿ ನಡೆದ ಅಪಘಾತದಲ್ಲಿ ಅವರ ಕೈ ಮೂಳೆ ಮುರಿದು ಸ್ವಲ್ಪ ಗಾಯವಾಗಿದೆ. ಬಿಡುವಿಲ್ಲದ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದ ಅವರಿಗೆ ಇದು ವೆಲ್ಕಮ್ ಬ್ರೇಕ್ ಆಗಿದೆ. ಈ ಮೂಲಕ ಅವರು ಸ್ವಲ್ಪ ದಿನ ವಿಶ್ರಾಂತಿ ಪಡೆಯಲಿ” ಎಂದು ಹೇಳಿದರು.
ಹಾಸ್ಯನಟ ಹಾಗೂ ಚಲನಚಿತ್ರ ನಿರ್ಮಾಪಕ ಬುಲೆಟ್ ಪ್ರಕಾಶ್ರವರು ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಭೇಟಿ ನೀಡಿ ಚಾಲೆಂಜಿಂಗ್ ಸ್ಟಾರ್ ದರ್ಶನ್ರವರ ಆರೋಗ್ಯ ವಿಚಾರಿಸಿದರು. ಸೋಮವಾರ ನಸುಕಿನ ಜಾವ ನಡೆದ ಕಾರು ಅಪಘಾತದಲ್ಲಿ ದರ್ಶನ್ ಗಾಯಗೊಂಡು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ಬಳಿಕ ಇಡೀ ಚಿತ್ರರಂಗವೇ ದರ್ಶನ್ರ ಆರೋಗ್ಯ ವಿಚಾರಿಸಲು ಬರುತ್ತಿದೆ. ಮಂಗಳವಾರ ಹ್ಯಾಟ್ರಿಕ್ ಹಿರೋ ಶಿವರಾಜ್ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.
ಶನಿವಾರ ನಟರಾದ ದರ್ಶನ್, ಸೃಜನ್ ಲೋಕೇಶ್ ಹಾಗೂ ದೇವರಾಜ್ ಕುಟುಂಬ ಮೈಸೂರು ಮೃಗಾಲಯಕ್ಕೆ ತೆರಳಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದರು. ಆ ಬಳಿಕ ಮೈಸೂರಿನಲ್ಲೇ ಉಳಿದುಕೊಂಡು ಸೋಮವಾರ ನಸುಕಿನ ಜಾವ ಅಲ್ಲಿಂದ ಬೆಂಗಳೂರಿಗೆ ಹೊರಟಿದ್ದರು. ಹೀಗೆ ಕಾರ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಮೈಸೂರು ಹೊರವಲಯದ ರಿಂಗ್ ರೋಡ್ ಬಳಿ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದರ್ಶನ್ ಅವರ ಬಲಗೈನ ಮೂಳೆ ಮುರಿದಿದ್ದು, ದೇವರಾಜ್, ಪ್ರಜ್ವಲ್ ದೇವರಾಜ್ ಹಾಗೂ ಆಂಟೋನಿ ಅವರಿಗೂ ಕೂಡ ಸಣ್ಣಪುಟ್ಟ ಗಾಯಗಳಾಗಿತ್ತು. ಕೂಡಲೇ ಎಲ್ಲರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಎಲ್ಲರಿಗೂ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ದೇವರಾಜ್ ಹಾಗೂ ಪ್ರಜ್ವಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv