ಅತ್ತ ಡಿಕೆಶಿಗೆ ಜೈಲು, ಇತ್ತ ಜಮೀರ್ ಅಹ್ಮದ್‍ಗೆ ಸಿಬಿಐ ನೋಟಿಸ್

Public TV
3 Min Read

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ತಿಹಾರ್ ಜೈಲಿಗೆ ಶಿಫ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್‍ನ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ.

ಜಮೀರ್ ಅಹ್ಮದ್ 90 ಕೋಟಿ ರೂ. ಬೆಲೆಬಾಳುವ ನಿವೇಶನವನ್ನು ಐಎಂಎಗೆ 9.38 ಕೋಟಿ ರೂ.ಗಳಿಗೆ ಮಾರಾಟ ಮಾಡಿ, ಬಾಕಿ 80 ಕೋಟಿ ರೂ.ಗಳನ್ನು ಹವಾಲಾ ರೂಪದಲ್ಲಿ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಜಮೀರ್ ಅಹ್ಮದ್ ಅವರಿಗೆ ನೋಟಿಸ್ ನೀಡಿದೆ. ಇದನ್ನೂ ಓದಿ: ಡಿಕೆಶಿಗೆ ತಿಹಾರ್ ಜೈಲೇ ಗತಿ – ಶನಿವಾರಕ್ಕೆ ವಿಚಾರಣೆ ಮುಂದೂಡಿಕೆ

ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮೊನ್ನೆಯಷ್ಟೇ ಹೈಕೋರ್ಟ್ ಸಿಬಿಐ ವಿರುದ್ಧ ಚಾಟಿ ಬೀಸಿತ್ತು. ಈ ಪ್ರಕರಣವು ತನಿಖೆ ಕುಂಠಿತವಾಗುತ್ತಿದೆ. ತನಿಖೆ ಪ್ರಗತಿಯಲ್ಲಿ ಇಲ್ಲವೆಂದು ಬೇಸರ ವ್ಯಕ್ತಪಡಿಸಿತ್ತು. ಹೀಗಾಗಿ ತನಿಖೆ ಚುರುಕುಗೊಳಿಸಿರುವ ಸಿಬಿಐ, ಪ್ರಮುಖ ಆರೋಪಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸುತ್ತಿದೆ. ಇದನ್ನೂ ಓದಿ: ಮಾಜಿ ಸಚಿವರಿಗೆ ಟ್ರಾಫಿಕ್ ನಿಯಮ ಅನ್ವಯ ಆಗಲ್ವಾ? ರಸ್ತೆಯಲ್ಲಿಯೇ ಬಸ್ ಪಾರ್ಕ್

ನೋಟಿಸ್ ಹಿನ್ನೆಲೆಯಲ್ಲಿ ಮಾಜಿ ಸಚಿವರು ಗುರುವಾರ ಬೆಳಗ್ಗೆ 11:30 ಗಂಟೆಗೆ ಸಿಬಿಐ ಕಚೇರಿಗೆ ಹೋಗಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿರುವ ಅವರು, ಶುಕ್ರವಾರ ವಿಚಾರಣೆಗೆ ಬರುವುದಕ್ಕೆ ಆಗುವುದಿಲ್ಲ. ಪೂರ್ವ ನಿಯೋಜಿತ ಕಾರ್ಯಕ್ರಮವಿದೆ. ದೇವರ ಕಾರ್ಯದ ನಿಮಿತ್ತ ರಾಜಸ್ಥಾನದ ಜೈಪುರಕ್ಕೆ ತೆರಳಬೇಕಿದೆ. ವಿಚಾರಣೆಗೆ ಕಾಲಾವಕಾಶ ನೀಡಿ ಎಂದು ಕೇಳಿದ್ದಾರೆ ಎನ್ನಲಾಗಿದೆ.

ಜಮೀರ್ ವಿರುದ್ಧದ ಆರೋಪವೇನು?:
ಮಾಜಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಜೂನ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಬಿಜೆಪಿ ಮುಖಂಡ ಎನ್. ರಮೇಶ್ ಅವರು, 90 ಕೋಟಿ ರೂ. ಮೌಲ್ಯದ ನಿವೇಶನವನ್ನು ಕೇವಲ 9.38 ಕೋಟಿ ರೂ.ಗೆ ಮಾರಾಟ ಮಾಡಿದ್ದು, ಉಳಿದ 80 ಕೋಟಿ ರೂ.ಗಳನ್ನು ಕಪ್ಪು ಹಣ ಹವಾಲಾ ರೂಪದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಪಡೆದಿದ್ದಾರೆ. ವಿವಾದಿತ ನಿವೇಶನವನ್ನು ಅಕ್ರಮ ಮಾರಾಟ ಮಾಡಿ ಉಳಿದ ಹಣವನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. 2001ರಲ್ಲಿ ಕೇವಲ ಎರಡೂವರೆ ಕೋಟಿ ರೂ.ಗೆ ನಿವೇಶನವನ್ನು ಖರೀದಿಸಿ ಅಕ್ರಮವಾಗಿ ಐಎಂಎಗೆ ಮಾರಾಟ ಮಾಡಿದ್ದಾರೆ ಎಂದು ದೂರಿದ್ದರು.

ಭೂ ಮಾಲೀಕನಿಗೆ ಕೇವಲ ಎರಡೂವರೆ ಕೋಟಿ ರೂ.ಗಳನ್ನು ನೀಡಿ ಜಮೀನು ಖರೀದಿಸಿದ್ದು, ಅದೇ ಜಮೀನನ್ನು 9 ಕೋಟಿ ರೂ.ಗೆ ಐಎಂಎ ಮಾಲೀಕನಿಗೆ ಮಾರಾಟ ಮಾಡಿದ್ದಾರೆ. ಆದರೆ ಆ ಜಮೀನಿನ ಸದ್ಯದ ಮಾರುಕಟ್ಟೆ ಬೆಲೆ ಕನಿಷ್ಟ 90 ಕೋಟಿ ರೂ.ಗಳಾಗಿದ್ದು, 2018ರಲ್ಲಿ ಮನ್ಸೂರ್ ಖಾನ್‍ಗೆ ಕೇವಲ 9.38 ಕೋಟಿ ರೂ.ಗೆ ಜಮೀರ್ ಅಹ್ಮದ್ ಖಾನ್ ಮಾರಾಟ ಮಾಡಿದ್ದಾರೆ. ಉಳಿದ 80 ಕೋಟಿ ರೂ. ಕಪ್ಪು ಹಣವನ್ನು ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

9 ವರ್ಷಗಳಿಂದ ರಿಚ್ಮಂಡ್ ಟೌನ್‍ನ ಸರ್ಪಟೈನ್ ಸ್ಟ್ರೀಟ್‍ನಲ್ಲಿರುವ ವಿವಾದಿತ ನಿವೇಶನ ಕೋರ್ಟ್ ಅಂಗಳದಲ್ಲಿದ್ದು, 2014ರಲ್ಲಿ ಆಸ್ತಿ ಪ್ರಕರಣ ಕೋರ್ಟಿನಲ್ಲಿರುವಾಗಲೇ ಜಮೀರ್ ಪಾಲಿಕೆಗೆ ಪತ್ರ ಬರೆದು ಆಸ್ತಿಯನ್ನು ನಾನು ಖರೀದಿಸಿದ್ದೇನೆ ಖಾತೆ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ. ಆಗಲೇ ಪಾಲಿಕೆ ನೌಕರರು ಈ ಆಸ್ತಿ ವ್ಯಾಜ್ಯ ಕೋರ್ಟ್ ನಲ್ಲಿದೆ. ಹೀಗಾಗಿ ಖಾತೆ ಮಾಡಿಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು. ಹೀಗಿದ್ದರೂ ಸಹ ಹತ್ತು ಹಲವು ಬಾರಿ ಪತ್ರ ವ್ಯವಹಾರ ನಡೆಸಿ ಖಾತೆ ಮಾಡಿಸಿಕೊಂಡಿದ್ದಾರೆ ಎಂದು ರಮೇಶ್ ಹೇಳಿದ್ದರು.

ತಾವು ಖಾತೆ ಮಾಡಿಸಿದ ನಂತರ ಮನ್ಸೂರ್ ಖಾನ್‍ಗೆ ಮಾರಾಟ ಮಾಡಿರುವ ಜಮೀನಿಗೆ ಖಾತೆ ಮಾಡಿಸಲು ಜಮೀರ್ ಕಸರತ್ತು ಮಾಡಿದ್ದಾರೆ. ಸಚಿವ ಜಮೀರ್ ಸುಳ್ಳು ಲೆಕ್ಕ ಕೊಡುವುದರಲ್ಲಿ ಎಕ್ಸ್‍ಪರ್ಟ್. ಚುನಾವಣಾ ಪ್ರಮಾಣಪತ್ರದಲ್ಲೇ ತಪ್ಪು ಮಾಹಿತಿ ನೀಡಿದ್ದು, 2018ರ ವಿಧಾನಸಭೆ ಚುನಾವಣೆಯಲ್ಲಿ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿಯೂ ಮಾಜಿ ಶಾಸಕ ಚೆಲುವರಾಯ ಸ್ವಾಮಿಯಿಂದ 42 ಲಕ್ಷ ಸಾಲ ಪಡೆದಿರುವುದಾಗಿ ಸುಳ್ಳು ಮಾಹಿತಿ ನೀಡಿದ್ದಾರೆ. ಆದರೆ, ಚೆಲುವರಾಯ ಸ್ವಾಮಿ ಅದೇ 2018ರ ವಿಧಾನಸಭಾ ಚುನಾವಣೆಯಲ್ಲಿ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಜಮೀರ್ ಅಹ್ಮದ್ ಖಾನ್ ಸಾಲ ನೀಡಿರುವ ಮಾಹಿತಿಯನ್ನೇ ನೀಡಿಲ್ಲ ಎಂದು ಎನ್.ಆರ್.ರಮೇಶ್ ಆರೋಪಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *