ರಾಷ್ಟ್ರೀಯ ಶಿಕ್ಷಣ ನೀತಿ: ಕಾಂಗ್ರೆಸ್ ವಿರುದ್ಧ ಅಶ್ವತ್ಥನಾರಾಯಣ ಕಿಡಿ

Public TV
2 Min Read

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಕಾಂಗ್ರೆಸ್ ಪಕ್ಷ ದ್ವಂದ್ವ ನೀತಿ ಅನುಸರಿಸುವ ಮೂಲಕ ರಾಜ್ಯದ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಗಂಭೀರ ಆರೋಪ ಮಾಡಿದರು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಬೆಂಗಳೂರಿನಲ್ಲಿಂದು ಬಿಜೆಪಿ ಕೇಂದ್ರ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ರಾಜ್ಯಕ್ಕೆ ನೂತನ ಶಿಕ್ಷಣ ನೀತಿ ಅವಶ್ಯಕತೆ ಇಲ್ಲ, ಇದರ ಜಾರಿಗೆ ಬಿಡಲ್ಲ: ಡಿಕೆಶಿ ಎಚ್ಚರಿಕೆ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಆತುರಾತುರವಾಗಿ ಜಾರಿ ಮಾಡಿಲ್ಲ. ಸಾಕಷ್ಟು ಪ್ರಕ್ರಿಯೆ ನಡೆದಿದೆ. ಅಪಾರ ಸಿದ್ಧತೆ ಮಾಡಿಕೊಂಡು ಜಾರಿಗೆ ತರಲಾಗಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಹೊಸ ಶಿಕ್ಷಣ ನೀತಿಯ ಬಗ್ಗೆ ಎಲ್ಲ ಪ್ರಕ್ರಿಯೆಗಳು ಶುರುವಾದವು. 2015ರಿಂದ ಶುರುವಾದ ಈ ಪ್ರಕ್ರಿಯೆಗಳ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವ ಪಕ್ಷದ ಸರ್ಕಾರವಿತ್ತು? ಯಾರು ಮುಖ್ಯಮಂತ್ರಿ ಆಗಿದ್ದರು ಎಂದು ಜನರಿಗೆ ಗೊತ್ತಿದೆ ಎಂದು ಸಿದ್ದರಾಮಯ್ಯರನ್ನು ಕುಟುಕಿದರು. ಇದನ್ನೂ ಓದಿ: ಪಂಚಮಸಾಲಿ 2ಎ ಮೀಸಲಾತಿ- ಸದನದಲ್ಲಿ ಸಿಎಂ ಉತ್ತರ

ಅಂದು ದೇಶದ 2.50 ಲಕ್ಷ ಗ್ರಾಮ ಪಂಚಾಯಿತಿಗಳ ಜತೆ ಸಂವಹನ ನಡೆಸಲಾಯಿತು. ರಾಜ್ಯದಲ್ಲೂ ಈ ಪ್ರಕ್ರಿಯೆ ನಡೆಯಿತು. ಈ ಎಲ್ಲಾ ಮಹತ್ವದ ಪ್ರಕ್ರಿಯೆಗಳಲ್ಲೂ ಅಂದಿನ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಸಕ್ರಿಯವಾಗಿ ಭಾಗಿಯಾಗಿದ್ದರು. ಹಾಗಾದರೆ ಆಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಏನು ಮಾಡುತ್ತಿದ್ದರು? ಇವರಿಗೆ ಈ ವಿಚಾರ ಗೊತ್ತಿರಲಿಲ್ಲವೇ? ಅವರದೇ ಸರ್ಕಾರ ಏನೆಲ್ಲ ಸಲಹೆಗಳನ್ನು ಕೊಟ್ಟಿತ್ತು ಎಂಬುದನ್ನು ಒಮ್ಮೆ ಕಣ್ತೆರೆದು ನೋಡಲಿ ಎಂದು ಅಶ್ವತ್ಥನಾರಾಯಣ ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿಯ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಬಿಜೆಪಿ ಅಭಿವೃದ್ಧಿಪರ ವಿಚಾರದಲ್ಲಿ ರಾಜಕಾರಣ ಮಾಡಲ್ಲ ಎಂದ ಅವರು, ಪ್ರತಿಪಕ್ಷವಾಗಿ ಕಾಂಗ್ರೆಸ್ ಟೀಕೆ-ಟಿಪ್ಪಣಿ ಮಾಡುತ್ತಿದೆ. ಸರ್ಕಾರಕ್ಕೆ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದರು.

ವಿಚಾರ ಸಂಕಿರಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ನಾಗೇಶ್, ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಸಮಿತಿ ಸದಸ್ಯ .ಎಂ.ಕೆ.ಶ್ರೀಧರ್, ಶಿಕ್ಷಣ ತಜ್ಞ ಗುರುರಾಜ ಕರ್ಜಗಿ, ಸಂಸದ ಪಿ.ಸಿ.ಮೋಹನ್, ಬಿಜೆಪಿ ಸೆಂಟ್ರಲ್ ಘಟಕದ ಅಧ್ಯಕ್ಷ ಮಂಜುನಾಥ ಹಾಜರಿದ್ದರು.

Share This Article
Leave a Comment

Leave a Reply

Your email address will not be published. Required fields are marked *