ಮಹಾನಗರ ಪಾಲಿಕೆ ಪೌರ ಕಾರ್ಮಿಕರಿಗೆ ಸಚಿವ ಶೆಟ್ಟರ್ ಸನ್ಮಾನ

Public TV
1 Min Read

– ಸೋಮವಾರದಿಂದ ಹುಬ್ಬಳ್ಳಿಯಲ್ಲಿ ಲಾಕ್‍ಡೌನ್ ಸಡಿಲಿಕೆ

ಹುಬ್ಬಳ್ಳಿ: ಕೊರೊನಾ ವೈರಸ್ ವಿರುದ್ಧ ಹೋರಾಟದಲ್ಲಿ ನಿರತರಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪೌರ ಕಾರ್ಮಿಕರಿಗೆ ಸಚಿವ ಜಗದೀಶ್ ಶೆಟ್ಟರ್ ಅವರು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ಜಗದೀಶ್ ಶೆಟ್ಟರ್ ಅವರು ವಿದ್ಯಾನಗರದ ಗಣಪತಿ ದೇವಸ್ಥಾನ ಬಳಿ ಪೌರ ಕಾರ್ಮಿಕರಿಗೆ ಗುಲಾಬಿ ಹೂವು ನೀಡಿ, ಅಗತ್ಯ ಸಾಮಗ್ರಿಗಳ ಕಿಟ್ ವಿತರಿಸುವ ಮೂಲಕ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸೋಮವಾರದಿಂದ ಹುಬ್ಬಳ್ಳಿಯಲ್ಲಿ ಲಾಕ್‍ಡೌನ್ ಸಡಿಲಿಕೆ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸೀಲ್‍ಡೌನ್ ಪ್ರದೇಶ ಹೊರತುಪಡಿಸಿ ಆರ್ಥಿಕ ಚಟುವಟಿಕೆ ನಡೆಸಲು ಅನುಮತಿ ನೀಡಲಾಗಿದೆ ಎಂದರು.

ಹುಬ್ಬಳ್ಳಿ ನಗರ ಹೊರತುಪಡಿಸಿ ಧಾರವಾಡ ಜಿಲ್ಲೆಯಾದ್ಯಂತ ಈಗಾಗಲೇ ಆರ್ಥಿಕ ಚಟುವಟಿಕೆ ಆರಂಭವಾಗಿದೆ. ಹುಬ್ಬಳ್ಳಿಯ ಸೀಲ್‍ಡೌನ್ ಪ್ರದೇಶ ಬಿಟ್ಟು ಉಳಿದೆಡೆ ವಾಣಿಜ್ಯ, ವಹಿವಾಟು ನಡೆಸಲು ಅನುಮತಿ ನೀಡಿದ್ದೇವೆ. ಶನಿವಾರ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಲಾಕ್‍ಡೌನ್ ಸಡಿಲಿಕೆ ಅವಕಾಶವನ್ನು ಜನತೆ ಎಚ್ಚರಿಕೆಯಿಂದ ಬಳಸಿಕೊಳ್ಳಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸದಿದ್ದರೆ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡ ಹಾಕಲಾಗುತ್ತದೆ. ಶಾಪಿಂಗ್ ಮಾಲ್, ಬಾರ್, ರೆಸ್ಟೊರೆಂಟ್, ಜಿಮ್, ಧಾರ್ಮಿಕ ಚಟುವಟಿಕೆ, ಸಭೆ, ಸಮಾರಂಭ ನಿರ್ಬಂಧಗಳು ಮುಂದುವರಿಯಲಿದೆ ಎಂದು ಸಚಿವ ಶೆಟ್ಟರ್ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *