ದೇವೇಗೌಡರ ವಿಕೆಟ್ ಉರುಳುತ್ತೆ ಎಂದ ಪ್ರೀತಮ್ ಗೌಡ ವಿರುದ್ಧ ಪ್ರತಿಭಟನೆ

Public TV
1 Min Read

– ಮನೆಗೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ಕಾರ್ಯಕರ್ತರು

ಹಾಸನ: ಆಪರೇಷನ್ ಕಮಲದ ಆಡಿಯೋದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ವಿಕೆಟ್ ಉರುಳುತ್ತೆ ಎಂದು ಹೇಳಿದ್ದ ಬಿಜೆಪಿಯ ಹಾಸನ ಶಾಸಕ ಪ್ರೀತಮ್‍ಗೌಡ ಮನೆಗೆ ಕಲ್ಲು ಎಸೆದು ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ಷೇತ್ರದ ಅಭಿವೃದ್ಧಿಯನ್ನು ಬಿಟ್ಟು ಮಾಜಿ ಪ್ರಧಾನಿ ದೇವೇಗೌಡ ಅವರ ಬಗ್ಗೆ ಇಲ್ಲ ಸಲ್ಲದ ಹೇಳಿಕೆ ನೀಡಿದ್ದಾರೆ. ಒಬ್ಬ ಹಿರಿಯ ನಾಯಕನ ಕುರಿತು ಅಸಭ್ಯವಾಗಿ ಮಾತನಾಡುವುದು ಸರಿಯಲ್ಲ. ಶಾಸಕ ಪ್ರೀತಮ್‍ಗೌಡ ಮನೆಯಿಂದ ಹೊರ ಬಂದು ಕ್ಷಮೆ ಕೇಳಬೇಕು ಎಂದು ಪ್ರತಿಭಟನಾ ನಿರತ ಜೆಡಿಎಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಶಾಸಕ ಪ್ರೀತಮ್‍ಗೌಡ ವಿರುದ್ಧ ಘೋಷಣೆ ಕೂಗುತ್ತಿದ್ದಾಗ ಬಿಜೆಪಿ ಶಾಸಕರು ಅಲ್ಲಿಗೆ ಬಂದಿದ್ದಾರೆ. ಈ ವೇಳೆ ಎರಡೂ ಪಕ್ಷಗಳ ಕಾರ್ಯಕರ್ತರ ಮಧ್ಯೆ ಮಾತಿಗೆ ಮಾತು ಬೆಳೆದು ಗಲಾಟೆ ಮಾಡಿಕೊಂಡಿದ್ದಾರೆ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಲು ಯತ್ನಿಸಿದ್ದಾರೆ. ಆದರೂ ಎರಡೂ ಪಕ್ಷಗಳು ಕಾರ್ಯಕರ್ತರು ಪರಸ್ಪರ ವಾಗ್ದಾಳಿ ನಡೆಸಿ ತಳ್ಳಾಡಿದ್ದಾರೆ.

ಪ್ರೀತಮ್‍ಗೌಡ ಹೇಳಿದ್ದೇನು?:
ಸೂರ್ಯ ಚಂದ್ರ ಇರುವವರೆಗೂ ರಾಷ್ಟ್ರೀಯ ಪಕ್ಷ ದೇಶದಲ್ಲಿ ಇರುತ್ತದೆ. ಮಾಜಿ ಪ್ರಧಾನಿ ದೇವೇಗೌಡರ ವಿಕೆಟ್ ಹೋಗುತ್ತೆ. ಸಿಎಂ ಕುಮಾರಸ್ವಾಮಿ ಆರೋಗ್ಯವೂ ಸರಿಯಿಲ್ಲ. ಇದರಿಂದಾಗಿ ಜೆಡಿಎಸ್ ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತದೆ. ಮೈತ್ರಿ ಸರ್ಕಾರ ಈಗಂತೂ ಬಿದ್ದರೆ ಸಾಕು ಎನ್ನುವಂತಿದೆ. ನನಗೂ ಈಗ 35-36ನೇ ವಯಸ್ಸು, ಶಾಸಕನಾಗಿ ಇದ್ದೇನೆ. ನಿನಗೆ 30 ವರ್ಷವಾಗಿದೆ. ಇನ್ನೂ 40 ವರ್ಷ ರಾಜಕಾರಣ ಮಾಡಬೇಕು. ಎಲ್ಲಾ ಒಟ್ಟಿಗೆ ಇರೋಣ ಎಂದು ಅನಾಮಿಕ ವ್ಯಕ್ತಿಯ ಜೊತೆಗೆ ಫೋನಿನಲ್ಲಿ ಪ್ರೀತಮ್‍ಗೌಡ ಮಾತನಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *